ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಪುನೀತ್ ಕೆರೆಹಳ್ಳಿ
ಬೆಂಗಳೂರು: ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಸಂಬಂಧ ಹಿಂದುತ್ವ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ ಇಲ್ಲಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶ್ವಸಂಸ್ಥೆಯ ನಿರಾಶ್ರಿತರ ಏಜೆನ್ಸಿಯು(ಯುಎನ್ಎಚ್ಸಿಆರ್) ನೀಡುವ ನಿರಾಶ್ರಿತರ ಗುರುತಿನ ಚೀಟಿಯನ್ನು ಪಡೆದಿದ್ದ ಮ್ಯಾನ್ಮಾರ್ ಮೂಲದ ಜಹಂಗೀರ್ ಆಲಂ ಅವರು, ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಹಲವು ವರ್ಷಗಳಿಂದ ನಗರದ ಕಗ್ಗಲಿಪುರದಲ್ಲಿ ವಾಸವಾಗಿದ್ದಾರೆ. ಜಹಂಗೀರ್ ಆಲಂ ಅವರು ನಾಯಂಡಹಳ್ಳಿ, ಬನಶಂಕರಿ, ಚನ್ನಮ್ಮನಕೆರೆ ಅಚ್ಚುಕಟ್ಟು ಭಾಗದಲ್ಲಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದರು.
ಡಿ.3ರಂದು ರಾತ್ರಿ ಚನ್ನಮ್ಮನಕೆರೆ ಅಚ್ಚುಕಟ್ಟು ಭಾಗದಲ್ಲಿ ಚಿಂದಿ ಆಯುತ್ತಿದ್ದಾಗ ಪುನೀತ್ ಕೆರೆಹಳ್ಳಿ ಮತ್ತು ಸಹಚರರು ಅಲ್ಲಿಗೆ ಬಂದು ಜಹಂಗೀರ್ ಆಲಂಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ಬಾಂಗ್ಲಾ ನುಸುಳುಕೋರನೆಂದು ಜಹಂಗೀರ್ ಆಲಂರ ಶರ್ಟ್ನ ಕತ್ತಿನ ಪಟ್ಟಿ ಹಿಡಿದು ಎಳೆದಾಡಿ, ಕಪಾಳ ಮೋಕ್ಷ ಮಾಡಿದ್ದಾರೆ. ಅಲ್ಲದೆ, ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ವರದಿಯಾಗಿದೆ.
ಹಲ್ಲೆಗೆ ಒಳಗಾಗಿರುವ ಜಹಂಗೀರ್ ಆಲಂ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪುನೀತ್ ಕೆರೆಹಳ್ಳಿ ಮತ್ತು ಆತನ ಮೂವರು ಸಹಚರರ ವಿರುದ್ಧ ಪ್ರಕರಣ ದಾಖಲಿಸಿ, ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.







