ಸಿರುಗುಪ್ಪ | ಸ್ತನ್ಯಪಾನದಿಂದ ಶಿಶುವಿನ ಆರೋಗ್ಯಕರ ಬೆಳವಣಿಗೆ ಸಾಧ್ಯ: ಡಾ. ರಾಮಕೃಷ್ಣ

ಸಿರುಗುಪ್ಪ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರ್ಸಿಎಚ್ ಅಧಿಕಾರಿಗಳ ಕಚೇರಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಿರುಗುಪ್ಪ ಹಾಗೂ ಸಮುದಾಯ ಆರೋಗ್ಯ ಕೇಂದ್ರ ತೆಕ್ಕಲಕೋಟೆ ಸಂಯುಕ್ತ ಆಶ್ರಯದಲ್ಲಿ ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಮಕ್ಕಳ ತಜ್ಞ ಡಾ. ರಾಮಕೃಷ್ಣ, ಮಗುವಿನ ಸರ್ವತೋಮುಖ ಬೆಳವಣಿಗೆಗೆ ತಾಯಿಯ ಎದೆಹಾಲು ಅತ್ಯಗತ್ಯವಾಗಿದೆ ಎಂದು ಹೇಳಿದರು. ಆಗಸ್ಟ್ 1ರಿಂದ 7ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಿಸಲಾಗುತ್ತಿದ್ದು, 2026ರ ಘೋಷವಾಕ್ಯ ‘ಸ್ತನ್ಯಪಾನದ ಮೂಲಕ ಜೀವನಕ್ಕೆ ಸುಸ್ಥಿರ ಆರಂಭ: ಯಶಸ್ವಿಯಾದದ್ದನ್ನು ಬಲಪಡಿಸುವುದು’ ಆಗಿದೆ. ಪೌಷ್ಟಿಕಾಂಶ, ಆಹಾರ ಭದ್ರತೆ ಹಾಗೂ ಬಡತನ ನಿರ್ಮೂಲನೆಯಲ್ಲಿ ಸ್ತನ್ಯಪಾನದ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ತಾಯಿಯ ಹಾಲಿನಲ್ಲಿ ರೋಗನಿರೋಧಕ ಶಕ್ತಿ ಹಾಗೂ ಅಗತ್ಯ ಪೋಷಕಾಂಶಗಳು ಸಮೃದ್ಧವಾಗಿದ್ದು, ಶಿಶುವಿನ ಆರೋಗ್ಯಕರ ಬೆಳವಣಿಗೆಗೆ ಇದು ಸಹಕಾರಿಯಾಗಿದೆ. ಸ್ತನ್ಯಪಾನವು ತಾಯಿಯ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಹೆರಿಗೆಯ ನಂತರ ಶೀಘ್ರ ಚೇತರಿಕೆಗೆ ನೆರವಾಗುತ್ತದೆ. ಸ್ತನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುವುದರೊಂದಿಗೆ ಮಕ್ಕಳ ನಡುವಿನ ಅಂತರ ಕಾಯ್ದುಕೊಳ್ಳಲು ಸಹ ಸಹಕಾರಿಯಾಗುತ್ತದೆ ಎಂದು ವಿವರಿಸಿದರು.
ಪ್ರಸೂತಿ ತಜ್ಞೆ ಡಾ. ಶಾರದಾ ಮಾತನಾಡಿ, ಜನನದ ಮೊದಲ ಒಂದು ಗಂಟೆಯೊಳಗೆ ಹಳದಿ ಬಣ್ಣದ ಮೊದಲ ಹಾಲು (ಕೊಲೋಸ್ಟ್ರಮ್) ಮಗುವಿಗೆ ನೀಡಬೇಕು. ಇದು ಶಿಶುವಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ನೆರವಾಗುತ್ತದೆ ಎಂದು ಹೇಳಿದರು.
ಐಸಿಟಿಸಿ ಆಪ್ತ ಸಮಾಲೋಚಕ ಪ್ರಕಾಶ್ ಮಾತನಾಡಿ, ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸಬೇಕು. ಎರಡು ಮಕ್ಕಳ ನಡುವೆ ಕನಿಷ್ಠ ಎರಡು ವರ್ಷದ ಅಂತರ ಕಾಯ್ದುಕೊಳ್ಳಬೇಕು. ಮಕ್ಕಳಿಗೆ ನಿಗದಿತ ವೇಳಾಪಟ್ಟಿಯಂತೆ ಎಲ್ಲ ಲಸಿಕೆಗಳನ್ನು ತಪ್ಪದೇ ಹಾಕಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶುಶ್ರೂಷಾಧಿಕಾರಿಗಳು, ಪ್ರಯೋಗಶಾಲಾ ತಂತ್ರಜ್ಞರು, ಆಶಾ ಕಾರ್ಯಕರ್ತೆಯರು, ಗರ್ಭಿಣಿಯರು ಹಾಗೂ ಮಕ್ಕಳ ತಾಯಂದಿರು ಭಾಗವಹಿಸಿದ್ದರು.






