ಪೊಲೀಸ್ ಸಿಬ್ಬಂದಿಯ ಆರೋಗ್ಯ, ಕುಟುಂಬ ಹಾಗೂ ಮಕ್ಕಳ ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಪೊಲೀಸ್ ಸಿಬ್ಬಂದಿಯ ವರ್ಗಾವಣೆ, ಭಡ್ತಿ, ಸೇವಾ ಮೌಲ್ಯಮಾಪನ ಸೇರಿದಂತೆ ವಿವಿಧ ವಿಚಾರಗಳನ್ನು ಪರಿಶೀಲಿಸಿ ಪರಿಹಾರ ಕಲ್ಪಿಸಲಾಗುತ್ತದೆ. ಪೊಲೀಸರ ಆರೋಗ್ಯ, ಕುಟುಂಬ ಹಾಗೂ ಮಕ್ಕಳ ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆಯನ್ನು ನೀಡಲಾಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸೋಮವಾರ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಗೃಹ ಸಚಿವರೊಂದಿಗೆ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಕೇವಲ ಸೇವಾವಧಿಯ ಆಧಾರದ ಮೇಲೆ ಭಡ್ತಿಯನ್ನು ಪರಿಗಣಿಸುವುದರ ಜೊತೆಗೆ ಕಾರ್ಯಕ್ಷಮತೆ ಮತ್ತು ಸರಕಾರದ ಆದ್ಯತೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಾಮಥ್ರ್ಯಕ್ಕೂ ಮಹತ್ವ ನೀಡಲಾಗುವುದು ಎಂದು ತಿಳಿಸಿದರು.
ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಗೂ ಸರಕಾರ ವಿಶೇಷ ಆದ್ಯತೆ ನೀಡಲಿದೆ. ಮಕ್ಕಳ ಆಸಕ್ತಿ ಮತ್ತು ಸಾಮಥ್ರ್ಯವನ್ನು ಗುರುತಿಸಿ, ಅವರಿಗೆ ಅಗತ್ಯವಾದ ಕೌಶಲ್ಯ ತರಬೇತಿ ನೀಡುವ ವ್ಯವಸ್ಥೆ ರೂಪಿಸಲಾಗುವುದು. ಉದ್ಯೋಗದ ಖಾತರಿ ನೀಡಲು ಸಾಧ್ಯವಾಗದಿದ್ದರೂ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ನೀಡುವ ಖಾತರಿಯನ್ನು ಸರಕಾರ ನೀಡಲಿದೆ. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ‘ನಿಪುಣ ಕರ್ನಾಟಕ’ ಕಾರ್ಯಕ್ರಮದ ಮೂಲಕ ಕೌಶಲ್ಯಾಭಿವೃದ್ಧಿ, ಉತ್ತಮ ಸಂವಹನ ಕೌಶಲ್ಯ ಹಾಗೂ ಭಾಷಾ ಪ್ರಯೋಗಾಲಯಗಳಂತಹ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಕಾನೂನಿನ ಚೌಕಟ್ಟಿನೊಳಗೆ ಪ್ರಾಮಾಣಿಕವಾಗಿ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡುವ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಯ ಬೆನ್ನಿಗೆ ಸರಕಾರ ಹಾಗೂ ಗೃಹ ಸಚಿವರು ನಿಲ್ಲಲಿದ್ದಾರೆ. ಆದರೆ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ಯಾವುದೇ ಕಾರಣಕ್ಕೂ ರಕ್ಷಣೆ ನೀಡುವುದಿಲ್ಲ. ಪೊಲೀಸ್ ಇಲಾಖೆಯ ಜವಾಬ್ದಾರಿ ಕೇವಲ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಸೀಮಿತವಲ್ಲ. ರಾಜ್ಯದ ಸಾಮಾಜಿಕ, ಆರ್ಥಿಕ ಅಭಿವೃದ್ಧಿ ಮತ್ತು ಕರ್ನಾಟಕದ ಸುರಕ್ಷಿತ ಹೂಡಿಕೆ ತಾಣ ಎಂಬ ಹೆಗ್ಗಳಿಕೆಯಲ್ಲಿಯೂ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ವಿವರಿಸಿದರು.
ತಂತ್ರಜ್ಞಾನ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿಯೂ ಸೈಬರ್ ಅಪರಾಧಗಳು ಹೆಚ್ಚಾಗುತ್ತಿವೆ. ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್, ಆರ್ಥಿಕ ಅಪರಾಧಗಳು ಸೇರಿದಂತೆ ಹಲವು ಅಪರಾಧಗಳು ಆನ್ಲೈನ್ ಮೂಲಕ ನಡೆಯುತ್ತಿವೆ. ಮಹಿಳೆಯರು ತಮ್ಮ ಖಾಸಗಿ ಚಿತ್ರಗಳು ಅಥವಾ ವಿಡಿಯೋಗಳನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದು ದೂರು ನೀಡಿದಾಗ ಪೊಲೀಸರು ಅತ್ಯಂತ ಸಂವೇದನಾಶೀಲವಾಗಿ ಸ್ಪಂದಿಸಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 800ಕ್ಕೂ ಹೆಚ್ಚು ಪೊಲೀಸ್ ಕಾನ್ಸ್ ಟೇಬಲ್ಗಳು, ಹೆಡ್ ಕಾನ್ಸ್ ಟೇಬಲ್ಗಳು, ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ಗಳು ಹಾಗೂ ಸಬ್ ಇನ್ಸ್ ಪೆಕ್ಟರ್ಗಳನ್ನು ಒಳಗೊಂಡ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಸುಮಾರು 200 ಮಂದಿ ತಮ್ಮ ಅಭಿಪ್ರಾಯಗಳನ್ನು ಸಚಿವರೊಂದಿಗೆ ಹಂಚಿಕೊಂಡರು.






