ಬಳ್ಳಾರಿಯಲ್ಲಿ ಸಂಭ್ರಮದ 79ನೇ ಸ್ವಾತಂತ್ರೋತ್ಸವ ಆಚರಣೆ

ಬಳ್ಳಾರಿ : ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಂತಹ ಅನೇಕ ಮಹಾನ್ ಹೋರಾಟಗಾರರ, ವೀರ ಯೋಧರ ಸ್ಮರಣೆ ಎಲ್ಲರ ಆದ್ಯ ಕರ್ತವ್ಯ. ಅವರ ತ್ಯಾಗ, ಬಲಿದಾನಗಳ ಪ್ರತೀಕವೇ ಸ್ವಾತಂತ್ರ್ಯ ಆಗಿದೆ ಎಂದು ಸಚಿವ ರಹೀಂ ಖಾನ್ ಅವರು ಹೇಳಿದರು.
ಜಿಲ್ಲಾಡಳಿತದಿಂದ ನಗರದ ಬಿಎಂಸಿಆರ್ಸಿ ಮೈದಾನದ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣಾ ನೆರವೇರಿಸಿ, ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ, ಬಳಿಕ ಧ್ವಜಾರೋಹಣಾ ಸಂದೇಶ ನೀಡಿ ಅವರು ಮಾತನಾಡಿದರು.
ಭಾರತದಂತಹ ವಿಶಾಲವಾದ ರಾಷ್ಟ್ರ ವೈವಿಧ್ಯತೆಯ ಮಧ್ಯೆಯೂ ಅದ್ವಿತೀಯವಾದ ಅಖಂಡತೆಯನ್ನು ಉಳಿಸಿಕೊಂಡು ವಿಶ್ವದ ಪ್ರಮುಖ ಅಭಿವೃದ್ದಿ ಶೀಲ ರಾಷ್ಟ್ರವಾಗಿ ಹೊರ ಹೊಮ್ಮುತ್ತಿದೆ. ನಮ್ಮ ದೇಶವು ಹಲವಾರು ಜಾತಿ, ಸಮುದಾಯಗಳಿಂದ ಒಗ್ಗೂಡಿದ ಜಾತ್ಯಾತೀತ ರಾಷ್ಟ್ರವಾಗಿದೆ ಎಂದು ಸಚಿವರು ಬಣ್ಣಿಸಿದರು.
ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆ ಮತ್ತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳನ್ನೊಳಗೊಂಡ 31 ತುಕಡಿಗಳಿಂದ ಶಿಸ್ತುಬದ್ಧ ಆಕರ್ಷಕ ಪಥಸಂಚಲನ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ, ಗೌರವಿಸಲಾಯಿತು.
ಬಳಿಕ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಸ್ವಾತಂತ್ರೋತ್ಸವದ ನಿಮಿತ್ತ ಸಾಮೂಹಿಕ ನೃತ್ಯ, ದೇಶ ಭಕ್ತಿಗೀತೆ, ಗಾಯನ ಮತ್ತು ವೇಷಧಾರಿಗಳಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಸಂಸದ ಈ.ತುಕಾರಾಮ್, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಉಪಮೇಯರ್ ಡಿ.ಸುಕುಂ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಳ್ಳಾರಿ ವಲಯ ಪೊಲೀಸ್ ಮಹಾನೀರಿಕ್ಷಕರಾದ ವರ್ತಿಕ ಕಟಿಯಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಪಿ.ಪ್ರಮೋದ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಾನಗರ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.







