ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲು ಸಂತೋಷ್ ಲಾಡ್ ಸಲಹೆ

ಬೆಂಗಳೂರು: ಪಡಿತರ ಚೀಟಿ ರೀತಿಯಲ್ಲೆ ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಲಹೆ ನೀಡಿದ್ದಾರೆ.
ಈ ಸಂಬಂಧ ಧಾರವಾಡ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೃಷಿ ವಿಶ್ವವಿದ್ಯಾಲಯದ ಉಪ ಕುಲಪತಿಗಳು ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಪ್ರತಿಯೊಬ್ಬ ರೈತರಿಗೂ ಸರ್ವೆ ನಂಬರ್ ವಾರು ಬೆಳೆಯಬೇಕಾದ ಬೆಳೆ ಮತ್ತು ಅವಶ್ಯವಿರುವ ರಸಗೊಬ್ಬರಗಳನ್ನು ಪ್ರತ್ಯೇಕವಾಗಿ ರಸಗೊಬ್ಬರ ಚೀಟಿಯಲ್ಲಿ ನಮೂದಿಸಿ ವಿತರಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಧಾರವಾಡದಲ್ಲಿರುವ ಕೃಷಿ ವಿಶ್ವವಿದ್ಯಾಲಯವು ವಿವಿಧ ಬೆಳೆಗಳಿಗೆ ಸಂಬಂಧಿಸಿದ ಹಲವು ಸಂಶೋಧನೆಗಳನ್ನು ನಡೆಸುತ್ತಿದೆ. ಗ್ರಾಮಗಳಲ್ಲಿರುವ ರೈತರಿಗೆ ಅನುಕೂಲವಾಗುವಂತೆ ಪ್ರತಿ ರೈತರ ಸರ್ವೆ ನಂಬರ್ವಾರು ಬೆಳೆಗಳನ್ನು ಬೆಳೆಯಲು ಸೂಕ್ತ ಅಧ್ಯಯನ ನಡೆಸಿ ಶಿಫಾರಸು ಮಾಡುವುದು ಅನಿವಾರ್ಯವಾಗಿದೆ. ಇದರಿಂದ ರೈತರ ಬೇಡಿಕೆಗಳಾದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಅನುಪಾತವನ್ನು ಸರಿದೂಗಿಸಲು ಸಹಾಯವಾಗಲಿದೆ ಎಂದು ಅವರು ವಿವರಿಸಿದ್ದಾರೆ.
ರಸಗೊಬ್ಬರ ಚೀಟಿಯಲ್ಲಿ ಹಲವು ಅಂಶಗಳು ಒಳಗೊಂಡಿರಬೇಕು. ರೈತರ ಸರ್ವೆ ನಂಬರ್, ಜಮೀನಿನ ಮಣ್ಣಿನ ಫಲವತ್ತತೆಯ ಪರೀಕ್ಷಾ ವರದಿ, ಪರೀಕ್ಷಾ ವರದಿಯ ಅನುಗುಣವಾಗಿ ಬೆಳೆಯ ಬೇಕಾದ ಬೆಳೆ, ಶಿಫಾರಸು ಮಾಡಿದ ಬೆಳೆಗೆ ಬೇಕಾದ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರದ ವಿವರ ಹಾಗೂ ಶಿಫಾರಸಿಗೆ ಅನುಗುಣವಾಗಿ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರ ವಿವರಣೆ ಇರಬೇಕು ಎಂದು ಸಂತೋಷ್ ಲಾಡ್ ತಿಳಿಸಿದ್ದಾರೆ.
ಅನುಕೂಲಗಳು ಏನು?: ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರಸಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳುವುದರಿಂದ ಬಿತ್ತನೆಗೆ ಬೇಕಾದ ಬೀಜ, ರಸಗೊಬ್ಬರದ ಕೊರತೆ ಉಂಟಾಗುವುದಿಲ್ಲ. ಈ ಸಂಬಂಧ ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಧಾರವಾಡ ಜಿಲ್ಲೆಯ ಒಂದು ತಾಲೂಕಿನಲ್ಲಿ ಒಂದು ಹೋಬಳಿಯಲ್ಲಿ ಪ್ರಾಯೋಗಿಕವಾಗಿ ಈ ವಿಧಾನ ಅನುಸರಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲು ಕ್ರಮ ವಹಿಸಿ ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ.
ರೈತರು ಬೆಳೆಯುತ್ತಿರುವ ಬೆಳೆಗಳಿಗೂ ಹಾಗೂ ರಸಗೊಬ್ಬರದ ಬೇಡಿಕೆಗೂ ವ್ಯತ್ಯಾಸ ಉಂಟಾಗುತ್ತಿದೆ. ಒಂದೇ ರೀತಿಯ ಬೆಳೆ ಬೆಳೆಯುವುದು ಹೆಚ್ಚುತ್ತಿದೆ. ಹಲವು ಬಾರಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ದೊರಕುತ್ತಿಲ್ಲ. ಇದೆಲ್ಲಕ್ಕಿಂತ ಮಣ್ಣಿನ ಫಲವತ್ತತೆ ಕ್ಷೀಣಿಸುತ್ತಿದೆ. ಇದಕ್ಕೆಲ್ಲ ಪರಿಹಾರ ಎಂಬಂತೆ ರಸಗೊಬ್ಬರ ಚೀಟಿ ಸಹಕಾರಿಯಾಗಲಿದೆ ಎಂದು ಸಂತೋಷ್ ಲಾಡ್ ಅಭಿಪ್ರಾಯಪಟ್ಟಿದ್ದಾರೆ.







