ಎಂಎನ್ಆರ್ಇಜಿಎ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಪಂ ಸಿಇಒ : ಕಾರ್ಮಿಕರು ಯೋಜನೆಯ ಸದುಪಯೋಗ ಪಡೆಯುವಂತೆ ಕರೆ

ಬಳ್ಳಾರಿ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಎಂಎನ್ಆರ್ಇಜಿಎ) ಅಡಿಯಲ್ಲಿ ಸಂಡೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಬಳ್ಳಾರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮೊಹಮ್ಮದ್ ಹ್ಯಾರಿಸ್ ಸುಮೇರ್ ಪರಿಶೀಲಿಸಿದರು.
ವಿಠ್ಠಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮ್ಮಲಾಪುರ ಗ್ರಾಮದ ದಮ್ಮೂರು ಸ್ವಾಮಿಯಪ್ಪನ ಹೊಲದ ಸಮೀಪ ವಿಬಿಜಿಆರ್ಜಿ (VBGRG) ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ಸಣ್ಣ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಾಮಗಾರಿಯ ಪ್ರಗತಿ ಹಾಗೂ ಎನ್ಎಂಎಂಎಸ್ ಹಾಜರಾತಿ ವ್ಯವಸ್ಥೆಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಬಳಿಕ ಚೋರನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ವಡ್ಡಿನಕಟ್ಟೆ ಗ್ರಾಮದ ವಡ್ಡಿನಕಟ್ಟೆ ಕೆರೆ ಹೂಳೆತ್ತುವ ಕಾಮಗಾರಿಯನ್ನು ವೀಕ್ಷಿಸಿ, ಕಾಮಗಾರಿಯ ಗುಣಮಟ್ಟ, ಕಾರ್ಮಿಕರ ಹಾಜರಾತಿ ಹಾಗೂ ಯೋಜನೆ ಅನುಷ್ಠಾನದ ಬಗ್ಗೆ ಮಾಹಿತಿ ಪಡೆದರು.
ಈ ವೇಳೆ ಕೂಲಿ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಸಿಇಒ ಮೊಹಮ್ಮದ್ ಹ್ಯಾರಿಸ್ ಸುಮೇರ್, ಎಂಎನ್ಆರ್ಇಜಿಎ ಯೋಜನೆಯಡಿ ಒಂದು ದಿನಕ್ಕೆ 382 ಕೂಲಿ ದೊರೆಯುತ್ತಿದ್ದು, ಒಂದು ಆರ್ಥಿಕ ವರ್ಷದಲ್ಲಿ ಪ್ರತಿ ಕುಟುಂಬಕ್ಕೆ 125 ದಿನಗಳ ಉದ್ಯೋಗ ಖಾತರಿ ನೀಡಲಾಗುತ್ತದೆ. ಗ್ರಾಮೀಣ ಕುಟುಂಬಗಳು ಈ ಯೋಜನೆಯ ಸದುಪಯೋಗ ಪಡೆದು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸಕ್ಕೆ ಹಾಜರಾಗಬೇಕು. ಜೊತೆಗೆ ವೈಯಕ್ತಿಕ ಕಾಮಗಾರಿಗಳಾದ ಕೃಷಿ ಭೂ ಅಭಿವೃದ್ಧಿ, ನೀರಿನ ಸಂರಕ್ಷಣೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆದು ತಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.






