ರೈಲು ನಿಲ್ದಾಣದಲ್ಲಿ ರಾಮಭಕ್ತರ ಅವಹೇಳನ ಪ್ರಕರಣ: ಪರಿಷತ್ತಿನಲ್ಲಿ ಗದ್ದಲ
ಬೆಂಗಳೂರು : ಹೊಸಪೇಟೆಯ ರೈಲು ನಿಲ್ದಾಣದಲ್ಲಿ ಅಯೋಧ್ಯೆಧಾಮ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ರಾಮಭಕ್ತರನ್ನು ಅವಹೇಳನ ಮಾಡಿದ ಪ್ರಕರಣ ವಿಧಾನ ಪರಿಷತ್ತಿನಲ್ಲಿ ಗದ್ದಲಕ್ಕೆ ಕಾರಣವಾಯಿತು.
ಶುಕ್ರವಾರ ವಿಧಾನ ಪರಿಷತ್ತಿನ ಕಲಾಪ ಆರಂಭವಾದ ಕೂಡಲೇ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ವಿಷಯ ಪ್ರಸ್ತಾಪಿಸಿ, ‘ಅಯೋಧ್ಯೆಗೆ ಹೋಗಿ ಬರುತ್ತಿದ್ದ ರಾಮಭಕ್ತರಿಗೆ ದುಷ್ಕರ್ಮಿಗಳು ಧಮ್ಕಿ ಹಾಕಿದ್ದಾರೆ. ಬೆಂಕಿ ಹಚ್ಚುತ್ತೇವೆ ಎನ್ನುತ್ತಾರೆ. ಅಂತಹ ಆರೋಪಿಗಳನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದಾರೆ ಎಂದು ದೂರಿದರು.
ಪ್ರತಿಪಕ್ಷ ಸಚೇತಕ ರವಿಕುಮಾರ್ ಮಾತನಾಡಿ, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶ್ರೀರಾಮಭಕ್ತರನ್ನು ಹೀಯಾಳಿಸಿ ಧಮ್ಕಿ ಹಾಕಿರುವುದನ್ನು ನೋಡಿದರೆ, ಇದು ನಿಯೋಜಿತ ಕೃತ್ಯವಾಗಿದೆ. ಇದರ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯಿಸಿದರು.
ಪ್ರಶ್ನೋತ್ತರ ಅವಧಿಯಲ್ಲಿ ಈ ಬಗ್ಗೆ ಚರ್ಚೆ ನಡೆಸಲು ಸಾಧ್ಯವೇ ಎಂದು ಆಡಳಿತ ಪಕ್ಷದ ಸದಸ್ಯರು ಪ್ರಶ್ನಿಸಿದಾಗ ಆಡಳಿತ ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ಉಂಟಾಗಿ ಸದನದಲ್ಲಿ ಗದ್ದಲ ಗಲಾಟೆ ಉಂಟಾಯಿತು.
ಯಾವುದೇ ನೊಟೀಸ್ ನೀಡದೆ ಹೀಗೆ ವಿಷಯ ಪ್ರಸ್ತಾಪ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಸದಸ್ಯರು ಗಲಾಟೆ ನಡೆಸಿದಾಗ ಮಧ್ಯ ಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಶ್ನೋತ್ತರ ಅವಧಿ ಬಳಿಕ ಶೂನ್ಯ ವೇಳೆಯಲ್ಲಿ ಚರ್ಚೆಗೆ ಅವಕಾಶ ಕೊಡುವುದಾಗಿ ಸಭಾಪತಿ ತಿಳಿಸಿ ವಿಷಯಕ್ಕೆ ತೆರೆ ಎಳೆದರು.