Ballari | ತಾಲೂಕಿನ ವಿವಿಧ ಗ್ರಾಮಗಳಲ್ಲಿ ಎಸ್ಐಆರ್ ಕಾರ್ಯ ಪರಿಶೀಲಿಸಿದ ಶಾಸಕಿ ಅನ್ನಪೂರ್ಣ ತುಕಾರಾಂ

ಸಂಡೂರು/ಬಳ್ಳಾರಿ, ಜು.10: ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕಿ ಅನ್ನಪೂರ್ಣ ಈ.ತುಕಾರಾಂ ಅವರು ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್ಐಆರ್) ಕಾರ್ಯದ ಪ್ರಗತಿಯನ್ನು ಗುರುವಾರ ಖುದ್ದಾಗಿ ಪರಿಶೀಲಿಸಿದರು.
ಬಂಡ್ರಿ ಗ್ರಾಮ ಪಂಚಾಯಿತಿ ಹಾಗೂ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿರೇನಹಳ್ಳಿ, ಹುಲಿಕುಂಟೆ, 72 ಮಲ್ಲಾಪುರ, ಕೊಂಡಾಪುರ, ಕಾಟಿನಕಂಬ ಮತ್ತು ನಿಡುಗುರ್ತಿ ಗ್ರಾಮಗಳಲ್ಲಿ ನಡೆಯುತ್ತಿರುವ ಎಸ್ಐಆರ್ ಕಾರ್ಯಾಚರಣೆಗೆ ಭೇಟಿ ನೀಡಿದ ಶಾಸಕರು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒ) ಹಾಗೂ ಸಂಬಂಧಿತ ಸಿಬ್ಬಂದಿಯಿಂದ ಕಾರ್ಯದ ಪ್ರಗತಿ ಕುರಿತು ಮಾಹಿತಿ ಪಡೆದರು.
ಈ ವೇಳೆ ಅಧಿಕಾರಿಗಳಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದ ಅವರು, ಮತದಾರರ ಮಾಹಿತಿಯ ಸಂಗ್ರಹ ಮತ್ತು ಪರಿಶೀಲನಾ ಕಾರ್ಯದಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಅತ್ಯಂತ ಎಚ್ಚರಿಕೆಯಿಂದ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬ ಅರ್ಹ ಮತದಾರರಿಗೂ ನ್ಯಾಯ ದೊರೆಯುವ ರೀತಿಯಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಸುವಂತೆ ಸೂಚಿಸಿದರು.
ಕಾರ್ಯದ ಪ್ರಗತಿ, ಅರ್ಜಿಗಳ ಸ್ವೀಕಾರ ಹಾಗೂ ದಾಖಲೆಗಳ ಪರಿಶೀಲನೆ ಸೇರಿದಂತೆ ವಿವಿಧ ಅಂಶಗಳ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದು ಅಗತ್ಯ ಮಾರ್ಗದರ್ಶನ ನೀಡಿದರು.
ಬಳಿಕ ಕಳೆದ ತಿಂಗಳು ಭೂಮಿಪೂಜೆ ನೆರವೇರಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಗಳಿಗೂ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು. ಕಾಮಗಾರಿಗಳನ್ನು ನಿಗದಿತ ಗುಣಮಟ್ಟ ಮತ್ತು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ಬಿಎಲ್ಒಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.






