ಅಮಾನತುಗೊಂಡಿದ್ದ ಬಳ್ಳಾರಿ ಎಸ್ಪಿ ಆತ್ಮಹತ್ನೆ ಯತ್ನ ಎಂಬುದು ಸುಳ್ಳು ಸುದ್ದಿ: ಪೊಲೀಸರ ಸ್ಪಷ್ಟನೆ

ಪವನ್ ನೆಜ್ಜೂರ್
ಬಳ್ಳಾರಿ: ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿ ನಗರದಲ್ಲಿ ನಡೆದ ಘರ್ಷಣೆಯ ಹಿನ್ನೆಲೆಯಲ್ಲಿ ಅಮಾನತುಗೊಂಡ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಸುಳ್ಳು ಎಂದು ಪೊಲೀಸ್ ಉನ್ನತ ಅಧಿಕಾರಿಗಳು ಸ್ಪಷ್ಟಪಡಿಸಿದೆ.
ಪವನ್ ನೆಜ್ಜೂರ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣ ಹಾಗೂ ಕೆಲವೊಂದು ಸುದ್ದಿತಾಣಗಳಲ್ಲಿ ಪ್ರಕಟಗೊಂಡ ಸುದ್ದಿಯ ಹಿನ್ನೆಲೆಯಲ್ಲಿ ಪೊಲೀಸರು ಸ್ಪಷ್ಟೀಕರಣ ನೀಡಿದ್ದಾರೆ.
''ಪವನ್ ನೆಜ್ಜೂರ್ ತಮ್ಮ ಬ್ಯಾಚ್ ಮೇಟ್ ಒಬ್ಬರ ಫಾರ್ಮ್ ಹೌಸ್ ನಲ್ಲಿ ತಂಗಿದ್ದಾರೆ. ಆತ್ಮಹತ್ಯೆಯಂತಹ ಯಾವುದೇ ಘಟನೆ ಸಂಭವಿಸಿಲ್ಲ. ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ'' ಎಂದು ಪೊಲೀಸ್ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಬಳ್ಳಾರಿ ಜಿಲ್ಲೆಯ ನೂತನ ಎಸ್ಪಿಯಾಗಿ ಪವನ್ ನೆಜ್ಜೂರ್ ಗುರುವಾರ ಅಧಿಕಾರ ವಹಿಸಿಕೊಂಡಿದ್ದರು. ಅವರು ಅಧಿಕಾರ ವಹಿಸಿಕೊಂಡ ಮೂರು ಗಂಟೆಗಳ ಬಳಿಕ ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿ ನಗರದ ಹವಂಬಾವಿಯಲ್ಲಿ ಘರ್ಷಣೆ ನಡೆದಿತ್ತು. ಈ ವೇಳೆ ಸಂಭವಿಸಿದ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬವರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪವನ್ ನೆಜ್ಜೂರ್ ಅವರನ್ನು ಸರಕಾರ ಅಮಾನತು ಮಾಡಿತ್ತು.





