''ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ: ಡಿ.ಕೆ.ಶಿವಕುಮಾರ್

ಡಿ.ಕೆ. ಶಿವಕುಮಾರ್
ಬೆಂಗಳೂರು, ಡಿ.6: "ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಈ.ಡಿ. ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸದಾಶಿವ ನಗರದ ನಿವಾಸದ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಡಿಸಿಎಂ, "ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಈ.ಡಿ. ಚಾರ್ಜ್ ಶೀಟ್ ಹಾಕಿರುವುದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾವು ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ" ಎಂದರು.
ಡಿ.19 ರ ಒಳಗೆ ಪೊಲೀಸರಿಗೆ ಮಾಹಿತಿ ನೀಡಬೇಕು
"ನನಗೆ ಹಾಗೂ ನನ್ನ ತಮ್ಮ ಡಿ.ಕೆ.ಸುರೇಶ್ ಗೆ ಇ.ಡಿ. ಸಮನ್ಸ್ ನೀಡಿದೆ. ನಾವು ಇದಕ್ಕೆ ಹಿಂದೆಯೇ ಉತ್ತರ ಕೊಟ್ಟಿದ್ದೆವು. ಆದರೂ ನಮಗೆ ಸಮನ್ಸ್ ನೀಡಿರುವುದು ಆಘಾತಕಾರಿ. ದಿಲ್ಲಿ ಪೊಲೀಸರು ಡಿ.19ರ ಒಳಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದ್ದಾರೆ" ಎಂದು ಹೇಳಿದರು.
"ನಾವು ತೆರಿಗೆ ಪಾವತಿ ಮಾಡುತ್ತಿದ್ದೇವೆ. ನಮ್ಮ ಹಣವನ್ನು ನಮಗೆ ಬೇಕಾದವರಿಗೆ ನೀಡುತ್ತೇವೆ. ಕಿರುಕುಳ ನೀಡಲು ಪಿಎಂಎಲ್ ಎ ಪ್ರಕರಣ ಕೂಡ ದಾಖಲಿಸಿದ್ದರು. ಆನಂತರ ಏನಾಯಿತು? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ ನೀಡುವುದು, ಜೊತೆಗೆ ಗೊಂದಲ ಮೂಡಿಸುವುದು ಇದರ ಉದ್ದೇಶ" ಎಂದರು.
"ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ನೋಟಿಸ್ ನೀಡಿದೆ. ನ್ಯಾಷನಲ್ ಹೆರಾಲ್ಡ್, ಯಂಗ್ ಇಂಡಿಯಾ ಇವು ನಮ್ಮ ಕಾಂಗ್ರೆಸ್ ಪಕ್ಷದ ಸಂಸ್ಥೆಗಳು. ನಾವು ಕಾಂಗ್ರೆಸ್ಸಿಗರಾದ ಕಾರಣಕ್ಕೆ ಈ ಸಂಸ್ಥೆಗಳು ಕಷ್ಟ ಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್ ಗಳಿಂದ ದೇಣಿಗೆ ನೀಡಿದ್ದೇವೆ. ನಮ್ಮಂತೆ ಅನೇಕ ಜನರು ಸಹಾಯ ಮಾಡಿದ್ದಾರೆ" ಎಂದರು.
"ಶುಕ್ರವಾರ ನನಗೆ ಹಾಗೂ ಸುರೇಶ್ ಅವರಿಗೆ ನೋಟಿಸ್ ಬಂದಿದೆ. ಆತ ಸಂಸದನಾದ ಸಮಯದಲ್ಲಿ ಒಂದಷ್ಟು ಹಣ ದೇಣಿಗೆ ನೀಡಿದ್ದ. ನೋಟಿಸ್ ಅನ್ನು ವಿವರವಾಗಿ ತಿಳಿದುಕೊಂಡು ಕಾನೂನಾತ್ಮಕವಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ" ಎಂದರು.







