ಉತ್ತರ ಕನ್ನಡ ಜಿಲ್ಲೆಯಲ್ಲಿ ‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ಸ್ಥಾಪಿಸಲು ಆರ್.ವಿ.ದೇಶಪಾಂಡೆ ಮನವಿ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಜನರ ದೀರ್ಘಕಾಲದ ಬೇಡಿಕೆಯಾಗಿರುವ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಹೆಚ್ಚುವರಿ ಮೂಲಸೌಕರ್ಯಗಳಿಂದ ಬಲಪಡಿಸಿ ‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ಯಾಗಿ ಅಭಿವೃದ್ಧಿಪಡಿಸಲು ಬಜೆಟ್ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡಬೇಕು ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮನವಿ ಮಾಡಿದ್ದಾರೆ.
ಶುಕ್ರವಾರ ಈ ಸಂಬಂಧ ಸಿಎಂ, ವೈದ್ಯಕೀಯ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಅವರು, ಉತ್ತರಕನ್ನಡ ಜಿಲ್ಲೆಯು ವಿಶಾಲ ಭೌಗೋಳಿಕ ವ್ಯಾಪ್ತಿ ಹೊಂದಿರುವ ಜಿಲ್ಲೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಪ್ರಮಾಣ ಹಾಗೂ ಗಂಭೀರ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲೇ ಆಸ್ಪತ್ರೆಯ ಕೊರತೆಯಿಂದ ರೋಗಿಗಳು ಹುಬ್ಬಳ್ಳಿ, ಮಣಿಪಾಲ, ಬೆಳಗಾವಿ, ಗೋವಾ, ಬೆಂಗಳೂರಿಗೆ ಚಿಕಿತ್ಸೆಗಾಗಿ ತೆರಳಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ ಎಂದು ಗಮನ ಸೆಳೆದಿದ್ದಾರೆ.
ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗಾಗಿ ಹೋರಾಟಗಳು ನಡೆಯುತ್ತಿವೆ. ಪ್ರಸ್ತುತ ಜಿಲ್ಲಾಕೇಂದ್ರ ಕಾರವಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್)ಈಗಾಗಲೇ ಮೂಲಭೂತ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದೆ. ಈ ಸಂಸ್ಥೆಗೆ ಅಗತ್ಯ ಹೆಚ್ಚುವರಿ ಮೂಲಸೌಕರ್ಯ ಒದಗಿಸಿ ಅದನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಅಭಿವೃದ್ಧಿಪಡಿಸಿದಲ್ಲಿ, ಜಿಲ್ಲೆಯ ಜನತೆಗೆ ಗುಣಮಟ್ಟದ ಚಿಕಿತ್ಸೆ ಲಭ್ಯವಾಗುತ್ತದೆ. ತುರ್ತು ಪರಿಸ್ಥಿತಿಗಳಲ್ಲಿ ಅನೇಕ ಜೀವಗಳನ್ನು ರಕ್ಷಿಸಲು ಸಹಕಾರಿಯಾಗಲಿದೆ ಎಂದು ಅವರು ಕೋರಿದ್ದಾರೆ.






