Ballari | ಶಾಂತಿ–ಸೌಹಾರ್ದದಿಂದ ಗಣೇಶೋತ್ಸವ ಆಚರಿಸಿ : ಎಸ್ಪಿ ಡಾ.ಸುಮನ್ ಡಿ.ಪೆನ್ನಕರ್

ಬಳ್ಳಾರಿ/ಕಂಪ್ಲಿ: ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಪ್ರಮುಖ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಗಣೇಶೋತ್ಸವಕ್ಕೆ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತಿದ್ದು, ಸ್ಥಳೀಯ ಮುಖಂಡರು ಹಾಗೂ ಗಣಪತಿ ಮಂಡಳಿಯವರು ಜವಾಬ್ದಾರಿಯುತವಾಗಿ ಹಬ್ಬವನ್ನು ಆಚರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನಕರ್ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಶನಿವಾರ ಸಂಜೆ ನಡೆದ ಗೌರಿ–ಗಣೇಶ ಹಬ್ಬದ ಪೂರ್ವಭಾವಿ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಣೇಶೋತ್ಸವಕ್ಕೆ ಪ್ರಾಚೀನ ಇತಿಹಾಸವಿದ್ದು, ಯುವಕರು ಜಾನಪದ, ನಾಟಕ, ಭಕ್ತಿಗೀತೆ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಹಬ್ಬವನ್ನು ಸಡಗರ–ಸಂಭ್ರಮದಿಂದ ಆಚರಿಸಬೇಕು ಎಂದರು.
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆವರೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಈಗಾಗಲೇ ಡಿಜೆ ವ್ಯವಸ್ಥೆಯನ್ನು ನಿಷೇಧಿಸಲಾಗಿದ್ದು, ಕಡಿಮೆ ಶಬ್ದದ ಸೌಂಡ್ ಸಿಸ್ಟಮ್ಗಳನ್ನು ಮಾತ್ರ ಬಳಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಯಮಗಳನ್ನು ಪಾಲಿಸಿ ಹಬ್ಬ ಆಚರಿಸುವಂತೆ ಮನವಿ ಮಾಡಿದರು.
ನಂತರ ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಕೆ.ಬಿ. ವಾಸುಕುಮಾರ, ಕಂಪ್ಲಿಯಲ್ಲಿ ಎಲ್ಲ ಸಮುದಾಯಗಳ ಸಹಕಾರದಿಂದ ಹಬ್ಬಗಳು ಶಾಂತಿಯುತವಾಗಿ ನಡೆಯುತ್ತಿವೆ. ಈ ಬಾರಿಯೂ ಗಣಪತಿ ಮಂಡಳಿಯವರು ಸೌಹಾರ್ದತೆ ಕಾಪಾಡಿ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಈಗಾಗಲೇ ಕಂಪ್ಲಿ ತಾಲೂಕು ವ್ಯಾಪ್ತಿಯ ನಂ.10 ಮುದ್ದಾಪುರ ಹಾಗೂ ಗೋನಾಳ ಗ್ರಾಮಗಳಲ್ಲಿ ಗಣೇಶೋತ್ಸವಕ್ಕೆ ನಿಷೇಧ ವಿಧಿಸಲಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು, ಗಣಪತಿ ವಿಸರ್ಜನೆಗಾಗಿ ತುಂಗಭದ್ರ ನದಿಗೆ ತೆರಳುವ ಕೋಟೆ ರಸ್ತೆಯಲ್ಲಿ ಬೀದಿ ದೀಪಗಳ ಕೊರತೆ ಇರುವುದರಿಂದ ಕತ್ತಲಿನಲ್ಲಿ ವಿಸರ್ಜನೆ ನಡೆಸಬೇಕಾಗಿದೆ. ರಸ್ತೆ ಹಾಗೂ ನದಿ ತೀರದಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ ಮಾಡಬೇಕು ಮತ್ತು ವಿಸರ್ಜನೆ ವೇಳೆ ರಾತ್ರಿ ವಿದ್ಯುತ್ ಕಡಿತ ಮಾಡಬಾರದು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಡಿವೈಎಸ್ಪಿ ಪ್ರಸಾದ್ ಗೋಖುಲೆ, ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಜೆಇ ವಿನೋದ, ಕಂದಾಯ ಇಲಾಖೆಯ ಮೌನೇಶ್, ಎಪಿಎಂಸಿ ಅಧ್ಯಕ್ಷ ಎನ್. ಹಬೀಬ್ ರೆಹಮಾನ್, ಮುಖಂಡರಾದ ಕೆ.ಎಂ. ಹೇಮಯ್ಯಸ್ವಾಮಿ, ಸೈಯದ್ ಉಸ್ಮಾನ್, ಹೆಚ್.ಪಿ. ಶಿಕಾರಿ ರಾಮು, ಬೆಳಗೋಡ್ಹಾಳ್ ದೊಡ್ಡ ಬಸವರಾಜ ಬಡಗಿ, ಗೋಪಾಲ, ಜಾಫರ್, ಮನೋಜಗೌಡ ಸೇರಿದಂತೆ ಗಣಪತಿ ಮಂಡಳಿಯ ಪದಾಧಿಕಾರಿಗಳು ಹಾಗೂ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.






