ಎಫ್ಎಸ್ಎಲ್ ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ
ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿದ ಮೂವರನ್ನು ಬಂಧಿಸಿರುವುದು ಸರಿ. ಆದರೆ, ಎಫ್ಎಸ್ಎಲ್ ವರದಿಯನ್ನು ಯಾಕಿನ್ನೂ ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.
ಬುಧವಾರ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಂಧಿತರು ಯಾರೋ ಚೇಲಾಗಳಿರಬೇಕು ಅಂದುಕೊಂಡಿದ್ದೆವು. ಅವರಿಗೆ ರಾಹುಲ್ ಗಾಂಧಿಯವರ ಸಂಪರ್ಕ ಇರುವುದು ನಮಗೆ ಗೊತ್ತಿರಲಿಲ್ಲ. ಅವರ ಜೊತೆಗಿರುವ, ತಬ್ಬಿಕೊಂಡಿರುವ ಫೋಟೊ ಮಾಧ್ಯಮ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಎಂದು ಟೀಕಿಸಿದರು.
ಅಪ್ಪುಗೆಯ ನಂಟೂ ಇರುವ ಕಾರಣ ಎಫ್ಎಸ್ಎಲ್ ವರದಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿಲ್ಲವೇನೋ?. ಕೂಡಲೇ ಎಫ್ಎಸ್ಎಲ್ ವರದಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಬೇಕು. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಒಬ್ಬೊಬ್ಬ ಸಚಿವರು ಒಂದೊಂದು ರೀತಿ ಹೇಳಿಕೆ ಕೊಡುತ್ತಿದ್ದಾರೆ. ಕೆಲವರು ಬಾಂಬ್ ಇಟ್ಟವರು ಬಿಜೆಪಿಯವರೇ ಇರಬಹುದು ಎಂದು ಹೇಳಿಕೆ ಕೊಟ್ಟಿದ್ದಾರೆ. ಇದೊಂದು ಹಳೆಯ ಕಾಯಿಲೆ ಎಂದು ಸಿ.ಟಿ.ರವಿ ವಾಗ್ದಾಳಿ ನಡೆಸಿದರು.