ಸಿಎಂ ಪರಿಹಾರ ನಿಧಿಯಲ್ಲಿ ಹಣ ಪಡೆಯಲು ನಕಲಿ ದಾಖಲೆ ಸೃಷ್ಟಿಸಿದ್ದ ಆರೋಪಿಯ ಬಂಧನ

ಸಾಂದರ್ಭಿಕ ಚಿತ್ರ
ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಪಡೆಯಲು ನಕಲಿ ವೈದ್ಯಕೀಯ ದಾಖಲೆಗಳನ್ನು ನೀಡಿದ ಆರೋಪದಡಿ 59 ವರ್ಷದ ವ್ಯಕ್ತಿಯೊಬ್ಬರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನೆಲಮಂಗಲದ ಜಿ.ಧನಂಜಯ ಎಂದು ಗುರುತಿಸಲಾಗಿದೆ. ಆರೋಪಿಯು ತುರ್ತು ಚಿಕಿತ್ಸೆಯ ಅಗತ್ಯವಿರುವ ರೋಗಿಗಳಿಗೆ ಹಣಕಾಸಿನ ನೆರವು ನೀಡುವುದಾಗಿ ಹೇಳಿ ಅವರಿಂದ ನಕಲಿ ಆಸ್ಪತ್ರೆ ಬಿಲ್ಗಳು ಮತ್ತು ವೈದ್ಯಕೀಯ ದಾಖಲೆಗಳನ್ನು ಪಡೆದು ಸರಕಾರಕ್ಕೆ ಅರ್ಜಿ ಸಲ್ಲಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿ ಧನಂಜಯ ಶಿಕ್ಷಕರಾಗಿದ್ದು, ಯಶವಂತಪುರದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ರೋಗಿಗಳ ವಿವರಗಳನ್ನು ಸಂಗ್ರಹಿಸಿ, ಅವರ ಮಾಹಿತಿಯನ್ನು ಬಳಸಿಕೊಂಡು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಪರಿಹಾರ ಮೊತ್ತವನ್ನು ಪಡೆಯಲು ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣ’ಕ್ಕೆ ಕಳಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಗೊತ್ತಾಗಿದೆ.
ಪ್ರಕರಣದಲ್ಲಿ ಧನಂಜಯ ಒಬ್ಬನೇ ಈ ಕೆಲಸ ಮಾಡಿಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕ್ಯಾತಣ್ಣ, ಜಯಮ್ಮ, ಯಶೋದಮ್ಮ ಮತ್ತು ಚಂದ್ರಶೇಖರ್ ಎಂಬವರ ಹೆಸರು ಕೂಡ ಪೊಲೀಸರ ತನಿಖೆಯಲ್ಲಿ ಕೇಳಿಬಂದಿದೆ. ಇದರಲ್ಲಿ ಕ್ಯಾತಣ್ಣ ಮತ್ತು ಇನ್ನೊಬ್ಬ ಶಂಕಿತ ವ್ಯಕ್ತಿ ನಿಧನರಾದ ನಂತರ ಧನಂಜಯ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮತ್ತೊಂದು ಅರ್ಜಿಯನ್ನು ಸಲ್ಲಿಸಿ, ಎರಡನೇ ಬಾರಿಗೆ ಪ್ರಯೋಜನಗಳನ್ನು ಪಡೆಯಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.
ಇನ್ನು ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣ’ಕ್ಕೆ ಮೇ ತಿಂಗಳಲ್ಲಿ ಬಂದ ಅರ್ಜಿಗಳನ್ನು ಪರಿಶೀಲನೆ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ. ಆದರೆ, ಈ ಅಕ್ರಮದ ಹಿಂದೆ ಯಾರ ಕೈವಾಡ ಇದೆ ಎಂಬುದನ್ನು ಪತ್ತೆ ಮಾಡಲು ಸಾಧ್ಯವಾಗಲಿರಲಿಲ್ಲ. ನವೆಂಬರ್ 5ರಂದು ಆರೋಪಿ ಧನಂಜಯ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಗೆ ನಕಲಿ ಅರ್ಜಿಗಳಲ್ಲಿ ಒಂದಕ್ಕೆ ಪರಿಹಾರ ಬಿಡುಗಡೆ ಮಾಡಲು ಯಾಕೆ ವಿಳಂಬವಾಗಿದೆ ಎಂದು ವಿಚಾರಿಸಲು ಬಂದಾಗ ಈ ಪ್ರಕರಣದ ಹಿಂದೆ ಧನಂಜಯ ಇರುವ ಬಗ್ಗೆ ತಿಳಿದು ಬಂದಿದೆ. ಅಧಿಕಾರಿಗಳು ಅವರನ್ನು ಈ ಬಗ್ಗೆ ಕೇಳಿದಾಗ ಸತ್ಯಾಂಶ ಹೊರಬಿದ್ದಿದೆ.







