ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷರಾಗಿ ಪರಿಷತ್ ಸದಸ್ಯ ಎಸ್.ರವಿ ಆಯ್ಕೆ

ಬೆಂಗಳೂರು : ‘ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್’ನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತರಾಗಿರುವ ವಿಧಾನ ಪರಿಷತ್ ಸದಸ್ಯ ಎಸ್.ರವಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ರಾಯಚೂರು ಜಿಲ್ಲೆಯ ಶರಣಗೌಡ ಪಾಟೀಲ್ ಬಯ್ಯಾಪುರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಡಳಿತಾರೂಢ ಕಾಂಗ್ರೆಸ್ನಲ್ಲೇ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ನ ಅಧಿಕಾರ ಹಂಚಿಕೆ ಸೂತ್ರದ ಕಾರಣಕ್ಕೆ ಜಿದ್ದಾಜಿದ್ದಿಗೆ ತೆರೆ ಬಿದ್ದಿದೆ. ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೆ.ಎನ್.ರಾಜಣ್ಣ ಅವರಿಗೆ ಹಿನ್ನಡೆಯಾದಂತೆ ಆಗಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸೆ.9ರಂದು ನಿರ್ದೇಶಕರೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷ ಸ್ಥಾನದ ಅವಧಿಯನ್ನು ತಲಾ ಎರಡೂವರೆ ವರ್ಷದ ಅವಧಿಗೆ ಹಂಚಿಕೆ ಮಾಡಿಕೊಳ್ಳುವ ಬಗ್ಗೆ ಒಮ್ಮತಕ್ಕೆ ಬರಲಾಗಿತ್ತು. ಮೊದಲ ಅವಧಿಯಲ್ಲಿ ಕೆ.ಎನ್.ರಾಜಣ್ಣ ಅಧ್ಯಕ್ಷರಾಗಲಿದ್ದಾರೆಂಬ ಮಾತುಗಳು ಕೇಳಿ ಬಂದಿದ್ದವು.
ಆದರೆ, ಸೆ.10ರ ಗುರುವಾರ ಬೆಳಗ್ಗೆ ನಾಮಪತ್ರ ಸಲ್ಲಿಕೆ ವೇಳೆ ಪರಿಸ್ಥಿತಿ ಬದಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಪರಿಷತ್ ಸದಸ್ಯ ಎಸ್.ರವಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶರಣಗೌಡ ಪಾಟೀಲ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ ಎರಡೂವರೆ ವರ್ಷಗಳ ಅವಧಿಗೆ ಕೆ.ಎನ್.ರಾಜಣ್ಣ ಅಧ್ಯಕ್ಷರಾಗಲಿದ್ದಾರೆಂಬ ಒಪ್ಪಂದದ ಮಾತುಗಳು ಕೇಳಿ ಬಂದಿದ್ದರೂ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ.
ನಿನ್ನೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸಭೆ ನಡೆದ ಬೆನ್ನಲ್ಲೆ ಸಹಕಾರ ಸಚಿವ ಲಕ್ಷ್ಮಣ್ ಸವದಿ ಅವರು, 17 ಮಂದಿ ನಿರ್ದೇಶಕರೊಂದಿಗೆ ಖಾಸಗಿ ಹೋಟೆಲ್ನಲ್ಲಿ ಪ್ರತ್ಯೇಕ ಸಭೆ ನಡೆಸಿದ್ದರು. ಈ ವೇಳೆ ಕೆ.ಎನ್.ರಾಜಣ್ಣ ಅವರ ಮನವೊಲಿಸುವ ಪ್ರಯತ್ನವು ನಡೆದಿತ್ತು ಎಂದು ಮೂಲಗಳು ತಿಳಿಸಿವೆ.
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜಣ್ಣ ಅವರೊಂದಿಗೆ ವಿಜಯಪುರ ಜಿಲ್ಲೆಯ ಮಾಜಿ ಸಚಿವ ಶಿವಾನಂದ ಪಾಟೀಲ್, ಬಿಜೆಪಿಯಿಂದ ಉಚ್ಚಾಟಿತ ಶಾಸಕ ಶಿವರಾಮ ಹೆಬ್ಬಾರ್ ಅವರೂ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದು, ಲಾಬಿಯನ್ನು ನಡೆಸಿದ್ದರು ಎಂದು ಹೇಳಲಾಗಿದೆ.
ಅಪೆಕ್ಸ್ ಬ್ಯಾಂಕಿನ ಒಟ್ಟು 21 ಮಂದಿ ನಿರ್ದೇಶಕ ಸ್ಥಾನಗಳ ಪೈಕಿ ಚಿತ್ರದುರ್ಗದ ನಿರ್ದೇಶಕ ಹಾಗೂ ಸಚಿವ ಡಿ.ಸುಧಾಕರ್ ನಿಧನರಾಗಿದ್ದಾರೆ. ಬಾಗಲಕೋಟೆ, ಮೈಸೂರು-ಚಾಮರಾಜನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ನಿರ್ದೇಶಕರಿಲ್ಲದ ಕಾರಣ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ.
ಬೆಂಗಳೂರಿನಿಂದ ಪರಿಷತ್ ಸದಸ್ಯ ಎಸ್.ರವಿ, ಬೆಳಗಾವಿಯಿಂದ ಸಚಿವ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್, ಬೀದರ್ನಿಂದ ಸಚಿವ ಈಶ್ವರ ಖಂಡ್ರೆ ಸಹೋದರ ಅಮರಕುಮಾರ್ ಹಾಗೂ ಮಂಡ್ಯದಿಂದ ಸಚಿವ ಪಿ.ಎಂ.ನರೇಂದ್ರಸ್ವಾಮಿ ನಿರ್ದೇಶಕರಾಗಿದ್ದಾರೆ. ವಿಜಯಪುರದಿಂದ ಮಾಜಿ ಸಚಿವ ಶಿವಾನಂದ ಪಾಟೀಲ್, ಉತ್ತರ ಕನ್ನಡದಿಂದ ಶಿವರಾಮ ಹೆಬ್ಬಾರ್ ಹಾಗೂ ತುಮಕೂರಿನಿಂದ ಕೆ.ಎನ್.ರಾಜಣ್ಣ ನಿರ್ದೇಶಕರಾಗಿದ್ದಾರೆ.
ಬಳ್ಳಾರಿ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಕಲಬುರಗಿ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರಿದ್ದಾರೆ. ಚಿಕ್ಕಮಗಳೂರಿನಿಂದ ಬೆಳ್ಳಿಪ್ರಕಾಶ್, ಕೊಡಗಿನಿಂದ ಕೊಡಂದೇರಾ ಪಿ.ಗಣಪತಿ ಬಿಜೆಪಿಯ ನಿರ್ದೇಶಕರಾಗಿದ್ದರೆ, ಹಾಸನದಿಂದ ಸೂರಜ್ ಜೆಡಿಎಸ್ ನಿರ್ದೇಶಕರಾಗಿದ್ದಾರೆ.






