Sandur | ಬಿಎಲ್ಒ ಕರ್ತವ್ಯದಿಂದ ವಿನಾಯಿತಿಗೆ ಶಿಕ್ಷಕರ ಸಂಘ ಮನವಿ

ಸಂಡೂರು : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಡೂರು ತಾಲೂಕು ಘಟಕದ ವತಿಯಿಂದ ಶಿಕ್ಷಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸಂಡೂರು ತಹಶೀಲ್ದಾರ್ ಹಾಗೂ ದಂಡಾಧಿಕಾರಿ ಅನಿಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷೆ ಪ್ರೇಮ ಕೆ. ಹಾಗೂ ಪ್ರಧಾನ ಕಾರ್ಯದರ್ಶಿ ರವಿ ಕೆ. ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯಲ್ಲಿ, ವಿಶೇಷ ಚೇತನವುಳ್ಳ ಶಿಕ್ಷಕರು, ಗರ್ಭಿಣಿಯರು, ಸಣ್ಣ ಶಿಶು ಹೊಂದಿರುವ ಶಿಕ್ಷಕಿಯರು, ಅನಾರೋಗ್ಯದಿಂದ ಬಳಲುತ್ತಿರುವವರು, 50 ವರ್ಷ ಮೇಲ್ಪಟ್ಟ ಶಿಕ್ಷಕರು ಹಾಗೂ ಏಕೈಕ ಶಿಕ್ಷಕರಿರುವ ಶಾಲೆಗಳ ಶಿಕ್ಷಕರಿಗೆ ಬಿಎಲ್ಒ ಕರ್ತವ್ಯದಿಂದ ವಿನಾಯಿತಿ ನೀಡಿ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಲಾಯಿತು.
ಪ್ರಸ್ತುತ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯದಲ್ಲಿ ತೊಡಗಿರುವ ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಅನಗತ್ಯ ಒತ್ತಡ ಹೇರದಂತೆ ಕ್ರಮ ಕೈಗೊಂಡು, ಆರೋಗ್ಯಕರ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸಲು ಅಗತ್ಯ ಸಹಕಾರ ನೀಡಬೇಕು ಎಂದು ಮನವಿಯಲ್ಲಿ ಕೋರಲಾಯಿತು.
ಮನವಿ ಸ್ವೀಕರಿಸಿದ ತಹಸೀಲ್ದಾರ್ ಅನಿಲ್ ಕುಮಾರ್, ಎಸ್ಐಆರ್ ಕಾರ್ಯ ಪೂರ್ಣಗೊಂಡ ಬಳಿಕ ಈ ವಿಷಯವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ, ಅನಾನುಕೂಲ ಎದುರಿಸುತ್ತಿರುವ ಶಿಕ್ಷಕರಿಗೆ ಸಾಧ್ಯವಾದಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಎಸ್ಐಆರ್ ಕಾರ್ಯದಲ್ಲಿ ಹೆಚ್ಚಿನ ಶಿಕ್ಷಕರು ಅತ್ಯಂತ ಜವಾಬ್ದಾರಿಯುತವಾಗಿ ಹಾಗೂ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ಮೇಲೆ ಅನಗತ್ಯ ಒತ್ತಡ ಹೇರಿರುವಂತಹ ಘಟನೆಗಳು ಕಂಡುಬಂದಿಲ್ಲ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಹೆಚ್ಚಿನ ಕಾರ್ಯಭಾರ ಹೊಂದಿರುವ ಶಿಕ್ಷಕರಿಗೆ ಸಹಾಯಕರನ್ನು ನಿಯೋಜಿಸಿ ಅನುಕೂಲ ಕಲ್ಪಿಸಲಾಗಿದೆ ಎಂದರು.
ಕೆಲವು ಶಿಕ್ಷಕರು ಗೈರುಹಾಜರಾಗುವುದು ಅಥವಾ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿರುವ ಹಿನ್ನೆಲೆಯಲ್ಲಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಅಂತಿಮ ಹಂತದಲ್ಲಿ ಮಾಹಿತಿಯ ಕ್ರೋಢೀಕರಣ ವೇಳೆ ಹೆಚ್ಚಿನ ಸವಾಲುಗಳು ಎದುರಾಗುವ ಸಾಧ್ಯತೆ ಇರುವುದರಿಂದ, ಅಂದಿನ ಕೆಲಸವನ್ನು ಅಂದೇ ಪೂರ್ಣಗೊಳಿಸಿ ಯಾವುದೇ ಗೊಂದಲ ಅಥವಾ ಆತಂಕಕ್ಕೆ ಒಳಗಾಗದೆ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಶಿಕ್ಷಕರಿಗೆ ಆಡಳಿತದಿಂದ ಅಗತ್ಯ ಸಹಕಾರದ ಜೊತೆಗೆ ಇಲಾಖೆಯ ವತಿಯಿಂದ ಗೌರವಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷೆ ಪ್ರೇಮ ಕೆ., ಪ್ರಧಾನ ಕಾರ್ಯದರ್ಶಿ ರವಿ ಕೆ. ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.






