ನನ್ನ ರಕ್ತದಲ್ಲಿ ಕನ್ನಡವಿದೆ; ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ : ಮಧು ಬಂಗಾರಪ್ಪ

ಮಧು ಬಂಗಾರಪ್ಪ
ಬೆಳಗಾವಿ(ಸುವರ್ಣವಿಧಾನಸೌಧ) : 2025-26ನೇ ಸಾಲಿನಲ್ಲಿ 900 ಸರಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆ.ಪಿ.ಎಸ್. ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸೋಮವಾರ ಪರಿಷತ್ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಚಿದಾನಂದ್ಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ರಕ್ತದಲ್ಲಿ ಕನ್ನಡವಿದೆ. ಹಾಗಾಗಿ ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಾವು ಬಜೆಟ್ನಲ್ಲಿ 500 ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಘೋಷಣೆ ಮಾಡಿದ್ದೇವೆ ಎಂದ ಸಚಿವರು, 2025-26ನೇ ಸಾಲಿನಲ್ಲಿ ಈಗಾಗಲೇ ಕಾರ್ಯಾಚರಣೆಯಲ್ಲಿರುವ 309 ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ತರಗತಿವರೆಗೆ ಒಟ್ಟು 2,72,464 ವಿದ್ಯಾರ್ಥಿಗಳು ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದರು.
ಈ ಕೆ.ಪಿ.ಎಸ್. ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಿಕ್ಷಕರ ಕೋರಿಕೆ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಪರಿಪೂರ್ಣವಾಗಿ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಪ್ರಕ್ರಿಯೆಯನ್ನು ತರ್ಕಬದ್ಧಗೊಳಿಸುವ ಮೂಲಕ ಕೆ.ಪಿ.ಎಸ್. ಶಾಲೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಕ್ರಮವಹಿಸಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು.
ಉತ್ತಮ ಕಲಿಕೆ, ಉಜ್ವಲ ಭವಿಷ್ಯ ಎಂಬುದು ಕೆ.ಪಿ.ಎಸ್. ಶಾಲೆಗಳ ಧ್ಯೇಯ ವಾಕ್ಯವಾಗಿದ್ದು, ಪ್ರತಿ ಮಗುವೂ ಶಾಲೆಯಲ್ಲಿರಬೇಕು ಮತ್ತು ಚೆನ್ನಾಗಿ ಕಲಿಯಬೇಕು ಎಂಬ ಮಹತ್ತರ ಉದ್ದೇಶದಿಂದ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳು ಏಕರೂಪದ ನೀತಿಯನ್ನು ಪಾಲಿಸುವಂತೆ ‘ಕರ್ನಾಟಕ ಪಬ್ಲಿಕ್ ಶಾಲಾ ಮಾನಕಗಳು’ ಎಂಬ ಕೈಪಿಡಿಯನ್ನು ಸಿದ್ಧಪಡಿಸಲಾಗಿದ್ದು, ಅದರಲ್ಲಿ ನಿಗದಿಪಡಿಸಿರುವ ಗುಣಮಟ್ಟದ ಮಾನದಂಡಗಳಂತೆ ಪ್ರತಿ ಶಾಲೆಯಲ್ಲಿ ಕನಿಷ್ಠ 1200 ವಿದ್ಯಾರ್ಥಿಗಳಿಗೆ ಅವಶ್ಯಕವಿರುವ ಸಮರ್ಪಕ ಶೈಕ್ಷಣಿಕ ಮತ್ತು ಭೌತಿಕ ಸೌಕರ್ಯಗಳನ್ನು ಒದಗಿಸಿ ಉನ್ನತೀಕರಿಸಲಾಗುವುದು ಎಂದು ಮಧು ಬಂಗಾರಪ್ಪ ಹೇಳಿದರು.







