Belagavi| ಹೆಣ್ಣು ಮಗು ಎಂದು ವಿಷವುಣಿಸಿ ಕೊಂದ ತಂದೆಯ ಬಂಧನ

ಸಾಂದರ್ಭಿಕ ಚಿತ್ರ
ಬೆಳಗಾವಿ : ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ 15 ದಿನಗಳ ಹೆಣ್ಣು ಶಿಶುವಿಗೆ ವಿಷ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ತಂದೆಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಭೀಮರಾಯ ಬಾಣಪ್ಪ ಚಿಪ್ಪಡಿ (28) ಬಂಧಿತ ಆರೋಪಿ. ಆರೋಪಿ ಭೂತರಮನಹಟ್ಟಿ ಗ್ರಾಮದ ನಿವಾಸಿಯಾಗಿದ್ದು, ಮೃತ ಶಿಶು ಪ್ರಿಯಾಂಕಾ (15 ದಿನ) ಎಂದು ಗುರುತಿಸಲಾಗಿದೆ. ಈ ಸಂಬಂಧ ಶಿಶುವಿನ ತಾಯಿ ಶೀಲಾ ಚಿಪ್ಪಡಿ ಕಾಕತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪೊಲೀಸರ ಮಾಹಿತಿ ಪ್ರಕಾರ, ಆರೋಪಿಗೆ ಹೆಣ್ಣು ಮಗು ಜನಿಸಿದ್ದಕ್ಕೆ ಅಸಮಾಧಾನವಿದ್ದು, ಪತ್ನಿಗೆ ಮಗುವನ್ನು ತವರು ಮನೆಯಲ್ಲಿ ಬಿಟ್ಟು ತಾನೊಬ್ಬಳೇ ಮನೆಗೆ ಬರುವಂತೆ ಒತ್ತಡ ಹಾಕುತ್ತಿದ್ದನು. ಮಾರ್ಚ್ 17ರಂದು ಮಧ್ಯಾಹ್ನ ಸುಮಾರು 2 ಗಂಟೆಯ ಸುಮಾರಿಗೆ ಮಗು ಹಾಗೂ ತಾಯಿ ಮಲಗಿದ್ದ ಸಂದರ್ಭವನ್ನು ಬಳಸಿಕೊಂಡು, ಮಗುವಿಗೆ ವಿಷ ಉಣಿಸಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಬಾಟಲಿಯ ತೊಟ್ಟಿಗೆ ವಿಷ ಹಚ್ಚಿ ಮಗುವಿಗೆ ಕುಡಿಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದನು.
ಮಗುವಿನ ಬಾಯಿಂದ ನೊರೆ ಬರುತ್ತಿರುವುದನ್ನು ಗಮನಿಸಿದ ತಾಯಿ ತಕ್ಷಣವೇ ಬೆಳಗಾವಿಯ ಬಿಐಎಂಎಸ್ ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಮಗುವನ್ನು ಮೃತಪಟ್ಟಿರುವುದಾಗಿ ಘೋಷಿಸಿದರು. ಹತ್ತಿ ಬೆಳೆಗೆ ಸಿಂಪಡಿಸುವ ಕೀಟನಾಶಕವನ್ನು ಬಳಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ನಂತರ ಕಾಕತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಪರಾರಿಯಾಗಿದ್ದ ಆರೋಪಿಯನ್ನು ಮಾ. 20ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯನ್ನು ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ.
ಘಟನಾ ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಎಸಿಪಿ ನಾರಾಯಣ ಭಾರಮಣಿ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯಿಂದ ವಿಷ ವಶಪಡಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷಾ ವರದಿ ನಿರೀಕ್ಷಿಸಲಾಗುತ್ತಿದೆ.







