ನವಿಲಗುಡ್ಡ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು: ಸಚಿವ ಮಧು ಬಂಗಾರಪ್ಪ

ಮಧು ಬಂಗಾರಪ್ಪ
ಬೆಳಗಾವಿ (ಸುವರ್ಣ ವಿಧಾನಸೌಧ), ಡಿ.11: ರಾಯಚೂರು ಜಿಲ್ಲೆಯ ದೇವದುರ್ಗ ಕ್ಷೇತ್ರ ವ್ಯಾಪ್ತಿಯಲ್ಲಿನ ಅಮರಾಪುರ ಕ್ರಾಸ್ ಮತ್ತು ನವಿಲಗುಡ್ಡ ವ್ಯಾಪ್ತಿಯಲ್ಲಿ ಸರಕಾರಿ ಪ್ರೌಢಶಾಲೆ ಅವಶ್ಯಕತೆ ಇರುವುದು ಸರಕಾರದ ಗಮನಕ್ಕೆ ಬಂದಿದ್ದು, ಅಮರಾಪುರ ಕ್ರಾಸ್ ಅಥವಾ ನವಿಲಗುಡ್ಡ ಗ್ರಾಮಕ್ಕೆ ಪ್ರೌಢಶಾಲೆಯೊಂದನ್ನು ಮಂಜೂರು ಮಾಡುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ.
ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯೆ ಕರೆಮ್ಮ ನಾಯಕ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದೇವದುರ್ಗದ ಅಮರಾಪುರ ಕ್ರಾಸ್ ಮತ್ತು ನವಿಲಗುಡ್ಡ ಶಾಲೆಗಳ 5 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಸರಕಾರಿ ಅಥವಾ ಅನುದಾನಿತ ಪ್ರೌಢಶಾಲೆಗಳು ಇರುವುದಿಲ್ಲ. ಆದುದರಿಂದ ಈ ಎರಡು ಶಾಲೆಗಳ ಪೈಕಿ ಒಂದನ್ನು ಪ್ರೌಢಶಾಲೆಯಾಗಿ ಉನ್ನತಿಕರಿಸಲು ಸರಕಾರ ಮಂಜೂರಾತಿ ನೀಡಲಿದೆ.
ಇದರಿಂದ ನವಿಲಗುಡ್ಡ, ಬಾಗೂರು, ನೀಲವಂಜಿ, ಕರಡಿಗುಡ್ಡ, ಮಂಡಲಗುಡ್ಡ ಮತ್ತು ಹೇರುಂಡಿ ಶಾಲೆಗಳ ಮಕ್ಕಳಿಗೆ ಅನುಕೂಲವಾಗಲಿದೆ. ಮಲ್ಲೇಗೌಡರ ದೊಡ್ಡಿ ಗ್ರಾಮದಲ್ಲಿ ಕೆಕೆಆರ್ ಡಿಬಿ ಅನುದಾನದಲ್ಲಿ ಶಾಲಾ ಕಟ್ಟಡಗಳು ಹಾಗೂ ಶೌಚಾಲಯಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಇಲ್ಲಿ ಶಿಕ್ಷಕರನ್ನು ನಿಯೋಜಿಸಿ ತಾತ್ಕಾಲಿಕವಾಗಿ ಶಾಲೆ ತೆರೆಯಲಾಗಿದೆ. ಮಲ್ಲೇಗೌಡರ ದೊಡ್ಡಿಯಲ್ಲಿ ನಿಯಮಾನುಸಾರ ಪ್ರಾಥಮಿಕ ಶಾಲೆ ಮಂಜೂರು ಮಾಡಲು ಪರಿಶೀಲನೆ ನಡೆಸುವುದಾಗಿ ಅವರು ಹೇಳಿದರು.





