ಸಿಎಂ ಉತ್ತರಕ್ಕೆ ಅತೃಪ್ತಿ: ಬಿಜೆಪಿ-ಜೆಡಿಎಸ್ ಸದಸ್ಯರು ಸಭಾತ್ಯಾಗ

ಬೆಂಗಳೂರು: ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಉತ್ತರ ತೃಪ್ತಿದಾಯಕವಾಗಿಲ್ಲ ಎಂದು ಆರೋಪಿಸಿ, ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಸಭಾತ್ಯಾಗ ಮಾಡಿ ಹೊರನಡೆದ ಪ್ರಸಂಗ ನಡೆಯಿತು.
ಮಂಗಳವಾರ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳು ಸೇರಿದಂತೆ ರಾಜ್ಯಪಾಲರ ಭಾಷಣವನ್ನು ಸಮರ್ಥಿಸಿಕೊಂಡು ಉತ್ತರಿಸುತ್ತಿದ್ದರು. ಈ ವೇಳೆ ಬಿಜೆಪಿ ಸದಸ್ಯರು, ಮುಖ್ಯಮಂತ್ರಿಯವರು ನೀಡುವ ಉತ್ತರ ಸಮಂಜಸವಾಗಿಲ್ಲ. ರಾಜ್ಯಪಾಲರ ಭಾಷಣಕ್ಕೆ ಪೂರಕವಾಗಿ ಉತ್ತರ ನೀಡುವ ಬದಲು ರಾಜಕೀಯ ಭಾಷಣ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷಗಳ ಸದಸ್ಯರು ದೂರಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ‘ಈ ಸರಕಾರ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡಿಲ್ಲ. ರೈತರಿಗೆ ಬೆಳೆ ಪರಿಹಾರ ಧನ ಸಮರ್ಪಕವಾಗಿ ನೀಡುತ್ತಿಲ್ಲ. ಅಲ್ಲದೆ, ಕೇಂದ್ರ ಸರಕಾರದ ವಿರುದ್ಧ ಆರೋಪ ಮಾಡುತ್ತಾ ಪ್ರತಿಪಕ್ಷಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಉತ್ತರ ನೀಡುತ್ತಿರುವುದು ನಮಗೆ ತೃಪ್ತಿ ತಂದಿಲ್ಲ’ ಎಂದು ಹೇಳಿ ಸಭಾತ್ಯಾಗ ಮಾಡಿದರು. ಈ ವೇಳೆ ಬಿಜೆಪಿ ಸದಸ್ಯರು ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಎಲ್ಲ ಸುಳ್ಳು ಎಂದು ಹೇಳಿ ಹೊರನಡೆದರು. ಬಳಿಕ ಜೆಡಿಎಸ್ ಸದಸ್ಯರೂ ಅವರನ್ನು ಹಿಂಬಾಲಿಸಿದರು.
ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾಪಿಸಿ, ‘ಬಿಜೆಪಿ ಸದಸ್ಯರಿಗೆ ನಾಚಿಕೆಯಾಗಬೇಕು. ಕೇಂದ್ರ ಸರಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ. ಕೇಂದ್ರದಿಂದ ಬರಪರಿಹಾರಕ್ಕೆ ಸಂಬಂಧಿಸಿದಂತೆ ಇದುವರೆಗೂ ಒಂದು ರೂಪಾಯಿ ಹಣವನ್ನೂ ಬಿಡುಗಡೆ ಮಾಡಿಲ್ಲ. ನಾವು ಕೊಟ್ಟ ಮನವಿ ಪತ್ರಗಳಿಗೆ ಸಂಬಂಧಿಸಿದಂತೆ ಒಂದು ಸಭೆಯನ್ನೂ ನಡೆಸಿಲ್ಲ’ ಎಂದು ಟೀಕಿಸಿದರು.
ಅಂಗೀಕಾರ: ‘ನಂತರ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ವಿಧಾನ ಮಂಡಲ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಮಾಡಿದ ಭಾಷಣಕ್ಕೆ ಕೃತಜ್ಞತಾ ಪೂರಕ ವಂದನೆಗಳನ್ನು ಸಲ್ಲಿಸುವ ನಿರ್ಣಯವನ್ನು ಮುಖ್ಯಮಂತ್ರಿ ಮಂಡಿಸಿದರು. ಆಗ ಸ್ಪೀಕರ್ ಯು.ಟಿ.ಖಾದರ್ ಅವರು ಧ್ವನಿಮತದ ಮೂಲಕ ನಿರ್ಣಯಕ್ಕೆ ಅಂಗೀಕಾರ ದೊರಕಿಸಿಕೊಟ್ಟರು.







