ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತೆರೆಯುವುದಕ್ಕೆ ವಿರೋಧ: ಡಾ.ಬಿಳಿಮಲೆ

ಬೆಂಗಳೂರು : ರಾಜ್ಯಾದ್ಯಂತ 4,134 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯುವ ರಾಜ್ಯ ಸರಕಾರದ ನಿರ್ಧಾರಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಅವರು, ಸಂವಹನಕ್ಕಾಗಿ ತಾಯ್ನುಡಿಯನ್ನು ಹೊರತಾದ ಯಾವುದೇ ಭಾಷೆಗಳನ್ನು ಕಲಿಯುವುದು ತಪ್ಪಲ್ಲ, ಆದರೆ ಅಂತಹ ಪ್ರಯತ್ನಗಳು ನಮ್ಮ ಮಾತೃಭಾಷೆಯನ್ನೇ ಮೂಲೆಗುಂಪಾಗಿಸುವ ಕಾರ್ಯಕ್ಕೆ ಪ್ರಾಧಿಕಾರ ಸಾಕ್ಷಿಯಾಗಬಯಸುವುದಿಲ್ಲ ಎಂದು ಹೇಳಿದ್ದಾರೆ.
ನಾಡಿನ ಅಭಿವೃದ್ಧಿ ಎನ್ನುವುದು ಸಂಪೂರ್ಣವಾಗಿ ಅಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಅವಲಂಬಿಸಿದೆ. ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಸಾಂಸ್ಕೃತಿಕ ಬದುಕಿಗೆ ಕಲಿಕಾ ವ್ಯವಸ್ಥೆಯೇ ನಿರ್ಣಾಯಕ ಪಾತ್ರವನ್ನು ಹೊಂದಿರುತ್ತದೆ. ವಿಶ್ವದ್ಯಾಂತ ನಡೆಸಿರುವ ಅಧ್ಯಯನಗಳಲ್ಲಿ ಪ್ರಾರಂಭಿಕವಾಗಿ ತಾಯ್ನುಡಿಯನ್ನು ಪ್ರಭುತ್ವದ ಮಟ್ಟಕ್ಕೆ ಕಲಿಸುವುದೇ ಜ್ಞಾನಾರ್ಜನೆಯ ದೃಷ್ಠಿಯಿಂದ ಬುನಾದಿ ಎಂಬುದನ್ನು ನಿರೂಪಿಸಿವೆ ಎಂದು ಹೇಳಿದ್ದಾರೆ.
2013-18ರಲ್ಲಿ ಸರಕಾರವು ಮಕ್ಕಳ ಹಕ್ಕು ಕಾಯ್ದೆಯ ಪ್ರಕರಣ 29 (ಎಫ್)ಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಸದನಗಳಲ್ಲಿ ಮಂಡಿಸಿ ರಾಷ್ಟ್ರಪತಿಯವರ ಅಂಗೀಕಾರಕ್ಕೆ ಕಳುಹಿಸಿದ್ದು, ಅದರಂತೆ ಕನಿಷ್ಟ 8ನೇ ತರಗತಿವರೆಗೆ ಶಿಕ್ಷಣ ಮಾಧ್ಯಮ ಮಾತೃಭಾಷೆಯಲ್ಲಿರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರ 2017ರಲ್ಲಿ ಸಲ್ಲಿಸಿರುವ ಸರಕಾರಿ ಶಾಲೆಗಳ ಸಬಲೀಕರಣ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು. ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸಲು ರೂಪಿಸಿರುವ ಕನ್ನಡ ಕಲಿಕಾ ಅಧಿನಿಯಮ 2015ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕು. ಅಲ್ಲದೇ, ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ಒಂದು ಪ್ರತ್ಯೇಕ ಪ್ರಾಧಿಕಾರವನ್ನು ರಚಿಸಿ ಸರಕಾರವು ಈ ಶಾಲೆಗಳ ಬೆಂಬಲಕ್ಕೆ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.
ದ್ವಿಭಾಷಾ ನೀತಿ ಅನುಷ್ಠಾನಕ್ಕೆ ಪ್ರಯತ್ನ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದಲ್ಲಿ ದ್ವಿಭಾಷಾ ನೀತಿಯ ಅಗತ್ಯವನ್ನು ಪ್ರತಿಪಾದಿಸಿದ್ದು, ತನ್ನ ನಿರ್ಧಾರವನ್ನು ಎಲ್ಲ ವೇದಿಕೆಗಳಲ್ಲಿ ಸ್ಪಷ್ಟಪಡಿಸಿದೆ. ರಾಜ್ಯ ಶಿಕ್ಷಣ ನೀತಿ ನಿರೂಪಣಾ ಪ್ರಕ್ರಿಯೆಯಲ್ಲಿಯೂ ಪ್ರಾಧಿಕಾರವು ಇದೇ ಸಲಹೆಯನ್ನು ನೀಡಿದ್ದು, ಜುಲೈ ಅಂತ್ಯಕ್ಕೆ ಸಲ್ಲಿಕೆಯಾಗುವ ಶಿಕ್ಷಣ ನೀತಿಯ ವರದಿಯನ್ನು ಕಾಯುತ್ತಿದ್ದೇವೆ. ವರದಿಯ ಸಂಪೂರ್ಣ ಅಧ್ಯಯನವನ್ನು ನಡೆಸಿ ರಾಜ್ಯದಲ್ಲಿ ದ್ವಿಭಾಷಾ ನೀತಿಯ ಅನುಷ್ಠಾನಕ್ಕೆ ಸಾರ್ವಜನಿಕ ಒಮ್ಮತವನ್ನು ಮೂಡಿಸುವಲ್ಲಿ ಪ್ರಾಧಿಕಾರವು ಪ್ರಾಮಾಣಿಕ ಪ್ರಯತ್ನವನ್ನು ಮಾಡಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.







