ಕನ್ನಡ ಸ್ವತಂತ್ರ ದ್ರಾವಿಡ ಭಾಷೆ ಎನ್ನುವುದು ಭಾಷಾ ವಿಜ್ಞಾನಿಗಳ ಸ್ಪಷ್ಟ ಅಭಿಪ್ರಾಯ : ಪ್ರೊ.ಬರಗೂರು ರಾಮಚಂದ್ರಪ್ಪ

ಪ್ರೊ.ಬರಗೂರು ರಾಮಚಂದ್ರಪ್ಪ
ಬೆಂಗಳೂರು : ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆಯು ತಮಿಳು ಭಾಷೆಯಿಂದ ಹುಟ್ಟಿದೆ ಎಂದು ಹೇಳಿರುವುದು ಅಸಂಬದ್ಧ. ಕನ್ನಡವು ತಮಿಳು ಮೂಲವೂ ಅಲ್ಲ, ಸಂಸ್ಕೃತ ಮೂಲವೂ ಅಲ್ಲ. ಸ್ವತಂತ್ರ ದ್ರಾವಿಡ ಭಾಷೆ ಎನ್ನುವುದು ಭಾಷಾವಿಜ್ಞಾನಿಗಳ ಸ್ಪಷ್ಟ ಅಭಿಪ್ರಾಯವಾಗಿದೆ ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕನ್ನಡ ಭಾಷೆಯು ಕ್ರಿಸ್ತ ಪೂರ್ವ ಮೂರನೇ ಶತಮಾನದಲ್ಲೇ ಬಳಕೆಯಲ್ಲಿ ಇತ್ತು ಎಂದು ಕೆಲವು ಸಂಶೋಧಕರು ಹೇಳಿದ್ದಾರೆ. ಕ್ರಿಸ್ತ ಪೂರ್ವ ಎರಡನೇ ಶತಮಾನದ ಗ್ರೀಕ್ ಪ್ರಹಸನದಲ್ಲಿ ಕನ್ನಡ ಪದ ಇರುವುದನ್ನೂ ಗುರುತಿಸಲಾಗಿದೆ. ರಾಷ್ಟ್ರ ಕವಿ ಗೋವಿಂದ ಪೈ ಅವರು ಕ್ರಿಸ್ತ ಪೂರ್ವ ಎರಡನೇ ಶತಮಾನದಿಂದಲೇ ಕನ್ನಡ ಭಾಷೆಯ ಪ್ರಾಚೀನತೆಯನ್ನು ಗುರುತಿಸಿದ್ದಾರೆ ಎಂದು ಹೇಳಿದ್ದಾರೆ.
ದ್ರಾವಿಡ ಭಾಷೆಗಳೆಲ್ಲ ಮೂಲ ದ್ರಾವಿಡದಿಂದ ಬಂದಿವೆಯೆಂದು ಭಾಷಾ ವಿಜ್ಞಾನಿಗಳು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಕನ್ನಡ ತಮಿಳು ಭಾಷೆಯಿಂದ ಹುಟ್ಟಿಲ್ಲ. ಅಧ್ಯಯನವಿಲ್ಲದ ಬೀಸು ಹೇಳಿಕೆಗಳನ್ನು ಕೊಡುವುದು ತಪ್ಪು. ಇಂತಹ ಹೇಳಿಕೆಗಳಿಂದ ಭಾಷಿಕರ ನಡುವೆ ವೈಷ್ಣಮ್ಯ ಹುಟ್ಟಿಸುವುದು ಕಮಲ್ ಹಾಸನ್ ಅವರಿಗೆ ಶೋಭೆ ತರುವುದಿಲ್ಲ. ಇದು ಖಂಡನೀಯ. ಅವರು ತಪ್ಪನ್ನು ಒಪ್ಪಿಕೊಳ್ಳಬೇಕು ಎಂದು ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ.





