Ballari | ಆಧುನಿಕ ತಂತ್ರಜ್ಞಾನದಿಂದ ಪತ್ರಿಕೆಗಳ ಸ್ವರೂಪ ಬದಲಾಗಿದೆ: ತಹಶೀಲ್ದಾರ್ ಜೂಗಲ್ ಮಂಜುನಾಯಕ

ಕಂಪ್ಲಿ (ಬಳ್ಳಾರಿ): ಆಧುನಿಕ ತಂತ್ರಜ್ಞಾನ ಹಾಗೂ ಕೃತಕ ಬುದ್ಧಿಮತ್ತೆ (ಎಐ)ಯ ಬೆಳವಣಿಗೆಯಿಂದ ಪತ್ರಿಕೆಗಳ ಸ್ವರೂಪದಲ್ಲಿ ಮಹತ್ತರ ಬದಲಾವಣೆ ಆಗಿದೆ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಸೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.
ಪಟ್ಟಣದ ಶ್ರೀ ವಿದ್ಯಾಸಾಗರ ಇಂಟರ್ನ್ಯಾಷನಲ್ ಸ್ಕೂಲ್ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕಕಾನಿಪ) ತಾಲೂಕು ಘಟಕ ಶುಕ್ರವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಿಕೆಗಳು ಇಂದು ಕೇವಲ ಮಾಹಿತಿ ನೀಡುವ ಮಾಧ್ಯಮವಾಗಿ ಉಳಿದಿಲ್ಲ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ದೇಶಭಕ್ತಿಯ ಜಾಗೃತಿ ಮೂಡಿಸಿ ಜನರನ್ನು ಒಗ್ಗೂಡಿಸುವಲ್ಲಿ ಪತ್ರಿಕೆಗಳು ಪ್ರಮುಖ ಪಾತ್ರ ವಹಿಸಿದ್ದವು. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮ ಸಾಮಾನ್ಯ ಜನರ ಧ್ವನಿಯಾಗಿದೆ. ಸುದ್ದಿ ಪ್ರಕಟಿಸುವ ಮುನ್ನ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಪ್ರಕಟಿಸುವ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಎನ್. ವೀರಭದ್ರಗೌಡ ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ಪತ್ರಿಕೋದ್ಯಮದ ಬೆಳವಣಿಗೆಗೆ ಮಂಗಳೂರು ಸಮಾಚಾರ ಪತ್ರಿಕೆ ಮಹತ್ವದ ಕೊಡುಗೆ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಎಲ್ಲ ಸುದ್ದಿಗಳು ಸತ್ಯವಾಗಿರುವುದಿಲ್ಲ. ಆದ್ದರಿಂದ ನಿಖರ ಮಾಹಿತಿ ಪರಿಶೀಲಿಸಿ ಸುದ್ದಿಗಳನ್ನು ಪ್ರಕಟಿಸಬೇಕು. ವಿದ್ಯಾರ್ಥಿಗಳು ಸಾಮಾನ್ಯ ಜ್ಞಾನ ಹಾಗೂ ಪ್ರಚಲಿತ ವಿದ್ಯಮಾನಗಳ ಅರಿವಿಗಾಗಿ ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನವ ಭಾರತ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ. ನಾಗೇಶ್ವರರಾವ್ ಮಾತನಾಡಿ, ಸಂವಹನ ಮಾಧ್ಯಮಗಳ ಸ್ವರೂಪ ಕಾಲಕ್ಕೆ ತಕ್ಕಂತೆ ಬದಲಾಗುತ್ತಿದ್ದು, ಬ್ರೇಕಿಂಗ್ ನ್ಯೂಸ್ ಯುಗದಲ್ಲೂ ಖಚಿತ ಮಾಹಿತಿಗಾಗಿ ದಿನಪತ್ರಿಕೆಗಳೇ ವಿಶ್ವಾಸಾರ್ಹ ಮೂಲವಾಗಿವೆ. ವಿದ್ಯಾರ್ಥಿಗಳು ಪತ್ರಿಕೆಗಳಲ್ಲಿ ಸಂಪಾದಕೀಯ ಲೇಖನಗಳನ್ನು ಓದುವ ಮೂಲಕ ಭಾಷಾ ಜ್ಞಾನ ಹಾಗೂ ಬರವಣಿಗೆ ಕೌಶಲ್ಯ ವೃದ್ಧಿಸಿಕೊಳ್ಳಬಹುದು ಎಂದು ಹೇಳಿದರು.
ಕಕಾನಿಪ ತಾಲೂಕು ಅಧ್ಯಕ್ಷ ಬಂಗಿ ದೊಡ್ಡ ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಬಿ. ಸಾಯಿನಿಧಿ, ಆರ್. ಹರ್ಷಿಣಿ, ವಿನುತಾ ಸೊಪ್ಪಿಮಠ, ನಸ್ರೀನ್ ತಾಜ್, ಅಭಿನಂದನ್ ಹಾಗೂ ಉತ್ತಮ ದೈಹಿಕ ಶಿಕ್ಷಕ ಎಂ.ಎಂ. ಶರಣಬಸವರಾಜ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಕಾನಿಪ ರಾಜ್ಯ ಸಮಿತಿ ಸದಸ್ಯ ಬಸವರಾಜ ಹರನಹಳ್ಳಿ, ವಿದ್ಯಾಸಾಗರ ಇಂಟರ್ನ್ಯಾಷನಲ್ ಸ್ಕೂಲ್ ಪ್ರಾಂಶುಪಾಲೆ ರೋಹಿಣಿ ಸಾಯಿಕಿಶೋರ್, ಎಎಸ್ಐ ಬಸವರಾಜ, ತಾಪಂ ಸಿಬ್ಬಂದಿ ಗುರುಪ್ರಸಾದ್, ಟಿ.ಎಂ. ಬಸವರಾಜ, ಜಿಲ್ಲಾ ಕಾರ್ಯದರ್ಶಿ ದ್ಯಾಮನಗೌಡ ಪಾಟೀಲ್, ಜಿಲ್ಲಾ ಸದಸ್ಯ ಜಿ. ಚಂದ್ರಶೇಖರಗೌಡ, ತಾಲೂಕು ಕಾರ್ಯದರ್ಶಿ ಪಿ. ವೀರೇಶ್, ಪದಾಧಿಕಾರಿಗಳಾದ ಕರಿ ವಿರುಪಾಕ್ಷಿ, ಎಸ್. ಯಮನಪ್ಪ, ಜೀರು ಗಾದಿಲಿಂಗ, ಎಂ.ಎಸ್. ವಿರುಪಾಕ್ಷಯ್ಯ, ಎಚ್.ಎಂ. ಪಂಡಿತಾರಾಧ್ಯ, ಬಿ. ರಸೂಲ್, ಬಿ.ಎಚ್.ಎಂ. ಗುರುಶಾಂತ ಶಾಸ್ತ್ರಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.






