ಪ್ರತಿಭಾವಂತ ವಿದ್ಯಾರ್ಥಿಗಳು ಉದ್ಯೋಗ ಹುಡುಕುವವರಲ್ಲ, ಉದ್ಯೋಗ ಸೃಷ್ಟಿಸುವವರಾಗಬೇಕು: ಸಿಎಂ ಡಿ.ಕೆ.ಶಿವಕುಮಾರ್
‘ವಿದೇಶದಲ್ಲಿ ಅಧ್ಯಯನ–2026’ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು: ಕರ್ನಾಟಕದ ಪ್ರತಿಭಾವಂತ ವಿದ್ಯಾರ್ಥಿಗಳು ಕೇವಲ ಉದ್ಯೋಗಿಗಳಾಗುವುದಲ್ಲ, ಉದ್ಯೋಗ ಸೃಷ್ಟಿಸುವ ಉದ್ಯೋಗದಾತರಾಗಬೇಕು ಎಂಬುದು ರಾಜ್ಯ ಸರ್ಕಾರದ ಆಶಯ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ‘ವಿದೇಶದಲ್ಲಿ ಅಧ್ಯಯನ–2026’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕರ್ನಾಟಕದಲ್ಲಿ ದೇಶದ ಇತರೆ ಯಾವುದೇ ರಾಜ್ಯಕ್ಕಿಂತ ಹೆಚ್ಚಿನ ಪ್ರತಿಭಾವಂತ ಮಾನವ ಸಂಪನ್ಮೂಲವಿದೆ. ಆ ಪ್ರತಿಭೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಸರ್ಕಾರ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಹೊಸ ಅವಕಾಶಗಳನ್ನು ಕಲ್ಪಿಸುತ್ತಿದೆ ಎಂದು ಹೇಳಿದರು.
ಜ್ಞಾನವೇ ಜೀವನದ ಅತ್ಯಮೂಲ್ಯ ಆಸ್ತಿ. ಅದನ್ನು ಯಾರೂ ಕಸಿಯಲು ಸಾಧ್ಯವಿಲ್ಲ. ವಿದೇಶದಲ್ಲಿ ಶಿಕ್ಷಣ ಪಡೆಯುವುದರಿಂದ ವಿದ್ಯಾರ್ಥಿಗಳು ಜಾಗತಿಕ ದೃಷ್ಟಿಕೋನ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
80ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳ ಭಾಗವಹಿಸುವಿಕೆ :
‘ವಿದೇಶದಲ್ಲಿ ಅಧ್ಯಯನ–2026’ ಕಾರ್ಯಕ್ರಮದಲ್ಲಿ 80ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವಿಶ್ವವಿದ್ಯಾಲಯಗಳು ಭಾಗವಹಿಸಿದ್ದು, 300ಕ್ಕೂ ಹೆಚ್ಚು ಕೋರ್ಸ್ಗಳಲ್ಲಿ ಅಧ್ಯಯನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿವಿಧ ಸರ್ಕಾರಿ ಇಲಾಖೆಗಳ ವಿದ್ಯಾರ್ಥಿವೇತನಗಳ ಜೊತೆಗೆ ಬ್ಯಾಂಕುಗಳಿಂದ 2 ಕೋಟಿ ರೂ. ವರೆಗೆ ಶಿಕ್ಷಣ ಸಾಲ ಸೌಲಭ್ಯವೂ ಲಭ್ಯವಿದೆ ಎಂದು ಹೇಳಿದರು.
ಕ್ವೀನ್ಸ್ಲ್ಯಾಂಡ್ ವಿಶ್ವವಿದ್ಯಾಲಯ ಸೇರಿದಂತೆ ಹಲವು ವಿದೇಶಿ ಶಿಕ್ಷಣ ಸಂಸ್ಥೆಗಳೊಂದಿಗೆ ರಾಜ್ಯ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದ್ದು, ಈಗಾಗಲೇ 3,145 ವಿದ್ಯಾರ್ಥಿಗಳನ್ನು ವಿದೇಶದಲ್ಲಿ ವ್ಯಾಸಂಗಕ್ಕೆ ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು ಜಾಗತಿಕ ಶಿಕ್ಷಣ ಮತ್ತು ಐಟಿ ಕೇಂದ್ರ :
ಬೆಂಗಳೂರು ಜಾಗತಿಕ ನಗರವಾಗಿದ್ದು, ಇಲ್ಲಿ ಸುಮಾರು 26 ಲಕ್ಷ ಐಟಿ ವೃತ್ತಿಪರರು ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಇಂಜಿನಿಯರ್ಗಳು ಹಾಗೂ ಸುಮಾರು 13,940 ವೈದ್ಯರು ರಾಜ್ಯದಿಂದ ಹೊರಬರುತ್ತಿದ್ದಾರೆ. ಇಂತಹ ಮಾನವ ಸಂಪನ್ಮೂಲವನ್ನು ದೇಶದ ಬೇರೆ ಯಾವುದೇ ರಾಜ್ಯ ಸೃಷ್ಟಿಸುತ್ತಿಲ್ಲ ಎಂದು ಸಿಎಂ ಹೇಳಿದರು.
ಶಿಕ್ಷಕರಿಗೆ ‘Tr.’ ಬಿರುದು :
ರಾಜ್ಯ ಸರ್ಕಾರ ಶಿಕ್ಷಕರಿಗೆ ಗೌರವ ಸೂಚಿಸುವ ಉದ್ದೇಶದಿಂದ ಇನ್ನುಮುಂದೆ ಶಾಲಾ ಶಿಕ್ಷಕರು ತಮ್ಮ ಹೆಸರಿನ ಮುಂದೆ ‘Tr.’ (Teacher) ಎಂದು ಬಳಸಲು ಅವಕಾಶ ನೀಡಿದೆ. ಈ ನಿರ್ಧಾರಕ್ಕೆ ರಾಜ್ಯದ ಶಿಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿದ್ಯಾರ್ಥಿಗಳು ತಮ್ಮ ಪೋಷಕರು, ಶಿಕ್ಷಕರು ಹಾಗೂ ತಮ್ಮ ಸಂಸ್ಕೃತಿ-ಮೂಲಗಳನ್ನು ಎಂದಿಗೂ ಮರೆಯಬಾರದು. ನಿಮ್ಮ ಭವಿಷ್ಯವೇ ರಾಜ್ಯದ ಹಾಗೂ ದೇಶದ ಭವಿಷ್ಯವಾಗಿದೆ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.






