Bengaluru | ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ

ಸಾಂದರ್ಭಿಕ ಚಿತ್ರ
ಬೆಂಗಳೂರು: ಇಲ್ಲಿನ ರಾಜಾಜಿನಗರ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಐವತ್ತು ವರ್ಷದ ಮಹಿಳೆಯೊಬ್ಬರು ವಿದ್ಯುತ್ ಪ್ರವಹಿಸುತ್ತಿದ್ದ ರೈಲ್ವೆ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ನಡೆದಿದ್ದು, ಭದ್ರತಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಮಹಿಳೆಯು ಬದುಕುಳಿದ್ದಾರೆ.
ಹಸಿರು ಬಣ್ಣದ ಮಾರ್ಗದ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಮಧ್ಯಾಹ್ನ ಸುಮಾರು 12:25ರ ಸುಮಾರಿಗೆ ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ಮೆಟ್ರೋ ಹಳಿಗೆ ಹಾರಿದ್ದಾರೆ. ಕೂಡಲೇ ನಿಲ್ದಾಣದ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿಯ ಕಾರ್ಯಪ್ರವೃತ್ತರಾಗಿ ಮಹಿಳೆಯನ್ನು ರಕ್ಷಿಸಿದ್ದಾರೆ.
ಮಹಿಳೆ ಹಳಿಗೆ ಹಾರುತ್ತಿದ್ದಂತೆ ನಿಲ್ದಾಣದ ನಿಯಂತ್ರಕರು ಮತ್ತು ಭದ್ರತಾ ಸಿಬ್ಬಂದಿ ನಿಗದಿತ ತುರ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ಹಳಿಯ ಮೇಲಿದ್ದ ಮಹಿಳೆಯನ್ನು ಅತ್ಯಂತ ಜಾಗರೂಕತೆಯಿಂದ, ಯಾವುದೇ ಗಾಯಗಳು ಆಗದಂತೆ ಸುರಕ್ಷಿತವಾಗಿ ಮೇಲಕ್ಕೆ ಎತ್ತಿದರು.
ಈ ಆಕಸ್ಮಿಕ ಘಟನೆಯ ಪರಿಣಾಮವಾಗಿ ಹಸಿರು ಬಣ್ಣದ ಮಾರ್ಗದ ಮೆಟ್ರೋ ರೈಲು ಸಂಚಾರವು ಸುಮಾರು 10 ನಿಮಿಷಗಳ ಕಾಲ ವಿಳಂಬಗೊಂಡಿತು. ಸಿಬ್ಬಂದಿಯು ಹಳಿ ಪ್ರದೇಶವನ್ನು ಸಂಪೂರ್ಣವಾಗಿ ತೆರವುಗೊಳಿಸಿ, ರೈಲು ಸಂಚಾರಕ್ಕೆ ನಿಗದಿತ ಎಲ್ಲ ಸುರಕ್ಷತಾ ನಿಯಮಗಳನ್ನು ಪೂರ್ಣಗೊಳಿಸಿದ್ದಾರೆ. ಮಧ್ಯಾಹ್ನ 12:34 ಗಂಟೆಗೆ ಮೆಟ್ರೋ ರೈಲು ಸಂಚಾರವನ್ನು ಎಂದಿನಂತೆ ಪುನರಾರಂಭಿಸಲಾಯಿತು. ಸದ್ಯ ಮಹಿಳೆಯು ಸುರಕ್ಷಿತವಾಗಿದ್ದಾರೆ ಎಂದು ಬಿಎಂಆರ್ಸಿಎಲ್ನ ಆಧಿಕಾರಿಗಳು ಹೇಳಿದ್ದಾರೆ.






