‘ಒನ್ ಮ್ಯಾನ್ ಶೋ' ವಿಚಾರ ನಾನು ನಂಬುವುದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಯಾರೊಬ್ಬರ ಶ್ರಮದಿಂದ ಬಂದಿಲ್ಲ. ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಹಿರಿಯ ನಾಯಕರವರೆಗೆ ಎಲ್ಲರ ಶ್ರಮವೂ ಇದೆ. ಹಾಗಾಗಿ, ‘ಒನ್ ಮ್ಯಾನ್ ಶೋ' ವಿಚಾರ ನಾನು ನಂಬುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ರವಿವಾರ ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರಾಗಬೇಕು, ಯಾವಾಗ ಆಗಬೇಕು ಎಂದು ಹೈಕಮಾಂಡ್ ನಿರ್ಧರಿಸುತ್ತದೆ. ಎರಡೂವರೆ ವರ್ಷದ ನಂತರ ಅಧಿಕಾರ ಹಸ್ತಾಂತರ ಮಾಡಬೇಕು ಎಂಬ ವಿಚಾರ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.
ನಮಗಿರುವ 1.25 ಕೋಟಿ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ತನ್ನಿಂದಲೇ ಸರಕಾರ ರಚನೆಯಾಗಿದೆ ಎಂದು ಯಾರಾದರೂ ಹೇಳಿದರೆ ಅದನ್ನು ನಾನು ಒಪ್ಪುವುದಿಲ್ಲ. ಅದು ನ್ಯಾಯವೂ ಅಲ್ಲ. ಎಲ್ಲರದ್ದೂ ಸಮಾನ ಶ್ರಮವಿದೆ, ಸಮಾನ ಪ್ರಾಧಾನ್ಯತೆ ಸಿಗಬೇಕು ಎಂದು ಅವರು ಹೇಳಿದರು.
ಡಾ.ಜಿ.ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಎಂಟು ವರ್ಷ ದುಡಿದಿದ್ದಾರೆ. ಅವರ ಕಾಲದಲ್ಲಿ ಮಾಡಿದ ಕಾರ್ಯಕ್ರಮಗಳ ಕಾರಣದಿಂದ ಕಾಂಗ್ರೆಸ್ಗೆ ಬಲ ಬಂದಿದೆ. ಸರಕಾರ ರಚನೆ ಮಾಡುವಷ್ಟು ಪಕ್ಷವನ್ನು ಸಿದ್ಧಪಡಿಸಿದವರಲ್ಲಿ ಅವರೂ ಒಬ್ಬರು. ಅವರಿಗೂ ಸಮಾನ ಅವಕಾಶ ಸಿಗಬೇಕು ಎಂಬುದು ನನ್ನ ಒತ್ತಾಸೆ ಎಂದು ಅವರು ಉಲ್ಲೇಖಿಸಿದರು.
ಕೆಲವರಿಗೆ ಅಧಿಕಾರ ಇಂದೇ ಬರಬಹುದು ಅಥವಾ ಇಂದೇ ಹೋಗಬಹುದು. ಮತ್ತೆ ಕೆಲವರಿಗೆ ಒಂದು ವರ್ಷ ಬಿಟ್ಟು ಬರಬಹುದು, ಕೆಲವರಿಗೆ ಹೋಗಲೂಬಹುದು. ಆದರೆ, ಇದಕ್ಕೆ 'ತ್ಯಾಗ' ಎಂಬ ಪದ ಸರಿಯಲ್ಲ' ಎಂದೂ ಅವರು ನುಡಿದರು.
ಪರಿಶಿಷ್ಟರು, ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ: ‘ಕಾಂಗ್ರೆಸ್ ಪಕ್ಷಕ್ಕೆ ಪರಿಶಿಷ್ಟರು, ಅಲ್ಪಸಂಖ್ಯಾತ ಸಮುದಾಯದವರೇ ಮುಖ್ಯ ಮತದಾರರು. ಹಾಗಾಗಿ, ಆ ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಬೇಕಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಹಿಮಾಲಯ ಏರಿದವರಿಗೆ ಬೆಲೆ ಇಲ್ಲವೇ?:
‘1960ರಲ್ಲಿ ತೇನ್ಸಿಂಗ್ ಹಿಮಾಲಯ ಪರ್ವತ ಏರಿದರು. ಆಗ ಜಗತ್ತಿನ ಎಲ್ಲ ಪತ್ರಿಕೆಗಳೂ ತೇನ್ಸಿಂಗ್ ಬಗ್ಗೆ ಮಾತ್ರ ಬರೆದವು. ಅವರ ಜೊತೆಗೆ ಇನ್ನೂ 14 ಜನ ಕೂಡ ಇದ್ದರು. ಅವರ ಹೆಸರು ಎಲ್ಲೂ ಬರಲಿಲ್ಲ. ಇದು ಹಾಗೇ ಆಗಿದೆ’ ಎಂದು ಸಚಿವ ಸತೀಶ ಜಾರಕಿಹೊಳಿ ಮಾರ್ಮಿಕವಾಗಿ ನುಡಿದರು.







