Ballari | ಹಚೋಳ್ಳಿಯಲ್ಲಿ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ : 127 ಅರ್ಜಿಗಳ ಸ್ವೀಕಾರ

ಬಳ್ಳಾರಿ/ಸಿರುಗುಪ್ಪ: ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಗ್ರಾಮೀಣ ಜನರ ಸಂಕಷ್ಟಕ್ಕೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ತಾಲೂಕು ಆಡಳಿತ ಹಚೋಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಪ್ರಜಾಸೇವಾ ಆಂದೋಲನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ವಿವಿಧ ಇಲಾಖೆಗಳ ಒಟ್ಟು 127 ಅರ್ಜಿಗಳನ್ನು ಕಾರ್ಯಕ್ರಮದಲ್ಲಿ ಸ್ವೀಕರಿಸಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ತಹಶೀಲ್ದಾರ್ ಗೌಶಿಯ ಬೇಗಂ, ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ ಪರಿಹಾರ ಒದಗಿಸುವುದೇ ಪ್ರಜಾಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಅಧಿಕಾರಿಗಳು ಜನರ ಮನೆಬಾಗಿಲಿಗೆ ತೆರಳಿ ಸೇವೆ ನೀಡುತ್ತಿರುವುದರಿಂದ ಸರ್ಕಾರಿ ಕಚೇರಿಗಳಿಗೆ ಪದೇಪದೆ ಭೇಟಿ ನೀಡುವ ಅನಿವಾರ್ಯತೆ ಕಡಿಮೆಯಾಗಲಿದೆ ಎಂದು ಹೇಳಿದರು.
ಕಂದಾಯ, ವಸತಿ, ಪಡಿತರ ಚೀಟಿ, ಪಿಂಚಣಿ ಸೇರಿದಂತೆ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸಲಾಗುತ್ತಿದೆ. ಸ್ಥಳದಲ್ಲೇ ಪರಿಹರಿಸಬಹುದಾದ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲಾಗುತ್ತಿದ್ದು, ಉಳಿದ ಅಹವಾಲುಗಳನ್ನು ಸಂಬಂಧಪಟ್ಟ ಇಲಾಖೆಗಳ ಮೂಲಕ ಶೀಘ್ರ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸ್ವೀಕರಿಸಲಾದ ಅರ್ಜಿಗಳನ್ನು ಐಪಿಜಿಆರ್ಎಸ್ 2.0 ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆಯಲ್ಲಿ ಆನ್ಲೈನ್ ಮೂಲಕ ದಾಖಲಿಸಲಾಗುತ್ತಿದೆ. ಅರ್ಜಿದಾರರು ತಮ್ಮ ಅರ್ಜಿಯ ಪ್ರಗತಿಯನ್ನು ಪರಿಶೀಲಿಸಬಹುದಾಗಿದ್ದು, ನಿಗದಿತ ಅವಧಿಯಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಅದು ಸ್ವಯಂಚಾಲಿತವಾಗಿ ಮೇಲಧಿಕಾರಿಗಳ ಗಮನಕ್ಕೆ ರವಾನೆಯಾಗುವ ವ್ಯವಸ್ಥೆ ಇದೆ ಎಂದು ವಿವರಿಸಿದರು.
ಪ್ರತಿ ತಿಂಗಳ ಮೂರನೇ ಶನಿವಾರ ನಡೆಯುವ ಪ್ರಜಾಸೇವಾ ಆಂದೋಲನವು ಆಡಳಿತ ಮತ್ತು ಜನರ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಸರ್ಕಾರಿ ಸೇವೆಗಳು ಜನರಿಗೆ ಸುಲಭವಾಗಿ ತಲುಪುವಂತೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಪರಿಣಾಮಕಾರಿಯಾಗಿ ನಡೆಯುತ್ತಿದೆ ಎಂದು ತಹಸೀಲ್ದಾರ್ ಹೇಳಿದರು.
ಈ ಸಂದರ್ಭದಲ್ಲಿ ಬರಗಾಲ ಘೋಷಣೆ, ಬೆಳೆ ವಿಮೆ ಹಾಗೂ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಕುರಿತು ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ ರೆಡ್ಡಿ ರೈತರಿಗೆ ಮಾಹಿತಿ ನೀಡಿದರು.
ಪ್ರಜಾಸೇವಾ ಆಂದೋಲನದಲ್ಲಿ ಸ್ವೀಕರಿಸಲಾದ 127 ಅರ್ಜಿಗಳ ಪೈಕಿ ತಾಲೂಕು ಪಂಚಾಯಿತಿಗೆ 61, ಕಂದಾಯ ಇಲಾಖೆಗೆ 38, ಆಹಾರ ಇಲಾಖೆಗೆ 8, ಜೆಸ್ಕಾಂಗೆ 6, ಶಿಶು ಅಭಿವೃದ್ಧಿ ಯೋಜನಾ ಇಲಾಖೆಗೆ 4, ಆರೋಗ್ಯ ಇಲಾಖೆಗೆ 3, ಶಿಕ್ಷಣ ಇಲಾಖೆಗೆ 2, ಸರ್ವೆ ಇಲಾಖೆಗೆ 2, ಪಶುಸಂಗೋಪನಾ ಇಲಾಖೆಗೆ 1, ಸಣ್ಣ ನೀರಾವರಿ ಇಲಾಖೆಗೆ 1 ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 1 ಅರ್ಜಿ ಸಲ್ಲಿಕೆಯಾಗಿದೆ.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಇಒ ಪವನ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಬಸವರಾಜ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ರಾಹುಲ್, ಸರ್ವೆ ಇಲಾಖೆ ಅಧಿಕಾರಿ ಶ್ರೀನಾಥ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದಯ್ಯ, ಬಿಸಿಎಂ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ ವರ್ಮಾ, ಕಂದಾಯ ಅಧಿಕಾರಿ ಶೇಖ್ ವಲಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






