Ballari | ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಿ: ಎಡಿಸಿ ಮಹಮ್ಮದ್ ಝಬೇರ್.ಎನ್

ಬಳ್ಳಾರಿ: ಜಿಲ್ಲಾಡಳಿತದಿಂದ ಜ.14 ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝಬೇರ್ ಎನ್ ಅವರು ಹೇಳಿದರು.
ನಗರದ ಜಿಲ್ಲಾಡಳಿತ ಆವರಣದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ ಕುರಿತು ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಈ ಬಾರಿ ಜಯಂತಿಯನ್ನು ಅರ್ಥಪೂರ್ಣವಾಗಿ ನಡೆಸಲಾಗುತ್ತದೆ. ಜಯಂತಿಯಂದು ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದು ಇದಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಮೆರವಣಿಗೆ ನಂತರ ವೇದಿಕೆ ಕಾರ್ಯಕ್ರಮ ಇರಲಿದ್ದು, ಶಿಷ್ಟಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಜಯಂತಿ ಕಾರ್ಯಕ್ರಮದಂದು ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಲಘು ಉಪಹಾರ ವ್ಯವಸ್ಥೆ ಕೈಗೊಳ್ಳಬೇಕು ಎಂದು ಹೇಳಿದರು.
ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಗರದಲ್ಲಿ ಜಯಂತಿ ಕುರಿತು ಬ್ಯಾನರ್ ಅಳವಡಿಸಲು ಕಡ್ಡಾಯವಾಗಿ ಮಹಾನಗರ ಪಾಲಿಕೆಯಿಂದ ಅನುಮತಿ ತೆಗೆದುಕೊಳ್ಳಬೇಕು. ಅನುಮತಿ ಇಲ್ಲದೇ ಬ್ಯಾನರ್ ಅಳವಡಿಕೆ ಅವಕಾಶವಿಲ್ಲ ಎಂದ ಅವರು ಸಮಾಜದ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮಹನೀಯರ ಕುರಿತು ವಿಶೇಷ ಉಪನ್ಯಾಸ, ಆಯಾ ಸಮುದಾಯದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಜಯಂತಿಯನ್ನು ತಾಲ್ಲೂಕು, ಗ್ರಾಮ ಪಂಚಾಯತಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಆಚರಿಸಲಾಗುವುದು ಎಂದರು.
ಸರ್ಕಾರದ ಆದೇಶದಂತೆ ಸಭೆ ಸಮಾರಂಭಗಳಲ್ಲಿ ಪುಸ್ತಕ ನೀಡಲು ಮಾತ್ರ ಅವಕಾಶವಿದ್ದು, ಬೇರೆ ಯಾವುದೇ ತರದ ಹೂಗುಚ್ಛ, ಫಲಬುಟ್ಟಿ ಇನ್ನಿತರೆ ವಸ್ತುಗಳು ನೀಡುವಂತಿಲ್ಲ.
ಸಭೆಯಲ್ಲಿ ಸಮಾಜದ ಮುಖಂಡರುಗಳು ತಮ್ಮ ಸಲಹೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.







