ಕೆಆರ್ಎಸ್ನಲ್ಲಿ ಶಾಶ್ವತವಾಗಿ ‘ಕಾವೇರಿ ಆರತಿ’ : ವಿ.ರಾಮ್ ಪ್ರಸಾತ್ ಮನೋಹರ್

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ ಕೆಆರ್ಎಸ್ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ ಅದನ್ನು ಧಾರ್ಮಿಕ, ಸಾಂಸ್ಕೃತಿಕ-ಪ್ರವಾಸೋದ್ಯಮ ಕಾರ್ಯಕ್ರಮವಾಗಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಹಾಗೂ ಕಾವೇರಿ ಆರತಿ ಸಮಿತಿಯ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.
ಬುಧವಾರ ನಗರದಲ್ಲಿರುವ ಬೆಂಗಳೂರು ಜಲಮಂಡಳಿ ಕಚೇರಿಯ ಸಭಾಂಗಣದಲ್ಲಿ ಕಾವೇರಿ ಆರತಿ ಕುರಿತಂತೆ ಸರಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯ ಮೊದಲ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾವೇರಿ ಆರತಿಯನ್ನು ದಸರಾ ಮೊದಲ ದಿನ (ಅ.2) ಆರಂಭಿಸುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಸಂಘಟಿತವಾಗಿ ಕಾರ್ಯನಿರ್ವಹಿಸಲಿದ್ದೇವೆ. ಉಪ ಮುಖ್ಯಮಂತ್ರಿಯ ನಿರ್ದೇಶನದಂತೆ ದಸರಾ ಸಂದರ್ಭದಲ್ಲಿ ಪ್ರತಿನಿತ್ಯ ಮತ್ತು ನಂತರದ ದಿನಗಳಲ್ಲಿ ವಾರಕ್ಕೆ ಮೂರು ದಿನ ಶುಕ್ರವಾರ, ಶನಿವಾರ ಹಾಗೂ ರವಿವಾರ ಕಾವೇರಿ ಆರತಿ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅವರು ಹೇಳಿದರು.
ನಾಡಿಗೆ ಅನ್ನ, ನೀರು ನೀಡುವ ಕಾವೇರಿ ತಾಯಿ ಭಾವನಾತ್ಮಕ ವಿಚಾರ, ಇದರ ಜೊತೆಯಲ್ಲಿ ನಾಡಿನ ಸಾಂಸ್ಕೃತಿಕ, ಪ್ರವಾಸೋದ್ಯಮ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತದೆ. ಸ್ಥಳೀಯರಿಗೆ ಉದ್ಯೋಗಕ್ಕೂ ಅವಕಾಶ ಕಲ್ಪಿಸುವುದಕ್ಕೆ ಆದ್ಯತೆ ನೀಡಬೇಕಾಗಿದೆ. ಇತ್ತೀಚೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾವೇರಿ ಆರತಿಗೆ 92ಕೋಟಿ ರೂ. ವೆಚ್ಚ ಮಾಡಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಆರತಿಗೆ ಬರುವವರಿಗೆ ಮೂಲ ಸೌಕರ್ಯ, ರಸ್ತೆಗಳ ಅಭಿವೃದ್ಧಿ, ಲೇಸರ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.
ನದಿ ಮಧ್ಯೆ ತೇಲುವ ವೇದಿಕೆ: ಕಾವೇರಿ ಆರತಿಗೆ ಕೆಆರ್ಎಸ್ ಅಣೆಕಟ್ಟಿನ ಬೃಂದಾವನದಲ್ಲಿರುವ ಜಾಗದಲ್ಲಿ ನದಿ ಮಧ್ಯೆ ತೇಲುವ ಸೇತುವೆ ರಚಿಸುವ ನಿಟ್ಟಿನಲ್ಲಿ ವಾಸ್ತುಶಿಲ್ಪಿಗಳಿಗೆ ತಿಳಿಸಲಾಗಿದೆ. ಸುತ್ತಲೂ ಜನರು ಕುಳಿತು ನೋಡಲು ವಿವಿಧ ಅಂತಸ್ತಿನ ಗ್ಯಾಲರಿ ಸಿದ್ಧಪಡಿಸಲಾಗುವುದು. ಗ್ಯಾಲರಿ ಕೆಳಗೆ ಶೌಚಾಲಯ ಮತ್ತು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು ಜತೆಗೆ ಆಹಾರದ ವ್ಯವಸ್ಥೆಗೆ ಅಗತ್ಯವಿರುವ ಸ್ಟಾಲ್ಗಳನ್ನು ನಿರ್ಮಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಸಂಜೆ 6 ರಿಂದ 6.30ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ, 6.30 ರಿಂದ 7 ಗಂಟೆಯವರೆಗೆ ಕಾವೇರಿ ಆರತಿ, ಬಳಿಕ ದೊಡ್ಡ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ, ಸಂಗೀತ ಕಾರಂಜಿ, ಲೇಸರ್ ಪ್ರದರ್ಶನ, ಪಟಾಕಿ ಪ್ರದರ್ಶನಗಳನ್ನು ಆಯೋಜಿಸುವ ಕುರಿತು ಚರ್ಚಿಸಲಾಗಿದೆ. ಉಪ ಮುಖ್ಯಮಂತ್ರಿ ಜತೆ ಚರ್ಚಿಸಿ ಇದನ್ನು ಅಂತಿಮಗೊಳಿಸಲಾಗುವುದು ಎಂದು ರಾಮ್ ಪ್ರಸಾತ್ ಮನೋಹರ್ ಹೇಳಿದರು.
ಸಾಂಸ್ಕೃತಿಕ ಕಾರ್ಯಕಮದಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಇದರ ಜತೆಗೆ ಸ್ಥಳೀಯ ಗುಡಿ ಕೈಗಾರಿಕೆಗಳು, ಸಾವಯವ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಹೊಟೇಲ್ ಉದ್ಯಮದ ಬೆಳವಣಿಗೆಗೂ ಯೋಜನೆ ರೂಪಿಸಲಾಗುತ್ತದೆ. ಒಟ್ಟಾರೆ ಕಾವೇರಿ ಆರತಿಯನ್ನು ಹೊಸ ಪ್ರಯೋಗವಾಗಿ ವಿಭಿನ್ನತೆ ಮತ್ತು ವಿಜೃಂಬಣೆಯಿಂದ ಜನಪರ ಕಾರ್ಯಕ್ರಮವಾಗಿ ರೂಪಿಸಲಾಗುವುದು ಎಂದು ಅವರು ತಿಳಿಸಿದರು.
ಟಿಕೆಟಿಂಗ್ ವ್ಯವಸ್ಥೆ: ಕಾವೇರಿ ಆರತಿಯನ್ನು ಶಾಶ್ವತವಾಗಿ ಆಯೋಜಿಸುತ್ತಿರುವುದರಿಂದ ಸಾಕಷ್ಟು ವೆಚ್ಚ ಮಾಡಬೇಕಾಗುತ್ತದೆ. ಹೀಗಾಗಿ ಟಿಕೆಟಿಂಗ್ ವ್ಯವಸ್ಥೆ ಮಾಡಲಾಗುತ್ತದೆ. ಈ ಕುರಿತು ಉಪಮುಖ್ಯಮಂತ್ರಿ ಜತೆ ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಇದರ ಜತೆಗೆ ಒಂದು ಪ್ರದೇಶದಲ್ಲಿ ಜನರು ಉಚಿತವಾಗಿಯೂ ಕಾವೇರಿ ಆರತಿ ವೀಕ್ಷಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.
ಕಾವೇರಿ ಆರತಿ ವೀಕ್ಷಿಸಲು ಯಾವುದೇ ಸಮಸ್ಯೆಯಾಗದಂತೆ ಪ್ರತಿ ದಿನ 8 ರಿಂದ 10 ಸಾವಿರ ಮಂದಿ ಕುಳಿತು ನೋಡಲು ವ್ಯವಸ್ಥೆ ಮಾಡಲಾಗುವುದು. ಆರಂಭಿಕವಾಗಿ ಮಹಾಕುಂಭ ಮೇಳದಲ್ಲಿ ಮಾಡಿದಂತೆ ಟೆಂಟ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಯೋಚಿಸಲಾಗಿದೆ. ಹಂತ ಹಂತವಾಗಿ ಗ್ಯಾಲರಿಯನ್ನು ವಿಸ್ತರಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಅವರು ಹೇಳಿದರು.
ವಿಶೇಷ ಪ್ರವಾಸೋದ್ಯಮ ಪ್ಯಾಕೇಜ್: ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ಕಾವೇರಿ ಆರತಿ ಕೇವಲ ಒಂದು ಕಾರ್ಯಕ್ರಮವಾಗಿ ಮಾತ್ರ ನಡೆಯುವುದಿಲ್ಲ. ಬದಲಾಗಿ ಮಂಡ್ಯ, ಮೈಸೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿರಲಿದೆ. ಅದಕ್ಕಾಗಿ ಧಾರ್ಮಿಕ, ಸಾಂಸ್ಕೃತಿಕ, ಪರಿಸರ, ಅರಣ್ಯ ಮತ್ತಿತರ ಅಂಶಗಳನ್ನೊಳಗೊಂಡ ವಿಶೇಷ ಪ್ರವಾಸೋದ್ಯಮ ಪ್ಯಾಕೇಜ್ ರೂಪಿಸುವಂತೆ ಉಪಮಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ. ಈ ಕುರಿತು ಪ್ರವಾಸೋದ್ಯಮ ಇಲಾಖೆ ಜತೆ ಚರ್ಚಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಮಂಡ್ಯ ಜಿಲ್ಲಾಧಿಕಾರಿ, ಕಾವೇರಿ ನೀರಾವರಿ ನಿಗಮ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಮಂದಿನ ಸಭೆಯನ್ನು ಮಂಡ್ಯದಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು.