ಒಂದು ದಶಕದಿಂದ ಕೇಂದ್ರ ಸರಕಾರದ ವಿದೇಶಾಂಗ ನೀತಿ ನಿರೀಕ್ಷಿತ ದಿಕ್ಕಿನಲ್ಲಿ ಸಾಗುತ್ತಿಲ್ಲ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಒಂದು ದಶಕದಿಂದ ಕೇಂದ್ರ ಸರಕಾರದ ವಿದೇಶಾಂಗ ನೀತಿ ನಿರೀಕ್ಷಿತ ದಿಕ್ಕಿನಲ್ಲಿ ಸಾಗುತ್ತಿಲ್ಲ. ದೇಶದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಕೇಂದ್ರ ಸರಕಾರ ವಿಫಲವಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ನಿಲುವು ಗೊಂದಲಮಯವಾಗಿರುವಂತೆ ಕಾಣುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ವರ್ಷಗಳಿಂದ ಸರಕಾರ ನೀಡಿದ್ದ ಭರವಸೆಗಳು ಮತ್ತು ವಾಸ್ತವ ಪರಿಸ್ಥಿತಿಯ ನಡುವೆ ಸಾಕಷ್ಟು ವ್ಯತ್ಯಾಸವಿದೆ. ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸುವ ವಿಚಾರದಲ್ಲಿ ಅಮೆರಿಕದ ಒತ್ತಡಕ್ಕೆ ಮಣಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಚೀನಾದೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದರೂ, ಗಡಿ ವಿಚಾರದಲ್ಲಿ ಭಾರತದ ಹಿತಾಸಕ್ತಿಗಳಿಗೆ ಧಕ್ಕೆಯಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಚೀನಾದ ಅಪ್ಲಿಕೇಶನ್ಗಳು ಮತ್ತು ಸರಕುಗಳ ಮೇಲೆ ನಿರ್ಬಂಧ ಹೇರಿದ ಬಳಿಕವೂ ಹಲವು ವಿಚಾರಗಳಲ್ಲಿ ಕೇಂದ್ರ ಸರಕಾರ ತನ್ನ ನಿಲುವಿನಿಂದ ಹಿಂದೆ ಸರಿದಿರುವುದು ಏಕೆ ಎಂಬ ಪ್ರಶ್ನೆ ಮೂಡುತ್ತದೆ ಎಂದು ಅವರು ಹೇಳಿದರು.
ಬ್ರಿಕ್ಸ್ ವೇದಿಕೆಯಲ್ಲಿ ಭಾರತದ ರೂಪಾಯಿಯನ್ನು ಮತ್ತಷ್ಟು ಬಲಿಷ್ಠಗೊಳಿಸುವುದಾಗಿ ಹಾಗೂ ಜಾಗತಿಕ ಮಟ್ಟದಲ್ಲಿ ವ್ಯವಹರಿಸಬಹುದಾದ ಕರೆನ್ಸಿಯಾಗಿ ರೂಪಿಸುವುದಾಗಿ ಈ ಹಿಂದೆ ಕೇಂದ್ರ ಸರಕಾರ ಹೇಳಿತ್ತು. ಆದರೆ ರೂಪಾಯಿ ಮೌಲ್ಯ ಕುಸಿತ ಕಾಣುತ್ತಿದ್ದು, ಡಾಲರ್ ಎದುರು ರೂಪಾಯಿ ಹೊಸ ತಳಮಟ್ಟಗಳನ್ನು ತಲುಪುತ್ತಿರುವುದು ಆರ್ಥಿಕ ನೀತಿಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದರು.
ಚೀನಾ ವಿಚಾರದಲ್ಲೂ ಕೇಂದ್ರ ಸರಕಾರದ ನಡೆ ಬಗ್ಗೆ ಗಂಭೀರ ಪ್ರಶ್ನೆಗಳಿವೆ. ಭಾರತದ ಪ್ರಧಾನಮಂತ್ರಿ ಹಾಗೂ ಚೀನಾ ಪ್ರಧಾನಿಯೊಂದಿಗೆ ಹಲವು ಬಾರಿ ಮಾತುಕತೆಗಳು ನಡೆದಿವೆ. ಗುಜರಾತ್ನಲ್ಲಿ ನಡೆದ ಭೇಟಿಯಿಂದ ಹಿಡಿದು ಮಹಾಬಲಿಪುರಂನಲ್ಲಿ ನಡೆದ ಮಾತುಕತೆಗಳವರೆಗೆ ಉಭಯ ರಾಷ್ಟ್ರಗಳ ನಾಯಕರು ಹಲವು ಸಂದರ್ಭಗಳಲ್ಲಿ ಚರ್ಚೆ ನಡೆಸಿದ್ದಾರೆ. ಆದರೆ ಆ ಬಳಿಕ ಗಡಿ ಪ್ರದೇಶಗಳಲ್ಲಿ ಪರಿಸ್ಥಿತಿ ಸುಧಾರಿಸುವ ಬದಲು ಭಾರತದ ಹಕ್ಕು ಪ್ರತಿಪಾದಿಸುವ ಪ್ರದೇಶಗಳಲ್ಲಿ ಚೀನಾ ತನ್ನ ಚಟುವಟಿಕೆಗಳನ್ನು ವಿಸ್ತರಿಸುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ ಎಂದು ಅವರು ಹೇಳಿದರು.
‘56 ಇಂಚಿನ ಎದೆ’ ಎಂಬ ರಾಜಕೀಯ ಘೋಷಣೆ ಕೇವಲ ಕಾಂಗ್ರೆಸ್ ಅನ್ನು ಟೀಕಿಸಲು ಬಳಸುವುದಕ್ಕಾಗಿಯೇ ಅಥವಾ ದೇಶದ ಎದುರಾಳಿಗಳಿಗೂ ತನ್ನ ಸಾಮಥ್ರ್ಯವನ್ನು ತೋರಿಸಲು ಬಳಸಲಾಗುತ್ತಿದೆಯೇ ಎಂದು ಅವರು ಪ್ರಶ್ನಿಸಿದರು.






