ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗಳಿಸಿದವರಿಗೆ ಆರು ಕೋಟಿ ರೂ. ನಗದು ಬಹುಮಾನ: ಸಿದ್ದರಾಮಯ್ಯ

ಬೆಂಗಳೂರು, ಡಿ.21: ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗಳಿಸಿದವರಿಗೆ ಆರು ಕೋಟಿ ರೂ. ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕರ್ನಾಟಕ ಒಲಿಂಪಿಕ್ 2025 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಿಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದಿಸಿದ ಮುಖ್ಯಮಂತ್ರಿ, 1958 ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ ಸಂಸ್ಥೆ ಇಲ್ಲಿಯವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ. ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಸಂಸ್ಥೆಯ ಅಧ್ಯಕ್ಷತೆ ವಹಿಸಿಕೊಂಡ ನಂತರ ಸಂಸ್ಥೆಯು ಹೆಚ್ಚು ಕ್ರಿಯಾಶೀಲವಾಗಿದೆ. ನನ್ನ ಅವಧಿಯಲ್ಲೇ ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನೂ ನಾನೇ ನೆರವೇರಿಸಿದ್ದೇನೆ. ಇಡೀ ದೇಶದಲ್ಲೇ ಆಂಧ್ರ ಮತ್ತು ಕೇರಳ ರಾಜ್ಯದಂತೆ ಕರ್ನಾಟಕದಲ್ಲಿಯೂ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆಯು ಎಲ್ಲಾ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದರು.
ಕ್ರೀಡಾ ಕ್ಷೇತ್ರಕ್ಕೆ ಸರಕಾರದ ಆದ್ಯತೆ
ನಮ್ಮ ಸರಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ ಆರು ಕೋಟಿ ರೂ.ಗಳ ನಗದು ಬಹುಮಾನವನ್ನು ಘೋಷಿಸಲಾಗಿದೆ. ಅಂತೆಯೇ ಬೆಳ್ಳಿ ಪದಕ ಪಡೆದರೆ ನಾಲ್ಕು ಕೋಟಿ ರೂ. ಹಾಗೂ ಕಂಚಿನ ಪದಕ ಗೆದ್ದರೆ ಮೂರು ಕೋಟಿ ರೂ. ನಗದು ಬಹುಮಾನವನ್ನು ಸರಕಾರ ಘೋಷಿಸಿದೆ. ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಸರಕಾರ ಈ ಕ್ರಮ ಕೈಗೊಂಡಿದೆ ಎಂದರು.
ಕ್ರೀಡಾ ಮೀಸಲಾತಿಯಡಿ ಸರಕಾರಿ ಉದ್ಯೋಗ: ಜನವರಿ 2026ರಲ್ಲಿ ಆದೇಶ
ಕ್ರೀಡಾಪಟುಗಳಿಗೆ ಸರಕಾರದ ನೇಮಕಾತಿಯಲ್ಲಿಯೂ ಮೀಸಲಾತಿಯನ್ನು ಒದಗಿಸಿದೆ. ಪೊಲೀಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಶೇ.3ರಷ್ಟು ಹಾಗೂ ಇನ್ನುಳಿದ ಇಲಾಖೆಗಳಲ್ಲಿ ಶೇ.2ರಷ್ಟು ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗುವುದು. ಜನವರಿಯಲ್ಲಿ ಕ್ರೀಡಾ ಮೀಸಲಾತಿಯಡಿಯಲ್ಲಿ ಸರಕಾರಿ ಉದ್ಯೋಗದ ನೇಮಕಾತಿಗೆ ಸರಕಾರಿ ಆದೇಶವನ್ನು ಹೊರಡಿಸಲಾಗುತ್ತದೆ. ಆದ್ದರಿಂದ ಹೆಚ್ಚಿನ ಯುವಜನರು ಕ್ರೀಡಾ ಕ್ಷೇತ್ರದಲ್ಲಿ ಭಾಗಿಯಾಗಬೇಕೆಂದು ತಿಳಿಸಿದರು.







