ಡಾ.ಹಂಪನಾಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ

ಡಾ.ಹಂಪ ನಾಗರಾಜಯ್ಯ
ಬೆಂಗಳೂರು : ಕನ್ನಡ ಜನಶಕ್ತಿ ಕೇಂದ್ರದ ವತಿಯಿಂದ ಕೊಡಮಾಡುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಹಿರಿಯ ಸಾಹಿತಿ ನಾಡೋಜ ಡಾ.ಹಂಪ ನಾಗರಾಜಯ್ಯ ಅವರು ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು 25ಸಾವಿರ ರೂ. ನಗದು, ಕಂಚಿನ ಫಲಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರಿಗೆ ಪ್ರತಿವರ್ಷ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಹಂಪನಾ ಎಂದೆ ಪ್ರಸಿದ್ಧರಾದ ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಗೌರವ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ತಮ್ಮ ಅವಧಿಯಲ್ಲಿ ಕನ್ನಡದ ಎಲ್ಲಾ ಕ್ಷೇತ್ರಗಳಿಗೆ ಸಂಬಂಧಿಸಿದ ವಿವಿಧ ಲೇಖಕರ ಸುಮಾರು 300 ಮೌಲಿಕ ಕೃತಿಗಳನ್ನು ಪ್ರಕಟಿಸಿದ್ದಾರೆ. ಕಸಾಪದ ಚಿನ್ನದ ಹಬ್ಬದ ನೆನಪಿಗಾಗಿ ಭವ್ಯ ಕಟ್ಟಡವನ್ನು ಅವರ ಅಧಿಕಾರ ಅವಧಿಯಲ್ಲಿ ಕಟ್ಟಿಸಿರುತ್ತಾರೆ. ಹಂಪನಾ ರವರು ಅರ್ಧ ಶತಮಾನಕ್ಕೂ ಹೆಚ್ಚುಕಾಲ ಕನ್ನಡ ಸಾಹಿತ್ಯ ಲೋಕದಲ್ಲಿ ಅವಿರತವಾಗಿ ದುಡಿದಿದ್ದು, 115ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದು, ಕನ್ನಡ ಜನಶಕ್ತಿ ಕೇಂದ್ರವು ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.
ಜೂ. 11ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾ. ಎನ್.ಸಂತೋಷ್ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡುತ್ತಾರೆ. ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕವಿ ಪಿ.ಮಲ್ಲಿಕಾರ್ಜುನಪ್ಪ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.





