ಎಸ್ಐಆರ್ ಪ್ರಜಾಪ್ರಭುತ್ವದ ಮೇಲಿನ ಮೌನ ದಾಳಿ: ಮನ್ಸೂರ್ ಅಲಿ ಖಾನ್

ಬೆಂಗಳೂರು: ಭಾರತೀಯ ಚುನಾವಣಾ ಆಯೋಗವು ದೇಶದ ವಿವಿಧ ರಾಜ್ಯಗಳಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್)ಯು ಪ್ರಜಾಪ್ರಭುತ್ವದ ಮೇಲಿನ ಮೌನ ದಾಳಿಯಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಆರೋಪಿಸಿದರು.
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ದೇಶದ 12 ರಾಜ್ಯಗಳಲ್ಲಿ ಎಸ್ಐಆರ್ ನಡೆಸಲಾಗಿದೆ. ಎಸ್ಐಆರ್ ಪ್ರಕ್ರಿಯೆ ಕುರಿತು ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ)ಗಳಿಗೆ ಸೂಕ್ತ ತರಬೇತಿ ನೀಡದೆ, ತರಾತುರಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಮಾಡುವ ಉದ್ದೇಶವೇನು? ಎಂದು ಪ್ರಶ್ನಿಸಿದರು.
ಫಾರಂ ನಂ.7ರ ದುರುಪಯೋಗ: ಮತದಾರರ ಪಟ್ಟಿಯಲ್ಲಿರುವ ಹೆಸರಿನ ಬಗ್ಗೆ ಆಕ್ಷೇಪಣೆ ಹಾಗೂ ಇತರ ವ್ಯಕ್ತಿಯ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡುವಂತೆ ಫಾರಂ ನಂ.7 ಸಲ್ಲಿಸಿ ಕೋರಬಹುದು. ಆದರೆ, ಈ ಹಿಂದೆ ಒಬ್ಬ ವ್ಯಕ್ತಿ ಕೇವಲ 5 ಫಾರಂ ನಂ.7 ಸಲ್ಲಿಸಲು ಅವಕಾಶವಿತ್ತು. ಆದರೆ, ಈಗ ನಿಯಮಾವಳಿಗಳನ್ನು ಬದಲಾಯಿಸಿರುವುದರಿಂದ ಇದರ ದುರುಪಯೋಗ ಅತ್ಯಂತ ಅಪಾಯಕಾರಿಯಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಆಂಧ್ರಪ್ರದೇಶದಲ್ಲಿ ಒಬ್ಬ ವ್ಯಕ್ತಿ 70 ಹಾಗೂ ಕೇರಳದಲ್ಲಿ ಒಬ್ಬ ವ್ಯಕ್ತಿ 400 ಫಾರಂ.7 ಸಲ್ಲಿಕೆ ಮಾಡಿರುವುದು ಬೆಳಕಿಗೆ ಬಂದಿದೆ. ಎಸ್ಐಆರ್ ಪ್ರಕ್ರಿಯೆ ಕುರಿತು ಬಿಎಲ್ಒಗಳಿಗೆ ಸಾಕಷ್ಟು ಗೊಂದಲಗಳಿವೆ. ಅವರ ಮೇಲೆ ಸಾಕಷ್ಟು ಒತ್ತಡಗಳನ್ನು ಹೇರಲಾಗುತ್ತಿದೆ. ಹಲವು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನಾವು ಕಂಡಿದ್ದೇವೆ ಎಂದು ಮನ್ಸೂರ್ ಅಲಿ ಖಾನ್ ಹೇಳಿದರು.
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಿಎಲ್ಒಗಳ ಮೇಲೆ ಒತ್ತಡ ಹೇರಿ ಅಲ್ಪಸಂಖ್ಯಾತರು, ದಲಿತರು, ಆದಿವಾಸಿಗಳ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಬಿಹಾರದಲ್ಲಿ 85 ಲಕ್ಷ ಮತದಾರರ ಹೆಸರನ್ನು ಕೈ ಬಿಡಲಾಯಿತು. ಅದೇ ರೀತಿ ತಮಿಳುನಾಡಿನಲ್ಲೂ ಲಕ್ಷಾಂತರ ಮತದಾರರ ಹೆಸರನ್ನು ಕೈ ಬಿಡಲಾಯಿತು ಎಂದು ಅವರು ತಿಳಿಸಿದರು.
ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ಎಸ್ಐಆರ್ ನಡೆಯುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಕಳೆದ ಒಂದೂವರೆ ವರ್ಷದಿಂದ ಭಾರತೀಯ ಚುನಾವಣಾ ಆಯೋಗವು ವಿಪಕ್ಷಗಳೊಂದಿಗೆ ನಡೆದುಕೊಳ್ಳುತ್ತಿರುವ ರೀತಿ ಇದಕ್ಕೆ ಪುಷ್ಠಿ ನೀಡುವಂತಿದೆ. ಮತಗಳ್ಳತನ ಕುರಿತು ನಾವು ನೀಡಿದ ದಾಖಲೆಗಳನ್ನು ಪರಿಗಣಿಸುವುದಿಲ್ಲ. ನಮ್ಮ ಯಾವುದೆ ಪ್ರಶ್ನೆಗಳಿಗೂ ಉತ್ತರಿಸುವುದಿಲ್ಲ ಎಂದು ಮನ್ಸೂರ್ ಅಲಿಖಾನ್ ಹೇಳೀದರು.
ಎಸ್ಐಆರ್ ಗಿಂತ ಮುಂಚಿತವಾಗಿ 2002ನೆ ಸಾಲಿನ ಮತದಾರರ ಪಟ್ಟಿಯ ಆಧಾರದಲ್ಲಿ ಮ್ಯಾಪಿಂಗ್ ಮಾಡಲಾಗುತ್ತಿದೆ. ರಾಜ್ಯದಲ್ಲಿ ಈವರೆಗೆ ಶೇ.65ರಷ್ಟು ಮತದಾರರ ಪಟ್ಟಿಯ ಮ್ಯಾಪಿಂಗ್ ಮುಗಿದಿದೆ ಎಂಬ ಮಾಹಿತಿಯಿದೆ. ಪ್ರತಿಯೊಬ್ಬ ಮತದಾರರು ತನ್ನ ಅಸ್ತಿತ್ವವನ್ನು ಸಾಬೀತುಪಡಿಸಬೇಕಿದೆ. ಈ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ವಿಶೇಷವಾಗಿ ವಲಸೆ ಕಾರ್ಮಿಕರು, ವಿವಾಹಿತ ಮಹಿಳೆಯರು, ಆದಿವಾಸಿಗಳು ಸಮಸ್ಯೆಗಳನ್ನು ಎದುರಿಸುವಂತಾಗಿದೆ ಎಂದು ಮನ್ಸೂರ್ ಅಲಿ ಖಾನ್ ಹೇಳಿದರು.
ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ವಾಜಿದ್ ಮಾತನಾಡಿ, ನಮ್ಮ ರಾಜ್ಯದಲ್ಲಿಯೂ ಎಸ್ಐಆರ್ ಪ್ರಕ್ರಿಯೆ ಶೀಘ್ರವೇ ಆರಂಭವಾಗುವ ಸಾಧ್ಯತೆಗಳಿವೆ. ಆದುದರಿಂದ, ಪ್ರತಿಯೊಬ್ಬ ಮತದಾರರು ಭಾರತೀಯ ಚುನಾವಣಾ ಆಯೋಗ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು.
ವಿಧಾನಸಭಾ ಕ್ಷೇತ್ರ, ಮತಗಟ್ಟೆ ಹಾಗೂ ಮತದಾರರ ಪಟ್ಟಿಯಲ್ಲಿನ ಕ್ರಮ ಸಂಖ್ಯೆಯನ್ನು ಬರೆದುಕೊಂಡು ಬಿಎಲ್ಒಗಳಿಗೆ ನೀಡಿ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು. ಸರಕಾರ ನೀಡಿರುವ ಗುರುತಿನ ಚೀಟಿಗಳು, ಶೈಕ್ಷಣಿಕ ದಾಖಲೆಗಳಲ್ಲಿ ನಮ್ಮ ಹೆಸರು ಸ್ಪಷ್ಟವಾಗಿರುವಂತೆ ನೋಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.






