ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸರಕಾರದ ನೀತಿಗಳಿಗೆ ಸಿಕ್ಕ ಬೆಂಬಲ: ಶಾಸಕ ಬಿ.ಎಂ.ನಾಗರಾಜ

ಸಿರುಗುಪ್ಪ: ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಾಗೂ ಪಕ್ಷದ ಸಿದ್ಧಾಂತಗಳಿಗೆ ಸಿಕ್ಕ ಜನಮನ್ನಣೆ ಎಂದು ಶಾಸಕ ಬಿ.ಎಂ.ನಾಗರಾಜ ಅಭಿಪ್ರಾಯಪಟ್ಟರು.
ಸರ್ಕಾರ ಕೈಗೊಂಡಿರುವ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಿದ್ದಾರೆ. ಇದರ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಆಡಳಿತಕ್ಕೆ ಜನತೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ದೇಶದ ಇತರೆ ಕೆಲವು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ವಲ್ಪ ಮಟ್ಟಿನ ಹಿಂದೆಡಗುಂಟಾಗಿರುವುದನ್ನು ಒಪ್ಪಿಕೊಂಡ ಅವರು, ಈ ಕುರಿತು ಪಕ್ಷದ ವರಿಷ್ಠರು ಚಿಂತನೆ ನಡೆಸಿ ಬಲವರ್ಧನೆಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಮುಂದಿನ 2029ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ದೇಶದ ಆಡಳಿತಕ್ಕೆ ಬರಲಿದ್ದು, ರಾಜ್ಯದಲ್ಲೂ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.




