ಸಮ್ಮಿಶ್ರ ಸರಕಾರ ಕೆಡವಿದ್ದು ನಾನೇ : ರಮೇಶ್ ಜಾರಕಿಹೊಳಿ

ಬೆಳಗಾವಿ : ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಕೆಡವಿದ್ದು ನಾನೇ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ನೇತೃತ್ವದಲ್ಲೇ ಕುಮಾರಸ್ವಾಮಿ ಸಮ್ಮಿಶ್ರ ಸರಕಾರವನ್ನು ಕೆಡವಿದ್ದೇವೆ. ಆಪರೇಷನ್ ಕಮಲದ ಮೂಲ ಸೂತ್ರದಾರ ನಾನೇ. ಕುಮಾರಸ್ವಾಮಿ ಸರಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣವಲ್ಲ. ಮೂಲ ಕಾರಣ ಡಿ.ಕೆ.ಶಿವಕುಮಾರ್ ಎಂದು ರಮೇಶ ಜಾರಕಿಹೊಳಿ ಎಂದರು.
ಡಿ.ಕೆ.ಶಿವಕುಮಾರ್ ಅವರಿಂದಲೇ ಸರಕಾರ ಪತನವಾಯಿತು ಎನ್ನುವುದು ರಾಜ್ಯದ ಚಿಕ್ಕಮಕ್ಕಳಿಗೂ ಗೊತ್ತಿದೆ ಎಂದ ಅವರು, ಡಿ.ಕೆ.ಶಿವಕುಮಾರ್ ಶಾಸಕರ ಸಂಖ್ಯಾಬಲದಲ್ಲಿ ದುರ್ಬಲರಿದ್ದಾರೆ. ಡಿ.ಕೆ.ಶಿವಕುಮಾರ್ 50 ಶಾಸಕರ ಸಂಖ್ಯಾಬಲ ತೋರಿಸಿದರೆ ಇವತ್ತೇ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ. ಆದರೆ ಅವರಿಗೆ ಶಾಸಕರ ಬೆಂಬಲವಿಲ್ಲ ಎಂದು ಹೇಳಿದರು.
ಸಿಎಂ ಬದಲಾವಣೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಕಾಂಗ್ರೆಸ್ ಪಕ್ಷದ ಆಂತರಿಕ ಜಗಳ. ಯಾರನ್ನೇ ಸಿಎಂ ಮಾಡಿಕೊಳ್ಳಲಿ, ಅದಕ್ಕೆ ನಮಗೆ ಸಂಬಂಧವಿಲ್ಲ. ನಾನು ಕಾಂಗ್ರೆಸ್ನಲ್ಲಿ ಇದ್ದಾಗ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಹೇಳಿದ್ದೆ. ಈಗ ನಾನು ಬಿಜೆಪಿಯಲ್ಲಿ ಇದ್ದೇನೆ. ಇವತ್ತಿನ ಸನ್ನಿವೇಶದಲ್ಲಿ ಅದನ್ನು ಕೇಳುವುದು ಸರಿಯಲ್ಲ ಎಂದು ಹೇಳಿದರು.
ಎಚ್.ಡಿ.ದೇವೇಗೌಡರು, ಸಿದ್ದರಾಮಯ್ಯ ಕಾರಣದಿಂದ ಕುಮಾರಸ್ವಾಮಿ ಸರಕಾರ ಬಿದ್ದಿತು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ದೇವೇಗೌಡರು ಹಿರಿಯ ನಾಯಕರು, ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಡಿ.ಕೆ.ಶಿವಕುಮಾರ್ ಅವರು ಬೆಳಗಾವಿ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿದ್ದಕ್ಕೆ ಆಪರೇಷನ್ ಕಮಲ ಮಾಡಬೇಕಾಯಿತು. ಆಪರೇಷನ್ ಕಮಲಕ್ಕೂ ಸಿದ್ದರಾಮಯ್ಯ ಅವರಿಗೆ ಯಾವುದೇ ಸಂಬಂಧವಿಲ್ಲ. ಡಿಕೆಶಿ ಬೆಳಗಾವಿ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿದ್ದರಿಂದ ನಾವು ಸರಕಾರ ಕೆಡವಿದ್ದೇವೆ ಎಂದು ಹೇಳಿದರು.







