ವಿಧಾನಸಭೆಯಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ’ ವಿಧೇಯಕ ಮಂಡನೆ

ಬೆಳಗಾವಿ (ಸುವರ್ಣ ವಿಧಾನಸೌಧ), ಡಿ.11: ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿಪಡಿಸುವುದು, ಜಾತಿ ಅಥವಾ ಸಮುದಾಯಗಳ ಪಂಚಾಯತ್ ಸೇರಿದಂತೆ ರಾಜ್ಯದಲ್ಲಿ ಒಬ್ಬ ವ್ಯಕ್ತಿ ಅಥವಾ ಅವರ ಕುಟುಂಬ ಸದಸ್ಯರನ್ನೂ ಒಳಗೊಂಡಂತೆ ವ್ಯಕ್ತಿಗಳ ಗುಂಪು ಗುರಿಯಾಗಿಸಿಕೊಂಡು ಸಾಮಾಜಿಕವಾಗಿ ಬಹಿಷ್ಕರಿಸಿದರೆ ಅಂತವರಿಗೆ ಗರಿಷ್ಠ 3 ವರ್ಷದ ವರೆಗಿನ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ಗಳ ವರೆಗೆ ದಂಡ ವಿಧಿಸಲು ಪ್ರಸ್ತಾವಿಸಲಾಗಿರುವ ಮಹತ್ವದ ‘ಕರ್ನಾಟಕ ಸಾಮಾಜಿಕ ಬಹಿಷ್ಕಾರ(ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025’ ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಗುರುವಾರ ವಿಧಾನಸಭೆಯ ಶಾಸನ ರಚನಾ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು, ಕರ್ನಾಟಕ ಸಾಮಾಜಿಕ ಬಹಿಷ್ಕಾರ(ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025’ ಅನ್ನು ಮಂಡಿಸಿದರು. ಬಳಿಕ, ಸ್ಪೀಕರ್ ಯು.ಟಿ.ಖಾದರ್ ಅವರು ವಿಧೇಯಕ ಮಂಡನೆಯ ಪ್ರಸ್ತಾಪವನ್ನು ಅಂಗೀಕರಿಸಲಾಗಿದೆ ಎಂದು ಪ್ರಕಟಿಸಿದರು.
ವಿಧೇಯಕದಲ್ಲಿ ಏನಿದೆ? :
ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ಅಂತವರಿಗೆ 1 ಲಕ್ಷ ರೂ. ದಂಡ ಹಾಗೂ 3 ವರ್ಷದವರೆಗಿನ ಜೈಲು ಶಿಕ್ಷೆಗೆ ಗುರಿಪಡಿಸುವ ವಿಧೇಯಕ ಇದಾಗಿದೆ. ಮುಂದೆ ಸಾಮಾಜಿಕ ಬಹಿಷ್ಕರಿಸುವ ತೀರ್ಮಾನ ತೆಗೆದುಕೊಂಡವರು, ಬಹಿಷ್ಕಾರ ಮಾಡಲು ನಡೆಸುವ ಸಭೆ ಹಾಗೂ ಪಂಚಾಯಿತಿ ನಡೆಸಿದವರನ್ನು ಅಪರಾಧಿಗಳು ಎಂದು ಪರಿಗಣಿಸಲಾಗುವುದು.
ಬಹಿಷ್ಕಾಕ್ಕೆ ಒತ್ತಡ ಹೇರಲು ಪರೋಕ್ಷವಾಗಿ ಕಾರಣರಾದವರು, ಬಹಿಷ್ಕಾದ ಪರವಾಗಿ ಮತ ಹಾಕಿದವರು ಅಥವಾ ಚರ್ಚೆಯಲ್ಲಿ ಪಾಲ್ಗೊಂಡವರನ್ನೂ ಅಪರಾಧಿಗಳೆಂದು ನಿರ್ಧರಿಸಲಾಗುತ್ತದೆ. ಬಹಿಷ್ಕಾಕ್ಕೆ ಒಳಗಾಗುವವರು ಪೊಲೀಸ್ ಠಾಣೆ ಅಥವಾ ನ್ಯಾಯಾಧೀಶರಿಗೆ ನೇರವಾಗಿ ದೂರು ಸಲ್ಲಿಸಬಹುದಾಗಿದೆ. ಸಾಮಾಜಿಕ ಬಹಿಷ್ಕಾದಂತಹ ನಿರ್ಧಾರ ತೆಗೆದುಕೊಳ್ಳಲು ನಡೆಸುವ ಸಭೆಗಳ ಕುರಿತು ಮಾಹಿತಿ ಬಂದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಿಷೇಧಿಸುವ ಆದೇಶ ಹೊರಡಿಸಬಹುದು.
ಗ್ರೂಪ್-ಎ ಅಧಿಕಾರಿಗಳನ್ನು ಸಾಮಾಜಿಕ ಬಹಿಷ್ಕಾರ ತಡೆ ಅಧಿಕಾರಿಗಳನ್ನಾಗಿ ನಿಯೋಜಿಸಬಹುದಾಗಿದೆ. ಪ್ರಮುಖವಾಗಿ ಗ್ರಾಮ ಅಥವಾ ಸಮುದಾಯದಿಂದ ಹೊರಹಾಕುವುದು, ಧಾರ್ಮಿಕ, ಸಾರ್ವಜನಿಕ ಸ್ಥಳಗಳ ಬಳಕೆಗೆ ನಿರ್ಬಂಧ ವಿಧಿಸುವುದು, ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿ ಮಾಡುವುದು, ವ್ಯವಹಾರ ಅಥವಾ ಉದ್ಯೋಗ ತಿರಸ್ಕಾರ ಮಾಡುವುದು, ಶಾಲೆ, ಆಸ್ಪತ್ರೆ, ಸಮುದಾಯ ಭವನಗಳ ಪ್ರವೇಶಕ್ಕೆ ತಡೆಯೊಡ್ಡುವುದು, ಸೇವೆಗಳು, ಅವಕಾಶಗಳನ್ನು ನಿರಾಕರಿಸುವುದು.
ಅಲ್ಲದೆ, ಸಾಮಾಜಿಕ, ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ತಡೆಯೊಡ್ಡುವುದು, ಮದುವೆ, ಅಂತ್ಯಕ್ರಿಯೆಗಳಲ್ಲಿ ಭಾಗವಹಿಸುವುದಕ್ಕೆ ತಡೆಯೊಡ್ಡುವುದು, ವ್ಯಾಪಾರ, ಸಾಮಾಜಿಕ ಸಂಬಂಧಗಳಿಗೆ ತಡೆಯೊಡ್ಡುವುದು, ಮಕ್ಕಳನ್ನು ಒಟ್ಟಿಗೆ ಆಡಲು ಅಡ್ಡಿಪಡಿಸುವುದು, ಲಿಂಗತ್ವದ ಆಧಾರದ ಮೇಲೆ ಭೇದ ಮಾಡುವುದು, ಮಾನವ ಹಕ್ಕುಗಳನ್ನು ನಿರಾಕರಿಸುವುದು ಹಾಗೂ ಬಟ್ಟೆ, ಭಾಷೆ, ಸಾಂಸ್ಕೃತಿಕ ಭೇದ ಎಸಗುವುದನ್ನು ಈ ಪ್ರಸ್ತಾಪಿತ ವಿಧೇಯಕದಲ್ಲಿ ನಿಷೇಧಿಸಲಾಗಿದೆ.
‘ಕೆಟ್ಟ ಮತ್ತು ಅಸಂವಿಧಾನಿಕ ಆಚರಣೆಗಳೊಂದಿಗೆ ವ್ಯವಹರಿಸಲು ಪ್ರಸ್ತುತವಿರುವ ಕಾನೂನುಗಳು ಸಾಕಾಗುತ್ತಿಲ್ಲ. ಆದುದರಿಂದ ಸರಕಾರವು ಸದರಿ ಉದ್ದೇಶಕ್ಕಾಗಿ ಶಾಸನವನ್ನು ಅಧಿನಿಯಮಿತಿಗೊಳಿಸುವುದು ಅಗತ್ಯ ಎಂದು ಪರಿಗಣಿಸಿದೆ. ಹೀಗಾಗಿ ಜಾತಿ ಅಥವಾ ಸಮುದಾಯ ಪಂಚಾಯತಿಗಳು ಅಥವಾ ಇದರ ಸದಸ್ಯರ ಮೂಲಕ ವಿವಿಧ ಹಂತಗಳಲ್ಲಿ ಸಾಮಾಜಿಕ ಬಹಿಷ್ಕಾರ, ಸಾಮಾಜಿಕ ಅಸಮಾನತೆ ಮತ್ತು ಸಾಮಾಜಿಕ ಅಸಾಮರ್ಥತೆಯನ್ನು ವಿಧಿಸುವ ಕೆಟ್ಟ, ಆಚರಣೆಗಳನ್ನು ಹಾಗೂ ಅಂತಹ ಸಾಮಾಜಿಕ ಬಹಿಷ್ಕಾವನ್ನು ತಡೆಯಲು ಸಾಮಾಜಿಕ ಬಹಿಷ್ಕಾರ ತಡೆಗೆ ಅಧಿಕಾರಿಯನ್ನು ನೇಮಿಸಲೂ ಉದ್ದೇಶಿತ ವಿಧೇಯಕದಲ್ಲಿ ಪ್ರಸ್ತಾವಿಸಲಾಗಿದೆ’







