ಚುನಾವಣಾ ವ್ಯವಸ್ಥೆ ಹಾಳಾದರೆ ದಲಿತರಿಗೆ ಅಪಾಯ : ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು : ಕೇಂದ್ರ ಸರಕಾರವೂ ಪದೇ ಪದೇ ಚುನಾವಣೆ ವ್ಯವಸ್ಥೆಯನ್ನು ಹಾಳು ಮಾಡಲು ಮುಂದಾಗುತ್ತಿದೆ. ಒಂದು ವೇಳೆ ಇದರಲ್ಲಿ ಯಶಸ್ಸು ಕಂಡರೆ ದಲಿತರು ಸೇರಿದಂತೆ ಸಮಾಜದ ಕೆಳಸ್ತರು ಅಪಾಯಕ್ಕೆ ಸಿಲುಕುತ್ತಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ಕೇಂದ್ರ ಸರಕಾರ ಚುನಾವಣಾ ವ್ಯವಸ್ಥೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ. ಈ ಮೂಲಕ ಅಧಿಕಾರದಲ್ಲಿ ಶಾಶ್ವತವಾಗಿ ಉಳಿಯಲು ಯತ್ನಿಸುತ್ತಿದೆ. ಇದು ಬಹಳ ಅಪಾಯಕಾರಿ. ಇದರ ಪರಿಣಾಮ ಮೊದಲು ಬೀರುವುದೇ ಸಮಾಜದ ಕೆಳಸ್ತರದಲ್ಲಿರುವವರ ಮೇಲೆ. ಅದರಲ್ಲೂ, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಇದರಿಂದ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಇನ್ನೊಂದೆಡೆ, ಮೀಸಲಾತಿ ಏಕೆ ಎಂಬ ಅಸಂಬದ್ಧ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಐದು ಸಾವಿರ ವರ್ಷಗಳಿಂದ ತುಳಿತಕ್ಕೆ ಒಳಗಾದವರನ್ನು ನಾವು ಮೇಲೆತ್ತಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಮೀಸಲಾತಿ ವ್ಯವಸ್ಥೆಯನ್ನು ತಂದರೇ ವಿನಃ ಬೇರೆ ಯಾವುದೇ ಕಾರಣಕ್ಕಲ್ಲ. ಶೋಷಿತ ಸಮುದಾಯಗಳು ಮುಖ್ಯವಾಹಿನಿಗೆ ಬರಬಾರದೆ? ಎಂದ ಪ್ರಶ್ನಿಸಿದ ಅವರು, ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಹೋಗುವ ಯಾರೂ ಅಧಿಕಾರದಲ್ಲಿ ಉಳಿಯುವುದಿಲ್ಲ. ಸಂವಿಧಾನ ರಚನೆಯಾಗಿ 80 ವರ್ಷಗಳೇ ಕಳೆದರೂ ಇಂದು ಅದರ ಪ್ರಖರತೆ ಹಾಗೆಯೇ ಉಳಿದಿದೆ. ಹಾಗಾಗಿ ಸಂವಿಧಾನಕ್ಕೆ ಧಕ್ಕೆ ತರಲು ಯತ್ನಿಸುತ್ತಿರುವವರನ್ನು ಅಧಿಕಾರದಿಂದ ದೂರವುಳಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕಿದೆ ಎಂದರು.
ಪ್ರಪಂಚದಲ್ಲಿ 90 ಪ್ರಜಾಪ್ರಭುತ್ವದ ದೇಶಗಳಿವೆ. ಇನ್ನುಳಿದ ದೇಶಗಳಲ್ಲಿ ನಡೆಯುವಂತಹ ವಿದ್ಯಮಾನಗಳೇ ಬೇರೆ, ಆಡಳಿತವೇ ಬೇರೆ. ನಮ್ಮ ನೆರೆಯ ದೇಶಗಳಾದ ಶ್ರೀಲಂಕಾ, ಬಾಂಗ್ಲಾದೇಶ, ಪಾಕಿಸ್ತಾನ, ನೇಪಾಳಗಳಲ್ಲಿ ಏನೇನು ನಡೆಯಿತು ಎಂಬುದನ್ನು ಗಮನಿಸಿದ್ದೇವೆ. ಆದರೆ ನಮ್ಮ ದೇಶದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹಾಕಿಕೊಟ್ಟಿರುವ ಅಡಿಪಾಯ ಭದ್ರವಾಗಿರುವುದರಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುವಂತಹ ಬೆಳವಣಿಗೆಗೆ ಗೆಲುವು ಸಿಕ್ಕಿಲ್ಲ ಎಂದು ಅವರು ಹೇಳಿದರು.
ದೇಶದ ಜನಸಂಖ್ಯೆಯಲ್ಲಿ ಶೇ.65ರಷ್ಟು ಯುವ ಸಮುದಾಯವಿದೆ. 16ರಿಂದ35 ವಯೋಮಾನದ ಸಮುದಾಯವಿದು. ಇವರು ಮುಂದಿನ ಭವಿಷ್ಯವನ್ನು ನಿರ್ಮಿಸುವವರು. ಈಗ ಜೆನ್ಝೀ ಮುನ್ನೆಲೆ ಬಂದಿದೆ. ಇವರಿಗೆ ನಾವು ಪ್ರಾಮುಖ್ಯತೆ ನೀಡಬೇಕಿದೆ. ಉತ್ತಮ ರಾಜಕೀಯ ವ್ಯವಸ್ಥೆಯನ್ನು ಅವರಿಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಅವರಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಧಾರೆಯೆರೆಯಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಸರಕಾರ ಸಾಕಷ್ಟು ಕೆಲಸಗಳನ್ನು ನಿರಂತರವಾಗಿ ನಡೆಸುತ್ತ ಬಂದಿದೆ. ಪ್ರತಿಯೊಂದು ಶಾಲಾ-ಕಾಲೇಜುಗಳಿಗೆ, ಮನೆಗಳಿಗೆ ಸಂವಿಧಾನದ ಪೀಠಿಕೆಯನ್ನು ತಲುಪಿಸಿದ್ದೇವೆ. ನಿರಂತರವಾಗಿ ಸಂವಿಧಾನದ ಪೀಠಿಕೆಯನ್ನು ಮನನ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಪ್ರಾಮುಖ್ಯತೆಯನ್ನು ಅರ್ಥೈಸಿಕೊಳ್ಳುವಂತೆ ಮಾಡುತ್ತಿದ್ದೇವೆ ಎಂದು ಪರಮೇಶ್ವರ್ ಹೇಳಿದರು.






