Ballari | 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದೇ ಬಸ್: ಕಾಟಿನಕಂಬದಲ್ಲಿ ಬಸ್ ತಡೆದು ಪ್ರತಿಭಟನೆ

ಸಂಡೂರು/ಬಳ್ಳಾರಿ: ನಿಗದಿತ ಸಮಯಕ್ಕೆ ಬಸ್ ಬಾರದಿರುವುದು ಹಾಗೂ 150ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಒಂದೇ ಬಸ್ ಸಂಚರಿಸುತ್ತಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಸೋಮವಾರ ಕಾಟಿನಕಂಬ ಗ್ರಾಮದ ಬಸ್ ನಿಲ್ದಾಣದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿರೇನಹಳ್ಳಿ, ಹುಲಿಕುಂಟೆ, ಉತ್ತರಮಲೆ ಮಾರ್ಗವಾಗಿ ಕಾಟಿನಕಂಬ ಮೂಲಕ ಸಂಡೂರಿಗೆ ತೆರಳುವ ಬಸ್ ಸೇವೆಯಲ್ಲಿನ ಅವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಎರಡು-ಮೂರು ತಿಂಗಳಿಂದ ಈ ಮಾರ್ಗದಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಒಂದೇ ಬಸ್ನಲ್ಲಿ ಪ್ರಯಾಣಿಸಬೇಕಾದ ಪರಿಸ್ಥಿತಿ ಇದೆ ಎಂದು ದೂರಿದರು.
ನಾಲ್ಕು ಗಂಟೆಗಳ ಕಾಲ ಬಸ್ ತಡೆ :
ಸೋಮವಾರ ಬೆಳಗ್ಗೆ ಬಸ್ ಸಮಯಕ್ಕೆ ಬಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಸ್ ತಡೆದು ಪ್ರತಿಭಟನೆ ನಡೆಸಿದರು. ಬಸ್ ನಿಲ್ದಾಣದಲ್ಲೇ ಕುಳಿತು ಸಾರಿಗೆ ಇಲಾಖೆಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಮಸ್ಯೆ ಕುರಿತು ಈ ಹಿಂದೆಯೂ ಪ್ರತಿಭಟನೆ ನಡೆಸಲಾಗಿತ್ತು. ಆದರೂ ಬಸ್ ನಿಗದಿತ ವೇಳೆಗೆ ಬರುತ್ತಿಲ್ಲ ಮತ್ತು ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿಲ್ಲ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಡಿಪೋ ಮ್ಯಾನೇಜರ್ ಫರೀದಾಬಾನು ಹಾಗೂ ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು. ವಿದ್ಯಾರ್ಥಿಗಳು ಲಿಖಿತ ಮನವಿ ಸಲ್ಲಿಸಿದರೆ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು.
ಅಧಿಕಾರಿಗಳ ಭರವಸೆಯ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದು ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ನಾಲ್ಕು ಗಂಟೆಗಳ ಕಾಲ ನಡೆದ ಪ್ರತಿಭಟನೆಯಿಂದ ಬಹುತೇಕ ವಿದ್ಯಾರ್ಥಿಗಳಿಗೆ ಸೋಮವಾರ ಶಾಲೆ-ಕಾಲೇಜುಗಳಿಗೆ ತೆರಳಲು ಸಾಧ್ಯವಾಗಲಿಲ್ಲ. ಸಾರಿಗೆ ಅವ್ಯವಸ್ಥೆಯಿಂದ ಅಮೂಲ್ಯವಾದ ಶೈಕ್ಷಣಿಕ ಸಮಯ ವ್ಯರ್ಥವಾಗಿದೆ ಎಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದರು.
ಗಿರೇನಹಳ್ಳಿ, ಹುಲಿಕುಂಟೆ, ಉತ್ತರಮಲೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿದಿನ ನೂರಾರು ವಿದ್ಯಾರ್ಥಿಗಳು ಈ ಮಾರ್ಗದಲ್ಲಿ ಸಂಚರಿಸುತ್ತಿದ್ದಾರೆ. ಆದ್ದರಿಂದ ಈ ಮಾರ್ಗಕ್ಕೆ ತಕ್ಷಣ ಹೆಚ್ಚುವರಿ ಬಸ್ ಒದಗಿಸಿ, ನಿಗದಿತ ವೇಳಾಪಟ್ಟಿಯಂತೆ ಬಸ್ ಸಂಚರಿಸುವಂತೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ.
150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಒಂದೇ ಬಸ್ನ ಅವಲಂಬನೆಯಲ್ಲಿದ್ದಾರೆ. ಅಧಿಕಾರಿಗಳು ಇನ್ನು ವಿಳಂಬ ಮಾಡದೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು.
-ಸ್ವಾಮಿ, ಸ್ಥಳೀಯ ಯುವಕ
ವಿದ್ಯಾರ್ಥಿಗಳ ಲಿಖಿತ ಮನವಿ ಬಂದ ತಕ್ಷಣ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚುವರಿ ಬಸ್ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
-ಫರೀದಾಬಾನು, ಡಿಪೋ ಮ್ಯಾನೇಜರ್






