ಸರಕಾರ 224 ವಿಧಾನಸಭಾ ಕ್ಷೇತ್ರಗಳಿಗೆ ತಲಾ 200 ಕೋಟಿ ರೂ. ಅಭಿವೃದ್ಧಿ ಅನುದಾನ ಬಿಡುಗಡೆ ಮಾಡಲಿ : ಬಿ.ವೈ.ವಿಜಯೇಂದ್ರ

ಬಳ್ಳಾರಿ: ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ 170 ಕಿ.ಮೀ. ಪಾದಯಾತ್ರೆ ಅಂಗವಾಗಿ ನಗರದ ಮುನಿಸಿಪಲ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಪಕ್ಷದ ಹಿರಿಯ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಪಾದಯಾತ್ರೆಯ ವೇಳೆ ರೈತರು, ಕೂಲಿ ಕಾರ್ಮಿಕರು, ಬಡವರು ಮತ್ತು ದಲಿತ ಸಮುದಾಯದ ಜನರು ಎದುರಿಸುತ್ತಿರುವ ಸಂಕಷ್ಟವನ್ನು ಕಣ್ಣಾರೆ ಕಂಡಿದ್ದೇನೆ. ಇಂತಹ ಪರಿಸ್ಥಿತಿಯಲ್ಲೂ ರಾಜ್ಯ ಸರ್ಕಾರ 100 ದಿನಗಳ ಸಂಭ್ರಮ ಆಚರಿಸುತ್ತಿದೆ ಎಂದು ಟೀಕಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಎಸ್ಸಿಪಿ–ಟಿಎಸ್ಪಿ ಅನುದಾನದ ಬಳಕೆ ಹಾಗೂ ರೈತರ ಸಮಸ್ಯೆಗಳ ಕುರಿತು ಪ್ರಶ್ನಿಸಿದ ಅವರು, ಮೀಸಲಾತಿ ಅನುದಾನ ವರ್ಗಾವಣೆಯ ಬಗ್ಗೆ ಶ್ವೇತಪತ್ರ ಪ್ರಕಟಿಸಬೇಕು ಎಂದು ಆಗ್ರಹಿಸಿದರು. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ತಲಾ 200 ಕೋಟಿ ರೂ. ಅಭಿವೃದ್ಧಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಯುಪಿಎ ಸರ್ಕಾರದ ಅವಧಿಯಲ್ಲಿ ಹಲವು ಹಗರಣಗಳು ನಡೆದಿದ್ದವು ಎಂದು ಆರೋಪಿಸಿದರು. ಸಾರ್ವಜನಿಕರಿಗೆ ದೊರೆಯುವ ಆಹಾರ ಧಾನ್ಯಗಳು ಕೇಂದ್ರ ಸರ್ಕಾರದ ಯೋಜನೆಗಳಡಿ ನೀಡಲಾಗುತ್ತಿವೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ತಮ್ಮ ಆಡಳಿತಾವಧಿಯಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಸೈಕಲ್ ಯೋಜನೆ ಜಾರಿಗೊಳಿಸಲಾಗಿತ್ತು. ಕಾಂಗ್ರೆಸ್ ಸರ್ಕಾರ ಇಂತಹ ಜನಪರ ಯೋಜನೆಗಳನ್ನು ಸ್ಥಗಿತಗೊಳಿಸಿದೆ ಎಂದು ಆರೋಪಿಸಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪೊಲೀಸ್ ವರ್ಗಾವಣೆ ಹಾಗೂ ಆಡಳಿತದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದರು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ತಮ್ಮ ಆಡಳಿತಾವಧಿಯ ಅಭಿವೃದ್ಧಿ ಯೋಜನೆಗಳನ್ನು ಉಲ್ಲೇಖಿಸಿದರು.
ಸಮಾವೇಶದಲ್ಲಿ ಜನಾರ್ದನ ರೆಡ್ಡಿ, ಶ್ರೀರಾಮುಲು, ಆರ್. ಅಶೋಕ್, ಸಿ.ಟಿ. ರವಿ, ಗೋವಿಂದ ಕಾರಜೋಳ, ನಾರಾಯಣಸ್ವಾಮಿ, ರಾಜುಗೌಡ, ಸೋಮಶೇಖರ ರೆಡ್ಡಿ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.






