ಬಳ್ಳಾರಿ | 9ನೇ ತರಗತಿ ವಿದ್ಯಾರ್ಥಿಯಿಂದ ಹಲ್ಲೆ: ಓರ್ವ ವಿದ್ಯಾರ್ಥಿ ಮೃತ್ಯು, ವಾರ್ಡನ್ ಸಹಿತ ಏಳು ಮಂದಿ ಗಂಭೀರ

ಬಳ್ಳಾರಿ : ಒಂಭತ್ತನೇ ತರಗತಿ ವಿದ್ಯಾರ್ಥಿಯೋರ್ವ ಕಬ್ಬಿಣದ ರಾಡ್ ನಿಂದ ದಾಳಿ ನಡೆಸಿ ಓರ್ವ ಸಹಪಾಠಿ ವಿದ್ಯಾರ್ಥಿಯನ್ನು ಕೊಲೆಗೈದ ಆಘಾತಕಾರಿ ಘಟನೆ ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ 'ಗುರುಕುಲ ಕಾನ್ಸೆಪ್ಟ್ ಸ್ಕೂಲ್' ಎಂಬ ಸಿಬಿಎಸ್ ಇ ಶಾಲೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಈ ವೇಳೆ ಆರೋಪಿ ವಿದ್ಯಾರ್ಥಿ ನಡೆಸಿದ ಮಾರಣಾಂತಿಕ ದಾಳಿಯಿಂದ ವಾರ್ಡನ್ ಸೇರಿದಂತೆ ಇತರ ಏಳು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
'ಗುರುಕುಲ ಕಾನ್ಸೆಪ್ಟ್ ಸ್ಕೂಲ್ ನಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಗಳ ಮಧ್ಯೆ ಕ್ಷುಲ್ಲಕ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಆಕ್ರೋಶಗೊಂಡ ಒಂಭತ್ತನೇ ತರಗತಿಯ ವಿದ್ಯಾರ್ಥಿಯೋರ್ವ, ಕಬ್ಬಿಣದ ರಾಡ್ ನಿಂದ ತನ್ನ ಸಹಪಾಠಿಗಳ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ದಾಳಿಯ ತೀವ್ರತೆಗೆ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಉಳಿದ ಏಳು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಲಾಟೆ ಬಿಡಿಸಲು ಬಂದ ಮಹಿಳಾ ವಾರ್ಡನ್ ಮೇಲೂ ಬಾಲಕ ದಾಳಿ ನಡೆಸಿದ್ದಾನೆ.
ಬಳಿಕ ಆರೋಪಿ ಬಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಗಾಯಗೊಂಡಿರುವ ಏಳು ವಿದ್ಯಾರ್ಥಿಗಳು, ವಾರ್ಡನ್ ಅವರನ್ನು ಬಳ್ಳಾರಿಯ ವಿಮ್ಸ್ (VIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ವಿದ್ಯಾರ್ಥಿಗಳೆಲ್ಲ 9ನೇ ತರಗತಿಯಲ್ಲಿ ಓದುತ್ತಿದ್ದರು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





