ಸಂಡೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ; ಜನರಿಂದ ಉತ್ತಮ ಸ್ಪಂದನೆ

ಸಂಡೂರು/ಬಳ್ಳಾರಿ: ಸಂಡೂರಿನ ಗುರುಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂಸದ ಈ ತುಕಾರಾಂ, ಶಾಸಕಿ ಅನ್ನಪೂರ್ಣ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು.
ಬೆಂಗಳೂರು ಮೂಲದ ಸಪ್ತಗಿರಿ ಆಸ್ಪತ್ರೆಯ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಈ ಶಿಬಿರದಲ್ಲಿ ಹೃದಯರೋಗ, ನರರೋಗ, ಕ್ಯಾನ್ಸರ್ ಹಾಗೂ ಮೂತ್ರಪಿಂಡದ ಕಲ್ಲು ಸಂಬಂಧಿತ ಕಾಯಿಲೆಗಳ ತಪಾಸಣೆ ನಡೆಸಲಾಯಿತು.
ಗ್ರಾಮೀಣ ಭಾಗದ ನೂರಾರು ಜನರು ಶಿಬಿರದಲ್ಲಿ ಭಾಗವಹಿಸಿ ತಜ್ಞ ವೈದ್ಯರಿಂದ ಆರೋಗ್ಯ ಸಲಹೆ ಹಾಗೂ ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡರು.
ಮೊಬೈಲ್ ಮೆಡಿಕಲ್ ಯೂನಿಟ್ನ ವೈದ್ಯರು ಮತ್ತು ಸಿಬ್ಬಂದಿ ಶಿಬಿರದಲ್ಲಿ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸಾಮಾಜಿಕ ಜಾಲತಾಣದ ಅಧ್ಯಕ್ಷ ಆಸೀಫ್ ದೊಡ್ಮನೆ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಆರೋಗ್ಯ ಸೇವೆಗಳು ಗ್ರಾಮೀಣ ಜನತೆಗೆ ಸುಲಭವಾಗಿ ತಲುಪಬೇಕೆಂಬ ಉದ್ದೇಶದಿಂದ ಇಂತಹ ಶಿಬಿರಗಳನ್ನು ಮುಂದಿನ ದಿನಗಳಲ್ಲಿಯೂ ಹಮ್ಮಿಕೊಳ್ಳಲಾಗುವುದು ಎಂದು ಆಯೋಜಕರು ತಿಳಿಸಿದರು.




