ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಯುವ ಕಾಂಗ್ರೆಸ್ ಬೈಕ್ ಜಾಥಾ
ಬೆಂಗಳೂರು: ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಯುವ ಕಾಂಗ್ರೆಸ್ ಪಕ್ಷದಿಂದ ಬೈಕ್ ಜಾಥಾ ನಡೆಸಿದ್ದಾರೆ.
ಬುಧವಾರ ನಗರದ ಕಾಂಗ್ರೆಸ್ ಭವನದಿಂದ ಫ್ರೀಡಂಪಾರ್ಕ್ ವರೆಗೂ ಅನಂತ್ ಕುಮಾರ್ ಹೆಗಡೆ ವಿರುದ್ಧ ಯುವಕಾಂಗ್ರೆಸ್ ಕಾರ್ಯಾಧ್ಯಕ್ಷ ಎಚ್.ಎಸ್.ಮಂಜುನಾಥಗೌಡ ನೇತೃತ್ವದಲ್ಲಿ ಬೈಕ್ ಜಾಥಾ ನಡೆಸಲಾಗಿದ್ದು, ಪ್ರತಿಭಟನೆಗೆ ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮಂಜುನಾಥಗೌಡ, ಭಾರತ ಅತಿಡೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ಎಂಬ ಪವಿತ್ರ ಗ್ರಂಥವನ್ನು, ಅನಂತ್ ಕುಮಾರ್ ಹೆಗಡೆ ನಾವು ಸಂಪೂರ್ಣ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳುತ್ತಾರೆ. ಇದು ಬಿಜೆಪಿ ಅಜೆಂಡಾ ಅವರ ಬಾಯಲ್ಲಿ ಹೇಳಿಸುತ್ತಿದೆ ಎಂದರು.
ಬಿಜೆಪಿ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಸಂವಿಧಾನ ಬದಲಾಯಿಸುತ್ತೇವೆ ಎಂದು ಘೋಷಣೆ ಮಾಡಲಿ, ದೇಶದ 140ಕೋಟಿ ಜನರು ತಕ್ಕ ಉತ್ತರ ನೀಡುತ್ತಾರೆ. ಸಂವಿಧಾನ ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ಪಕ್ಷದ 10 ವರ್ಷಗಳ ಸಾಧನೆ ಶೂನ್ಯ. ಆದುದರಿಂದ, ದೇಶದಲ್ಲಿ ಕೋಮುಗಲಭೆ ಸೃಷ್ಟಿಸಿ, ಲೋಕಸಭಾ ಚುನಾವಣೆಯಲ್ಲಿ ಜನರ ದಿಕ್ಕು ತಪ್ಪಿಸಲು ಮಾಡುತ್ತಿರುವ ಷಡ್ಯಂತ್ರವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಅನಂತ್ಕುಮಾರ್ ಹೆಗೆಡೆಯನ್ನು ಸಂಸದ ಸ್ಥಾನದಿಂದ ವಜಾ ಮಾಡಿ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಮಂಜುನಾಥ ಗೌಡ ಒತ್ತಾಯಿಸಿದರು. ಈ ಸಂದರ್ಭದಲ್ಲಿ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.