ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರೆಸ್ಸೆಸ್) ಮಾನಹಾನಿ ಮಾಡಿದ ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರಿನ ಕಾಗ್ನೈಜೆನ್ಸ್ ತೆಗೆದುಕೊಂಡಿರುವ (ವಿಚಾರಣೆಗೆ ಪರಿಗಣಿಸಿದ) ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಗೃಹಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಮುಖಂಡ ಮುಹಮ್ಮದ್ ನಲಪಾಡ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಸಂದೀಪ್ ಪಾಟೀಲ್ ಅವರು ದೂರಿನಲ್ಲಿ ಎರಡನೇ ಆರೋಪಿಯನ್ನಾಗಿಸಲಾಗಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧದ ಪ್ರಕ್ರಿಯೆ ಕೈಬಿಟ್ಟಿದ್ದಾರೆ.
ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 356ರ ಅಡಿ (ಕ್ರಿಮಿನಲ್ ಮಾನಹಾನಿ) ದಂಡನೀಯ ಅಪರಾಧಕ್ಕೆ ಕಾಗ್ನೈಜೆನ್ಸ್ ಪರಿಗಣಿಸಲಾಗಿದೆ. ದಿನೇಶ್ ಗುಂಡೂರಾವ್ ವಿರುದ್ಧದ ಪ್ರಕರಣ ಕೈಬಿಡಲಾಗಿದೆ. ಕಚೇರಿಯು ಕ್ರಿಮಿನಲ್ ಪ್ರಕರಣ ದಾಖಲಿಸಿ, ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ಗೆ ಸಮನ್ಸ್ ಜಾರಿಗೊಳಿಸಬೇಕು ಎಂದು ಶನಿವಾರ (ಜೂನ್ 27) ಆದೇಶಿಸಿರುವ ನ್ಯಾಯಾಲಯ ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿದೆ.
ಪ್ರಕರಣವೇನು?: ಪ್ರಿಯಾಂಕ್ ಖರ್ಗೆ ಅವರು, 2025ರ ಅಕ್ಟೋಬರ್ 4ರಂದು, ಆರೆಸ್ಸೆಸ್ ನವರು ಸರಕಾರಿ ಜಾಗಗಳು ಮತ್ತು ಶಾಲಾ ಆವರಣದಲ್ಲಿ ಯಾವುದೇ ರೀತಿಯ ಸಮಾರಂಭ ಮತ್ತು ಚಟುವಟಿಕೆ ಮಾಡದಂತೆ ನಿಷೇಧಿಸಬೇಕು. ಅವರು ಜನರಿಗೆ ತಪ್ಪು ಸಂದೇಶ ಕೊಡುತ್ತಿದ್ದು, ದೇಶಕ್ಕೆ ಮಾರಕವಾಗಿದ್ದಾರೆ. ಯುವಕರನ್ನು ತಪ್ಪುದಾರಿಯಲ್ಲಿ ಕರೆದೊಯ್ಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗೆ ಬರೆದಿರುವ ಪತ್ರವನ್ನು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು. ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರು ಎಕ್ಸ್ನಲ್ಲಿ, ಗೌರಿ ಲಂಕೇಶ್, ಪನ್ಸಾರೆ ಹಾಗೂ ಎಂ.ಎಂ. ಕಲಬುರ್ಗಿ ಅವರನ್ನು ಆರೆಸ್ಸೆಸ್ನವರು ಹತ್ಯೆ ಮಾಡಿದ್ದಾರೆ. ಅವರೇ ನೇರ ಹೊಣೆಗಾರರಾಗಿದ್ದು, ತಾಲಿಬಾನ್ ಸಂಸ್ಕೃತಿಯವರಾಗಿದ್ದಾರೆ ಎಂದು ಪೋಸ್ಟ್ ಮಾಡಿದ್ದರು.
ಮತ್ತೊಂದೆಡೆ, ಯುವ ಕಾಂಗ್ರೆಸ್ ಮುಖಂಡ ಮುಹಮ್ಮದ್ ನಲಪಾಡ್, ಆರೆಸ್ಸೆಸ್ನವರ ಚಡ್ಡಿಯಲ್ಲಿ ತಾಕತ್ತು ಇಲ್ಲ ಎಂದಿರುವ ವೀಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಆರೆಸ್ಸೆಸ್ ಕಾರ್ಯಕರ್ತ ಬೆಂಗಳೂರಿನ ಎ.ತೇಜಸ್ ಎಂಬವರು ಖಾಸಗಿ ದೂರು ಸಲ್ಲಿಸಿ, ಆರೋಪಿಗಳು ಆರೆಸ್ಸೆಸ್ ಮಾನಹಾನಿ ಮಾಡಿದ್ದು, ಈ ಮೂಲಕ ಲಕ್ಷಾಂತರ ಕಾರ್ಯಕರ್ತರ ಭಾವನೆಗಳಿಗೆ ಘಾಸಿಯಾಗಿದೆ. ಆದ್ದರಿಂದ, ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ್ದರು.






