ಎಸ್ಸಿ-ಎಸ್ಟಿ, ಹಿಂ.ವರ್ಗಗಳಿಗೆ ಶೇ.56ರಷ್ಟು ಮೀಸಲಾತಿ | ಸಂವಿಧಾನದ ಶೆಡ್ಯೂಲ್-9ಗೆ ಸೇರಿಸಲು ಕೇಂದ್ರಕ್ಕೆ ನಿಯೋಗ ಕೊಂಡೊಯ್ಯಿರಿ : ವಿ.ಎಸ್.ಉಗ್ರಪ್ಪ

ಬೆಂಗಳೂರು : ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಳ ಕಾಯ್ದೆಯನ್ನು ಸಂವಿಧಾನದ ಶೆಡ್ಯೂಲ್ 9ಗೆ ಸೇರಿಸಬೇಕು. ಈ ವಿಚಾರದಲ್ಲಿ ಅನಗತ್ಯ ರಾಜಕಾರಣ ಮಾಡಬೇಡಿ’ ಎಂದು ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಎಚ್ಚರಿಕೆ ನೀಡಿದ್ದಾರೆ.
ಬುಧವಾರ ಇಲ್ಲಿನ ಗಾಂಧಿ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ನಾಯಕರಾದ ಬಿ.ಶ್ರೀರಾಮುಲು, ವಿಜಯೇಂದ್ರ, ಬಸವರಾಜ್ ಬೊಮ್ಮಾಯಿ ತಮ್ಮ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಶೇ.56ರಷ್ಟು ಮೀಸಲಾತಿ ಹೆಚ್ಚಿಸಿ ಬಿಜೆಪಿ ಸರಕಾರವೇ ಈ ಹಿಂದೆ ಆದೇಶ ಹೊರಡಿಸಿತು.
ಆದರೆ, ಮೀಸಲಾತಿ ಹೆಚ್ಚಳ ಸಂಬಂಧ ಸಂವಿಧಾನದ ಶೆಡ್ಯೂಲ್-9ಗೆ ಸೇರಿಸಬೇಕಿತ್ತು. ಆದರೆ, ಆ ಕೆಲಸ ಮಾಡದೇ ರಾಜಕಾರಣ ಮಾಡುತ್ತಿದ್ದಾರೆ. ಅಲ್ಲದೆ, ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮೀಸಲಾತಿ ಹೆಚ್ಚಳ ಮಾಡುತ್ತೇವೆಂದು ಭರವಸೆ ನೀಡುತ್ತಿರುವುದು ಸಲ್ಲ. ಎಸ್ಸಿ-ಎಸ್ಟಿ ವರ್ಗಗಳನ್ನು ತಮ್ಮ ವೈಯಕ್ತಿಕ ರಾಜಕೀಯಕ್ಕೆ ಬಳಕೆ ಮಾಡುವುದು ಒಳ್ಳೆಯದಲ್ಲ’ ಎಂದು ಆಕ್ಷೇಪಿಸಿದರು.
‘ಮೀಸಲಾತಿ ವಿಚಾರದ ಬಗ್ಗೆ ವೇದಿಕೆಯ ಪದಾಧಿಕಾರಿಗಳೆಲ್ಲ ಸೇರಿ ಜನ ಜಾಗೃತಿಗೆ ರಾಜ್ಯದ 27 ಜಿಲ್ಲೆಗಳ ಪ್ರವಾಸ ಮುಗಿಸಿದ್ದೇವೆ. ಪಕ್ಷಾತೀತವಾಗಿ ಬೆಂಬಲ ಆರಂಭವಾಗಿದೆ. ಮಾತನಾಡದವರೂ ಇದರ ಬಗ್ಗೆ ಮಾತನಾಡುತ್ತಿದ್ದಾರೆ. ಮಂತ್ರಿಗಳ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ್ದಾರೆ. ಈಗ ಅನ್ಯಾಯದ ಅರಿವಾಗಿದೆ’ ಎಂದು ಉಗ್ರಪ್ಪ ಹೇಳಿದರು.
‘ಮಾಜಿ ಸಚಿವ ಬಿ.ಶ್ರೀರಾಮುಲು ವೀರಾವೇಶದಿಂದ ಮಾತನಾಡುವುದನ್ನು ಬಿಟ್ಟು ಸಮುದಾಯಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು. ಚುನಾವಣೆ ಕಾರಣಕ್ಕಾಗಿ ಜನರನ್ನು ಒಡೆದು ಆಳುವ ಪ್ರಯತ್ನವನ್ನು ಯಾರೂ ಮಾಡಬಾರದು. ಸಮುದಾಯದ ಬಗ್ಗೆ ಕಳಕಳಿ ಇದ್ದರೆ ಬಿಜೆಪಿ ನಾಯಕರು ಪ್ರಧಾನಿ ಮೋದಿಗೆ ಪತ್ರ ಬರೆಯಬೇಕಿತ್ತು’ ಎಂದು ಅವರು ಆಗ್ರಹಿಸಿದರು.
ಕ್ಷಮೆ ಕೋರಬೇಕು: ಸಾಹಿತಿ ಕೆ.ಎಸ್.ಭಗವಾನ್ ಅವರು ರಾಮಯಾಣದ ವಿಚಾರದಲ್ಲಿ ಮಾತನಾಡಿದ್ದು, ಸರಿಯಲ್ಲ. ಮತ್ತೊಬ್ಬರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರುವ ಪ್ರಯತ್ನ ಒಳ್ಳೆಯ ಬೆಳವಣಿಗೆಯಲ್ಲ. ಕೂಡಲೇ ಕ್ಷಮೆಯಾಚನೆ ಮಾಡಬೇಕು. ಇಲ್ಲವಾದರೆ ಸರಕಾರವೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸದರು.
ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಕಾರ್ಯಾಧ್ಯಕ್ಷ ಎಂ.ನರಸಿಂಹಯ್ಯ, ಖಜಾಂಚಿ ಈ.ರಾಜಪ್ಪ, ಉಪಾಧ್ಯಕ್ಷ ರಾಜಣ್ಣ ಟಿ., ಪ್ರಧಾನ ಕಾರ್ಯದರ್ಶಿ ಸಣ್ಣ ನಾಯಕ್, ರಮೇಶ್ ಹಿರೇಜಂಬೂರು, ನಿವೃತ್ತ ಕುಲಪತಿ ಶ್ರೀರಾಮುಲು, ಕೆ.ವಿ.ನಾಗೇಂದ್ರ, ವೇಣುಗೋಪಾಲ್ ನಾಯಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.






