ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಲಿ: ಕೆ.ವಿ.ಪ್ರಭಾಕರ್

ಬೆಂಗಳೂರು : ಮಾಧ್ಯಮಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಗಟ್ಟಿಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ "ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ" ವನ್ನು ಉದ್ಘಾಟಿಸಿ, ಪುರಸ್ಕೃತರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.
ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ್ದ ಭಾರತೀಯ ಪತ್ರಿಕೋದ್ಯಮ ಸಮಾಜವನ್ನು ಒಗ್ಗೂಡಿಸುವಲ್ಲಿ, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಸ್ವಾತಂತ್ರ್ಯಾ ಬಳಿಕ ಅಭಿವೃದ್ಧಿ ಪತ್ರಿಕೋದ್ಯಮ, ತನಿಖಾ ಪತ್ರಿಕೋದ್ಯಮದ ಮೂಲಕ ಸಮಾಜವನ್ನು ಎಚ್ಚರಿಸುವ ಹೊಣೆಗಾರಿಕೆಯನ್ನು ನಿರ್ವಹಿಸಿದ್ದವು. ಆದರೆ ಇಂದು ಅರೆಸತ್ಯ ಮತ್ತು ಸುಳ್ಳು ಸುದ್ದಿಗಳು ಭಾರತೀಯ ಪತ್ರಿಕೋದ್ಯಮದ ಈ ಮಹೋನ್ನತ ಘನತೆಯನ್ನು ಹಾಳುಗೆಡಹುವ ರೀತಿಯಲ್ಲಿ ಕೆಲಸ ಮಾಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.
ಪತ್ರಕರ್ತರೂ, ಸಂಪಾದಕರೂ ಆಗಿದ್ದ ಅಂಬೇಡ್ಕರ್ ಅವರು ಸಂಘಟನೆ ಮತ್ತು ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಸಂಘಟಕ ಧ್ವನಿ ಸರ್ಕಾರದ ಮತ್ತು ಸಮಾಜದ ಕಣ್ಣು ತೆರೆಸುತ್ತವೆ ಎಂದಿದ್ದರು. ಪತ್ರಿಕಾ ಸಂಘಟನೆಗಳು, ಪತ್ರಕರ್ತರ ಸಂಘಗಳು ಪ್ರಜಾಪ್ರಭುತ್ವ ಮತ್ತು ಮಾಹಿತಿ ಹಕ್ಕುಗಳ ರಕ್ಷಣೆಗೆ ಪ್ರಮುಖ ಅಸ್ತ್ರಗಳು ಎನ್ನುವುದನ್ನು ನಾವು ಮರೆಯಬಾರದು ಎಂದರು.
ಸಂಘದ ಬೇಡಿಕೆ ಈಡೇರಿಕೆಗೆ ಕ್ರಮ :
ಪತ್ರಕರ್ತರ ಪಿಂಚಣಿಯ ನಿಯಮಗಳನ್ನು ಮತ್ತಷ್ಟು ಸುಲಭಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.







