‘ತಿರಂಗ ರ್ಯಾಲಿ’ಗೆ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ರಾಮೇಶ್ವರ ಕೆಫೆಯಲ್ಲಿನ ಸ್ಫೋಟ ಪ್ರಕರಣ ಖಂಡಿಸಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ‘ತಿರಂಗ ರ್ಯಾಲಿ’ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದ್ದು, ಪೊಲೀಸರು ಬಿಜೆಪಿ ಮುಖಂಡರು ಸೇರಿದಂತೆ ಹಲವು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸೋಮವಾರ ಇಲ್ಲಿನ ಪುರಭವನದಿಂದ ಫ್ರೀಡಂ ಪಾರ್ಕ್ ವರೆಗೆ ಬಿಜೆಪಿ ಯುವ ಮೋರ್ಚಾದಿಂದ ತಿರಂಗ ರ್ಯಾಲಿಗೆ ಸಿದ್ಧತೆ ನಡೆಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಯುವ ಮೋರ್ಚಾ ಮುಖಂಡರನ್ನು ವಶಕ್ಕೆ ಪಡೆಯಲು ಮುಂದಾದ ವೇಳೆ, ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ತೀವ್ರ ವಾಗ್ವಾದ ನಡೆಯಿತು.
ಪೊಲೀಸ್ ದೌರ್ಜನ್ಯ ಆರೋಪ: ದೇಶ ಮೊದಲು ಚಿಂತನೆಯಡಿ ‘ತಿರಂಗಾ ರ್ಯಾಲಿ’ ಹಮ್ಮಿಕೊಳ್ಳುವುದರಲ್ಲಿ ತಪ್ಪೇನಿದೆ?. ಆದರೆ, ಇಲ್ಲಿ ಯುವ ಮೋರ್ಚಾ ಕಾರ್ಯಕರ್ತರು ತಂದ ರಾಷ್ಟ್ರಧ್ವಜವನ್ನು ಕಸಿದುಕೊಂಡು ತುರ್ತು ಪರಿಸ್ಥಿತಿ ಹೇರಿದಂತೆ ಪೊಲೀಸರು ವರ್ತಿಸಿದ್ದಾರೆ ಎಂದು ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ಆರೋಪಿಸಿದರು.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗುತ್ತಾರೆ. ಬಳಿಕ ಬಾಂಬ್ ಸ್ಫೋಟವೂ ಆಗಿದೆ. ಪೊಲೀಸರ ಈ ದೌರ್ಜನ್ಯ ಖಂಡನಾರ್ಹ. ಮೋರ್ಚಾ ಕಾರ್ಯಕರ್ತರು ರಾಷ್ಟ್ರಧ್ವಜ ಹಿಡಿದುಕೊಳ್ಳಲು ಅವಕಾಶ ಕೊಡದೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಸರಕಾರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.
ಈ ವೇಳೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಶಾಸಕ ಕೆ.ಸಿ.ರಾಮಮೂರ್ತಿ, ಉತ್ತರ ಜಿಲ್ಲಾಧ್ಯಕ್ಷ ಹರೀಶ್, ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಯುವ ಮೋರ್ಚಾ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.