ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಆ.1ರಿಂದ ದಕ್ಷಿಣ ಭಾರತದಾದ್ಯಂತ ಲಾರಿಗಳ ಮುಷ್ಕರ

ಬೆಂಗಳೂರು : ವಾಣಿಜ್ಯ ವಾಹನಗಳಿಗೆ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಕಡ್ಡಾಯಗೊಳಿಸಿದ ನಿಯಮವನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಆ.1ರಿಂದ ದಕ್ಷಿಣ ಭಾರತದಾದ್ಯಂತ ಲಾರಿಗಳ ಮುಷ್ಕರ ನಡೆಸಲಾಗುವುದು ಎಂದು ದಕ್ಷಿಣ ಭಾರತ ಲಾರಿ ಮಾಲಕರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರಗಳು ಜು.30ರೊಳಗೆ ನಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಆ.1ರಿಂದ ದಕ್ಷಿಣ ಭಾರತದ ಎಲ್ಲ ಲಾರಿಗಳು ನಿಂತಲ್ಲೇ ನಿಲ್ಲಲಿವೆ. ಈ ಮುಷ್ಕರದಿಂದಾಗಿ ದಕ್ಷಿಣ ಭಾರತದ ಸುಮಾರು 24ಲಕ್ಷ ಹಾಗೂ ಕರ್ನಾಟಕ ರಾಜ್ಯದ 7ಲಕ್ಷ ಲಾರಿಗಳು ಸಂಚಾರ ಸ್ಥಗಿತಗೊಳಿಸಲಿವೆ ಎಂದು ತಿಳಿಸಿದರು.
2012ರ ನಿರ್ಭಯಾ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ವಾಣಿಜ್ಯ ವಾಹನಗಳಿಗೂ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯಗೊಳಿಸಿತ್ತು. ಆದರೆ, ಇದರಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ. ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯ ದರ ನಿಗದಿ ಮಾಡಲಾಗಿದ್ದು, ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಅಳವಡಿಕೆಗೆ ಒಂದು ರಾಜ್ಯದಲ್ಲಿ 3 ಸಾವಿರ ರೂ. ಇದ್ದರೆ, ಮತ್ತೊಂದು ರಾಜ್ಯದಲ್ಲಿ 15 ಸಾವಿರ ರೂ. ವಸೂಲಿ ಮಾಡಲಾಗುತ್ತಿದೆ. ಸಾರಿಗೆ ವಾಹನಗಳಲ್ಲಿ ಇದನ್ನು ಅಳವಡಿಸಲಾಗಿದೆಯಾದರೂ ಇಲ್ಲಿಯವರೆಗೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಹೀಗಿರುವಾಗ ಸರಕು ಸಾಗಣೆ ವಾಹನಗಳಿಗೆ ಇದರ ಅವಶ್ಯಕತೆ ಏನಿದೆ ಎಂದು ಅವರು ಪ್ರಶ್ನಿಸಿದರು.
ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗಡಿ ತಪಾಸಣಾ ಕೇಂದ್ರಗಳನ್ನು (ಬಾರ್ಡರ್ ಚೆಕ್ ಪೋಸ್ಟ್) ಈಗಾಗಲೇ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ತೆಲಂಗಾಣದಲ್ಲಿಯೂ 6 ತಿಂಗಳ ಹಿಂದೆ ಹಾಗೂ ಆಂಧ್ರಪ್ರದೇಶದಲ್ಲಿ ಒಂದೂವರೆ ವರ್ಷದ ಹಿಂದೆಯೇ ಚೆಕ್ ಪೋಸ್ಟ್ ಗಳನ್ನು ಮುಚ್ಚಲಾಗಿದೆ. ಆದರೆ ಕಾಂಗ್ರೆಸ್ ಹಾಗೂ ಟಿವಿಕೆ ಅಧಿಕಾರದಲ್ಲಿರುವ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮಾತ್ರ ಇನ್ನೂ ಗಡಿ ತಪಾಸಣಾ ಕೇಂದ್ರಗಳನ್ನು ಉಳಿಸಿಕೊಳ್ಳಲಾಗಿದೆ. ಇದನ್ನು ಕೂಡಲೇ ತೆರವುಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.






