ಬೆಂಗಳೂರು | ಅವಧಿ ಮೀರಿ ಗರ್ಭಿಣಿಯ ವಿಚಾರಣೆ : ಇಲಾಖಾ ತನಿಖೆಗೆ ಸೂಚನೆ

ಸಾಂದರ್ಭಿಕ ಚಿತ್ರ | PC: freepik.com
ಬೆಂಗಳೂರು : ಗರ್ಭಿಣಿ ಮಹಿಳೆಯನ್ನು ಅವಧಿ ಮೀರಿ ಶೇಷಾದ್ರಿಪುರಂ ಠಾಣೆಯಲ್ಲಿ ಇರಿಸಿಕೊಂಡ ಆರೋಪ ಪ್ರಕರಣದ ಕುರಿತು ಇಲಾಖಾ ತನಿಖೆ ಕೈಗೊಂಡು ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಶ್ ತಿಳಿಸಿದ್ದಾರೆ.
ಇಲ್ಲಿನ ಕೆ.ಸಿ.ಜನರಲ್ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು ಪತಿಯೊಂದಿಗೆ ಮಹಿಳೆಯೊಬ್ಬರು ಬಂದಿದ್ದರು. ಆಧಾರ್ ಕಾರ್ಡ್ ಪರಿಶೀಲನೆ ವೇಳೆ ಆಕೆಗೆ ಪ್ರಸ್ತುತ 18 ವರ್ಷ 1 ತಿಂಗಳು ಮತ್ತು 20 ದಿನ ಎಂಬುದು ವೈದ್ಯಕೀಯ ಸಿಬ್ಬಂದಿಯ ಗಮನಕ್ಕೆ ಬಂದಿತ್ತು. ಆದರೆ ಈಗಾಗಲೇ ಆಕೆ 4 ತಿಂಗಳ ಗರ್ಭಿಣಿಯಾಗಿರುವುದರ ಕುರಿತು ಆಸ್ಪತ್ರೆ ಸಿಬ್ಬಂದಿ ಕೂಡಲೇ ಶೇಷಾದ್ರಿಪುರಂ ಠಾಣೆಗೆ ಮಾಹಿತಿ ನೀಡಿದ್ದರು.
ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಹಿಳೆ ಮತ್ತು ಆಕೆಯ ಪತಿಯನ್ನು ಠಾಣೆಗೆ ಕರೆತಂದ ಪೊಲೀಸರು, ರಾತ್ರಿ 10 ಗಂಟೆವರೆಗೆ ಠಾಣೆಯಲ್ಲಿಯೇ ಇರಿಸಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಕೇಂದ್ರ ವಿಭಾಗದ ಡಿಸಿಪಿ ಹಾಗೂ ಶೇಷಾದ್ರಿಪುರಂ ಉಪವಿಭಾಗದ ಎಸಿಪಿಯವರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.





