Ballari | ಸಂವಿಧಾನದ ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ಅರಿಯಬೇಕು: ಡಾ.ತಿಪ್ಪೇಸ್ವಾಮಿ

ಸಂಡೂರು/ಬಳ್ಳಾರಿ: ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ಅರಿತುಕೊಳ್ಳುವುದರ ಜೊತೆಗೆ ದೇಶದ ಏಕತೆ, ಸಮಗ್ರತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ಜವಾಬ್ದಾರಿಯನ್ನು ಪ್ರತಿಯೊಬ್ಬ ನಾಗರಿಕರೂ ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ, ನಂದಿಹಳ್ಳಿ ನಿರ್ದೇಶಕ ಡಾ. ತಿಪ್ಪೇಸ್ವಾಮಿ ಹೇಳಿದರು.
ಸ್ನಾತಕೋತ್ತರ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರವೂ ಮಹತ್ವದ್ದಾಗಿದೆ. ಸಂವಿಧಾನವು ಹಕ್ಕುಗಳನ್ನು ನೀಡಿರುವಂತೆ ಕರ್ತವ್ಯಗಳನ್ನೂ ವಿಧಿಸಿದೆ. ಹೀಗಾಗಿ ರಾಷ್ಟ್ರದ ಗೌರವವನ್ನು ಎತ್ತಿಹಿಡಿದು, ಜವಾಬ್ದಾರಿಯುತ ನಾಗರಿಕರಾಗಿ ನಡೆದುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಯೋಜನೆಗಳು ಹಾಗೂ ಅಭಿವೃದ್ಧಿಯ ಪರಿಕಲ್ಪನೆಯಿಂದ ಭಾರತ ಮುಂದಿನ ದಿನಗಳಲ್ಲಿ ವೈಜ್ಞಾನಿಕ, ಸಾಮಾಜಿಕ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಮತ್ತಷ್ಟು ಪ್ರಗತಿ ಸಾಧಿಸಿ ವಿಕಸಿತ ಭಾರತದತ್ತ ಸಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಶಿಕ್ಷಣ, ಸಂಶೋಧನೆ, ಉದ್ಯಮ, ಕೃಷಿ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲೂ ದೇಶ ಮುನ್ನಡೆಯಬೇಕಿದೆ. ಯುವಜನತೆ ಜ್ಞಾನ, ಕೌಶಲ್ಯ ಹಾಗೂ ರಾಷ್ಟ್ರಪ್ರೇಮವನ್ನು ಬೆಳೆಸಿಕೊಂಡು ದೇಶದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ನಿವೃತ್ತ ಸಿಬ್ಬಂದಿಗೆ ಸನ್ಮಾನ :
ಕಾರ್ಯಕ್ರಮದ ಅಂಗವಾಗಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಬಂಡ್ರಪ್ಪ ಹಾಗೂ ಶಾಂತಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ, ಆಕಸ್ಮಿಕವಾಗಿ ನಿಧನರಾದ ಗಾರ್ಡನ್ ವರ್ಕರ್ ಏಕೆ ಸಂಡೂರಪ್ಪ ಅವರ ಪತ್ನಿಯನ್ನೂ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಸಿಬ್ಬಂದಿಯ ಸೇವೆಯನ್ನು ಸ್ಮರಿಸಿದ ಗಣ್ಯರು, ಸಂಸ್ಥೆಯ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಬೆಳವಣಿಗೆಯಲ್ಲಿ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಡಾ. ಸುಮಾ, ಡಾ. ಶರತ್, ಡಾ. ಚೌಡಪ್ಪ, ಡಾ. ಅಶ್ವಿನ್ ಕುಮಾರ್, ಲಕ್ಷ್ಮಣ ತೊಳಿ, ನಾಗರಾಜ್ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ರೀಡಾ ಸಹಾಯಕ ಕೆ. ಪಾಪಯ್ಯ ಕಾರ್ಯಕ್ರಮ ನಿರ್ವಹಿಸಿದರು. ಸಹಾಯಕ ಕ್ರೀಡಾ ನಿರ್ದೇಶಕ ಶಿವರಾಮಪ್ಪ ರಾಗಿ ವಂದನಾರ್ಪಣೆ ಸಲ್ಲಿಸಿದರು.






