ಕೇಂದ್ರ ಕಾರಾಗೃಹಕ್ಕೂ ಮೀರಿದ ಭಯೋತ್ಪಾದಕರು ವಿಧಾನಸೌಧದಲ್ಲಿ ಇದ್ದಾರೆ : ಎಚ್.ಡಿ.ಕುಮಾರಸ್ವಾಮಿ

ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ನ.10: ‘ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಷ್ಟೇ ಭಯೋತ್ಪಾದಕರಿಲ್ಲ, ಅದಕ್ಕಿಂತಲೂ ಅಪಾಯಕಾರಿ ಭಯೋತ್ಪಾದಕರು ರಾಜ್ಯದ ಆಡಳಿತ ಶಕ್ತಿಕೇಂದ್ರ ವಿಧಾನಸೌಧದಲ್ಲೂ ಇದ್ದಾರೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಸೋಮವಾರ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಅವರು, ‘ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ಹಾಗೂ ಶಿಕ್ಷೆಗೆ ಗುರಿಯಾಗಿರುವ ಕುಖ್ಯಾತ ಪಾತಕಿಗಳಿಗೆ ಅಲ್ಲಿನ ಸಿಬ್ಬಂದಿ ರಾಜಾತಿಥ್ಯ ಕಲ್ಪಿಸಿರುವುದು ನಾಚಿಕೆಗೇಡು. ವಿಧಾನಸೌಧದಲ್ಲಿನ ಅಪಾಯಕಾರಿ ಭಯೋತ್ಪಾದಕರು ಯಾರು ಎನ್ನುವುದು ನಿಮಗೆ ಗೊತ್ತಿದೆ’ ಎಂದರು.
‘ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ರಾಜಾತಿಥ್ಯ ಕೊಡಲಾಗುತ್ತಿದೆ ಎನ್ನುವುದು ಹಳೆಯ ವಿಚಾರವಲ್ಲ. ಹಿಂದೆ ಇದೇ ವಿಷಯದ ಬಗ್ಗೆ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಕಿತ್ತಾಡಿಕೊಂಡಿದ್ದರು. ಆಮೇಲೆ ಇನ್ನೊಂದು ಪ್ರಕರಣದಲ್ಲಿ ಸ್ವತಃ ಕೋರ್ಟ್ಗಳೇ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದ ಜೈಲು ಸಿಬ್ಬಂದಿಗೆ ಕಠಿಣ ಎಚ್ಚರಿಕೆ ನೀಡಿತ್ತು. ಅದಾದ ನಂತರ ಮತ್ತೆ ಅಂತಹವೇ ಪ್ರಕರಣಗಳು ಜೈಲಿನಲ್ಲಿ ಮರುಕಳಿಸುತ್ತಿವೆ’ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಜೈಲು ನಿರ್ವಹಣೆಯಲ್ಲಿನ ವೈಫಲ್ಯಗಳ ಬಗ್ಗೆ ಜನರು ಮುಖ್ಯಮಂತ್ರಿ, ಗೃಹ ಸಚಿವರನ್ನು ಪ್ರಶ್ನಿಸಬೇಕು ಎಂದು ಅವರು ತಿಳಿಸಿದರು.
ಪ್ರತ್ಯೇಕ ವ್ಯವಸ್ಥೆ ಮಾಡಿ :
ವಿಮಾನ ನಿಲ್ದಾಣದಲ್ಲಿ ಮುಸ್ಲಿಮ್ ಸಮುದಾಯದವರ ಪ್ರಾರ್ಥನೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿದರೆ ಬಹಿರಂಗವಾಗಿ ಪ್ರಾರ್ಥನೆ ಮಾಡುವ ದೃಶ್ಯಗಳನ್ನು ತಪ್ಪಿಸಬಹುದು. ಕೆಂಪೇಗೌಡ ವಿಮಾನ ನಿಲ್ದಾಣ ಅಂತರ್ರಾಷ್ಟ್ರೀಯ ದೊಡ್ಡ ಮಟ್ಟಕ್ಕೆ ಬೆಳೆದಿದೆ. ಹೀಗಾಗಿ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.







